ಸಾರಾಂಶ
ಕೃಷಿ ವಿಕಾಸ ಯೋಜನೆಯಡಿ ರಾಜ್ಯಕ್ಕೆ ಕೇಂದ್ರದಿಂದ ₹235 ಕೋಟಿ ಬಿಡುಗಡೆ ಮಾಡಿರುವುದಾಗಿ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮಾಹಿತಿ ನೀಡಿದ್ದಾರೆ.
ನವದೆಹಲಿ: ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಕರ್ನಾಟಕ ಸರ್ಕಾರಕ್ಕೆ ಮೂರನೇ ಕಂತಿನ ಮೊತ್ತವಾದ 235.14 ಕೋಟಿ ರು.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಕೃಷಿ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಮಾಹಿತಿ ನೀಡಿದ್ದಾರೆ.
ಈ ಹಣವನ್ನು ಕೃಷಿ ವಲಯದ ಮೂಲಸೌಕರ್ಯ ಅಭಿವೃದ್ಧಿಗೆ, ಗೋದಾಮುಗಳ ನಿರ್ಮಾಣ, ಜಲ ಸಂಗ್ರಹಾಗಾರಗಳ ನಿರ್ಮಾಣ, ಟ್ರ್ಯಾಕ್ಟರ್, ಪವರ್ ಟಿಲ್ಲರ್, ಡ್ರೋನ್ಗಳ ಖರೀದಿಗೆ, ಸಮಗ್ರ ಕೃಷಿ ಉತ್ತೇಜನ, ಮಣ್ಣಿನ ಫಲವತ್ತತೆ ಪರೀಕ್ಷೆ ಮೊದಲಾದ ಯೋಜನೆಗಳಿಗೆ ಬಳಸಿಕೊಳ್ಳಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.
ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ 2023-24ನೇ ಸಾಲಿಗೆ ಕರ್ನಾಟಕಕ್ಕೆ ಒಟ್ಟಾರೆ 761. 89 ಕೋಟಿ ರು.ನಿಗದಿ ಮಾಡಲಾಗಿದೆ. ಈ ಪೈಕಿ ಈವರೆಗೆ 526.75 ಕೋಟಿ ರು. ಹಣ ಬಿಡುಗಡೆ ಮಾಡಲಾಗಿದೆ.
ಈ ಹಣವನ್ನು ಪೂರ್ಣವಾಗಿ ಬಳಕೆ ಮಾಡಿದ ಬಳಿಕ ಬಾಕಿ ಮೊತ್ತ ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.