ಸಾರಾಂಶ
ನವದೆಹಲಿ: ಕಾಂಗ್ರೆಸ್ ಪ್ರಣಾಳಿಕೆಯಲ್ಲಿರುವ ಅಂಶಗಳನ್ನು ಚರ್ಚಿಸಿ ಸ್ಪಷ್ಟೀಕರಣ ನೀಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಸಮಯಾವಕಾಶ ನೀಡಬೇಕೆಂದು ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ‘ಪ್ರಧಾನಿ ಮೋದಿ ಮುಸ್ಲಿಮರ ಕುರಿತಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಆಕ್ಷೇಪಾರ್ಹ ಅಂಶವಿದೆ ಎಂದು ದ್ವೇಷ ಭಾಷಣ ಮಾಡಿದ್ದಾರೆ. ಆದರೆ ನಮ್ಮ ಪ್ರಣಾಳಿಕೆಯಲ್ಲಿ ಹಿಂದೂ ಮತ್ತು ಮುಸ್ಲಿಂ ಎಂಬ ಪದಗಳೇ ಇಲ್ಲ. ಈ ಕುರಿತು ಪ್ರಧಾನಿಗೆ ಅರಿಕೆ ಮಾಡಿಕೊಡಲು ಅವರು ನಮಗೆ ಅಪಾಯಿಂಟ್ಮೆಂಟ್ ನೀಡಬೇಕು’ ಎಂದು ತಿಳಿಸಿದರು.
ಮೋದಿ ವಿರುದ್ಧ ಆಯೋಗಕ್ಕೆ ಕಾಂಗ್ರೆಸ್ ದೂರುನವದೆಹಲಿ: ರಾಜಸ್ಥಾನದ ರ್ಯಾಲಿ ವೇಳೆ ನೀಡಿದ ಹೇಳಿಕೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿದೆ.
ಬನ್ಸ್ವಾರಾ ರ್ಯಾಲಿ ವೇಳೆ ಮೋದಿ ಅವರು ಒಂದು ನಿರ್ದಿಷ್ಟ ಸಮುದಾಯ ಗುರಿಯಾಗಿಸಿಕೊಂಡು, ದ್ವೇಷಭರಿತ ಮತ್ತು ಪ್ರಚೋದನಕಾರಿ ಮಾತು ಆಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ನಾಯಕರ ನಿಯೋಗ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.ಪ್ರಧಾನಿ ಚುನಾವಣಾ ಆಯೋಗಕ್ಕೆ ಜವಾಬ್ದಾರರಾಗಿರುತ್ತಾರೆ. ಅವರ ಪಕ್ಷ ಮತ್ತು ಅವರಿಂದ ಈ ರೀತಿಯ ಲಜ್ಜೆಗೆಟ್ಟ ಹೇಳಿಕೆ ಬಂದಿರುವ ಬಗ್ಗೆ ಚುನಾವಣಾ ಆಯೋಗಕ್ಕೆ ಉತ್ತರ ನೀಡಲಿ’ ಎಂದು ಕಾಂಗ್ರೆಸ್ ಒತ್ತಾಯಿಸಿದೆ.