ಸಾರಾಂಶ
ತಿರುವನಂತಪುರಂ: ನರೇಂದ್ರ ಮೋದಿ ಸರ್ಕಾರದ ಹೊಸ ಸಚಿವ ಸಂಪುಟ ರಚನೆ ಬೆನ್ನಲ್ಲೇ ತಮ್ಮ 18 ವರ್ಷಗಳ ಸಾರ್ವಜನಿಕ ಸೇವಾ ಜೀವನ ಅಂತ್ಯವಾಗಿದೆ ಎಂದು ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ ರಾಜೀವ್, ‘ಕರ್ನಾಟಕದಿಂದ 18 ವರ್ಷಗಳ ಕಾಲ ರಾಜ್ಯಸಭಾ ಸದಸ್ಯನಾಗಿ ಸಾರ್ವಜನಿಕ ಸೇವೆ ಮಾಡಿದ್ದೇನೆ. ಕಳೆದ ಮೂರು ವರ್ಷದಿಂದ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸೇವೆ ಮಾಡುವ ಅವಕಾಶ ಲಭಿಸಿದೆ. ಆದರೆ ನನ್ನ ಸಾರ್ವಜನಿಕ ಸೇವಾ ಜೀವನ ಈ ರೀತಿ ಸೋಲಿನೊಂದಿಗೆ ಅಂತ್ಯವಾಗುತ್ತದೆ ಎಂದು ಭಾವಿಸಿರಲಿಲ್ಲ’ ಎಂದು ಮನದಾಳ ಹಂಚಿಕೊಂಡಿದ್ದಾರೆ.
ಅಲ್ಲದೆ ಇನ್ನು ಮುಂದೆಯೂ ಸಹ ಬಿಜೆಪಿಯ ಕಾರ್ಯಕರ್ತರಾಗಿ ಪಕ್ಷದ ಏಳಿಗೆಗಾಗಿ ಶ್ರಮಿಸುವೆ. ಇಲ್ಲಿಯವರೆಗೂ ನನಗೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ರಾಜೀವ್ ಧನ್ಯವಾದ ಅರ್ಪಿಸಿದ್ದಾರೆ.
2024ರ ಲೋಕಸಭಾ ಚುನಾವಣೆಯಲ್ಲಿ ಕೇರಳದ ತಿರುವನಂತರಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಶಿ ತರೂರ್ ವಿರುದ್ಧ ರಾಜೀವ್ ಚಂದ್ರಶೇಖರ್ ಸೋಲನ್ನಪ್ಪಿದ್ದರು.