ಅಗಲಿದ ಧೀಮಂತ ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಅವರ ಅಂತಿಮ ದರ್ಶನಕ್ಕೆ ಗಣ್ಯರ ದಂಡು

| Published : Dec 28 2024, 12:46 AM IST / Updated: Dec 28 2024, 04:26 AM IST

ಸಾರಾಂಶ

ವಯೋಸಹಜ ಅನಾರೋಗ್ಯದಿಂದ ಮೃತಪಟ್ಟ ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಅವರ ಅಂತಿಮ ದರ್ಶನಕ್ಕೆ ಶುಕ್ರವಾರ ಗಣ್ಯರ ದಂಡೇ ಹರಿದುಬಂದಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆದಿಯಾಗಿ ಗಣ್ಯರು ಅಂತಿಮ ದರ್ಶನ ಪಡೆದಿದ್ದಾರೆ.

 ನವದೆಹಲಿ : ವಯೋಸಹಜ ಅನಾರೋಗ್ಯದಿಂದ ಮೃತಪಟ್ಟ ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಅವರ ಅಂತಿಮ ದರ್ಶನಕ್ಕೆ ಶುಕ್ರವಾರ ಗಣ್ಯರ ದಂಡೇ ಹರಿದುಬಂದಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆದಿಯಾಗಿ ಗಣ್ಯರು ಅಂತಿಮ ದರ್ಶನ ಪಡೆದಿದ್ದಾರೆ. 

ಏಮ್ಸ್‌ನಲ್ಲಿ ಮೃತಪಟ್ಟ ಡಾ.ಸಿಂಗ್ ಅವರ ಪಾರ್ಥಿವ ಶರೀರವನ್ನು ಶುಕ್ರವಾರ ಮುಂಜಾನೆ 3 ಗಂಟೆಗೆ ದೆಹಲಿಯ ಮೋತಿಲಾಲ್‌ ನೆಹರೂ ರಸ್ತೆಯಲ್ಲಿರುವ ಅವರ ನಿವಾಸಕ್ಕೆ ಕರೆತರಲಾಯಿತು. ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಸೇರಿ ಹಲವು ಗಣ್ಯರು ಡಾ.ಸಿಂಗ್‌ ಅವರ ನಿವಾಸಕ್ಕೆ ತೆರಳಿ ಹೂಗುಚ್ಛ ಇರಿಸಿ ಅಂತಿಮ ದರ್ಶನ ಪಡೆದರು. 

ಈ ವೇ‍ಳೆ ಪತ್ನಿ ಗುರುಶರಣ್ ಸಿಂಗ್‌ ಸೇರಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್‌ ಧನಕರ್‌, ಕೇಂದ್ರ ಸಚಿವರಾದ ಅಮಿತ್‌ ಶಾ ಮತ್ತು ರಾಜನಾಥ್ ಸಿಂಗ್‌, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ್‌ ಗಾಂಧಿ ವಾದ್ರಾ, ಸಿಎಂಗಳಾದ ಚಂದ್ರಬಾಬು ನಾಯ್ಡು, ಎಂ.ಕೆ. ಸ್ಟಾಲಿನ್‌ ಮತ್ತಿತರರು ಡಾ.ಸಿಂಗ್‌ ಅವರ ಅಂತಿಮ ದರ್ಶನ ಮಾಡಿದರು.

ಡಾ.ಸಿಂಗ್‌ ಅವರ ನಿಧನಕ್ಕೆ ದೇಶಾದ್ಯಂತ ಗಣ್ಯರು ಕಂಬನಿ ಮಿಡಿದಿದ್ದು, ಪ್ರಧಾನಿ ಮೋದಿ ನೇತೃತ್ವದ ಕ್ಯಾಬಿನೆಟ್‌ ಸಭೆಯಲ್ಲೂ ಎರಡು ನಿಮಿಷಗಳ ಮೌನ ಆಚರಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.