ಕನ್ನಡಪ್ರಭ ವಾರ್ತೆ ಬೆಂಗಳೂರು

ಸಾರಿಗೆ ನೌಕರರಿಗೆ ಸರ್ಕಾರಿ ನೌಕರರಂತೆ ಸಮಾನ ವೇತನ ನೀಡಬೇಕು ಎಂದು ಆಗ್ರಹಿಸಿ ‘ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ಸಂಘಟನೆಗಳ ಒಕ್ಕೂಟ’ದ ನೇತೃತ್ವದಲ್ಲಿ ನೌಕರರು ಸೋಮವಾರ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.

ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಲ್ಲಿ ಪ್ರತಿ ದಿನ ಒಂದು ಕೋಟಿಗೂ ಅಧಿಕ ಪ್ರಯಾಣಿಕರಿಗೆ ಸೇವೆ ನೀಡಲು 1.15 ಲಕ್ಷಕ್ಕೂ ಅಧಿಕ ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದೇವೆ. ಸರ್ಕಾರಿ ನೌಕರರು ಹಾಗೂ ನಿಗಮ-ಮಂಡಳಿಗಳ ನೌಕರರಿಗೆ ಹೋಲಿಸಿದರೆ ನಮ್ಮ ವೇತನ ಕಡಿಮೆಯಾಗಿದ್ದೂ ಅಧಿಕ ಸೌಲಭ್ಯಗಳೂ ಇಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಶಕ್ತಿ ಯೋಜನೆಯು ಜನಪ್ರಿಯವಾಗಲು ಕಾರಣಕರ್ತರಾಗಿರುವ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಈ ಸಂದರ್ಭದಲ್ಲಿ ಒತ್ತಾಯಿಸಲಾಯಿತು.