ಕನ್ನಡಪ್ರಭ ವಾರ್ತೆ ಬೆಂಗಳೂರು
ನಗರದಲ್ಲಿ 3 ಕಡೆ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಸೆಕ್ಯುರಿಟಿ ಗಾರ್ಡ್ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ರಸ್ತೆ ದಾಟುತ್ತಿದ್ದ ಸೆಕ್ಯುರಿಟಿ ಗಾರ್ಡ್ಗೆ ವಾಟರ್ ಟ್ಯಾಂಕ್ ಡಿಕ್ಕಿ ಹೊಡೆದ ಪರಿಣಾಮ ಮೃತಟ್ಟಿರುವ ಘಟನೆ ವೈಟ್ಫೀಲ್ಡ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ನೇಪಾಳ ಮೂಲದ ಕಪೇಂದ್ರ ಮಾಜೆ (39) ಮೃತ ವ್ಯಕ್ತಿ. ವರ್ತೂರಿನಲ್ಲಿ ವಾಸವಾಗಿದ್ದ ಕಪೇಂದ್ರ ರಾತ್ರಿ ಕೆಲಸ ಮುಗಿಸಿಕೊಂಡು ವರ್ತೂರು-ಗುಂಜೂರು ಮುಖ್ಯರಸ್ತೆಯ ಗಾಂಧಿ ಸರ್ಕಲ್ ಹತ್ತಿರ ಭಾನುವಾರ ರಾತ್ರಿ ರಸ್ತೆ ದಾಟುತ್ತಿದ್ದಾಗ ವರ್ತೂರು ಕಾಲೇಜ್ ಕಡೆಗೆ ಹೋಗುತ್ತಿದ್ದ ವಾಟರ್ ಟ್ಯಾಂಕ್ ಇವರಿಗೆ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಅವರ ಮೇಲೆಯೇ ಚಕ್ರ ಹರಿದ ಪರಿಣಾಮ ಗಂಭೀರ ಗಾಯಗೊಂಡರು. ಇವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ. ಈ ಸಂಬಂಧ ವೈಟ್ಫೀಲ್ಡ್ ಸಂಚಾರ ಠಾಣೆ ಪೊಲೀಸರು ವಾಟರ್ ಟ್ಯಾಂಕರ್ ವಾಹನದ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಖಾಸಗಿ ಕಂಪನಿ ಉದ್ಯೋಗಿ ಸಾವು:ಟಿ.ಟಿ ವಾಹನವೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಕಂಪನಿ ಉದ್ಯೋಗಿ ಮೃತಪಟ್ಟಿರುವ ಘಟನೆ ಪೀಣ್ಯ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಬೆಳಗಿನ ಜಾವ ಸಂಭವಿಸಿದೆ. ಮಂಜುನಾಥನಗರದ ನಿವಾಸಿ ಗೌರಿಶಂಕರ (34) ಮೃತಪಟ್ಟ ಬೈಕ್ ಸವಾರ. ಬೆಳಗಿನ ಜಾವ 4.45 ರ ಸುಮಾರಿಗೆ ಗೌರಿಶಂಕರ ಬೈಕ್ನಲ್ಲಿ ಹೆಚ್ಎಂಟಿ ಲೇಔಟ್ನ ಸಪ್ನ ಸೂಪರ್ ಮಾರ್ಕೆಟ್ ಸರ್ಕಲ್ ಬಳಿ ಹೋಗುತ್ತಿದ್ದಾಗ ಅತಿ ವೇಗವಾಗಿ ಬಂದ ಟಿ.ಟಿ ವಾಹನ ಡಿಕ್ಕಿ ಹೊಡೆದು ಬೈಕನ್ನು ಸ್ವಲ್ಪ ದೂರ ಎಳೆದೊಯ್ದ ಪರಿಣಾಮ ಅವರು ಗಂಭೀರ ಗಾಯಗೊಂಡರು. ಸ್ಥಳೀಯರು ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ. ಪೀಣ್ಯ ಸಂಚಾರ ಠಾಣೆ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮ ತನಿಖೆ ಕೈಗೊಂಡಿದ್ದಾರೆ.
ಸ್ವಯಂ ಅಪಘಾತ:
ಅತಿ ವೇಗವಾಗಿ ಹೋಗುತ್ತಿದ್ದ ಸ್ಕೂಟರ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ಕೆ.ಆರ್ ಪುರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಕನ್ನಮಂಗಲ ನಿವಾಸಿ ರಾಜೇಂದ್ರ (60) ಮೃತಪಟ್ಟ ಸ್ಕೂಟರ್ ಸವಾರ. ಬೆಳಗ್ಗೆ 8 ಗಂಟೆ ಸುಮಾರಿಗೆ ರಾಜೇಂದ್ರ ಅವರು ಸ್ಕೂಟರ್ನಲ್ಲಿ ಹೋಗುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ಆವಲಹಳ್ಳಿ-ಸ್ಕೈವಾಕ್ ಬಳಿ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಕೆಳಗೆ ಬಿದ್ದು, ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಕೆ.ಆರ್ ಪುರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.