27 ಲಕ್ಷ ಪರಿಹಾರ ಪ್ರಕಟ । 11 ಆಸ್ಪತ್ರೆ ಸಿಬ್ಬಂದಿಗೆ ಗಾಯ

ಭುವನೇಶ್ವರ: ಒಡಿಶಾ ಸರ್ಕಾರಿ ಸ್ವಾಮ್ಯದ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿದ್ದ (ಐಸಿಯು) 10 ರೋಗಿಗಳು ಸಾವನ್ನಪ್ಪಿದ್ದು, ಆಸ್ಪತ್ರೆಯ 11 ಸಿಬ್ಬಂದಿ ಗಾಯಗೊಂಡಿದ್ದಾರೆ.

ಶಾರ್ಟ್‌ ಸರ್ಕಿಟ್‌ನಿಂದಾಗಿ ಸೋಮವಾರ ಬೆಳಗಿನ ಜಾವ 2.30ರಿಂದ 3 ಗಂಟೆಯ ನಡುವೆ ಐಸಿಯುದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿ ಆಸ್ಪತ್ರೆಗೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಅಷ್ಟರಲ್ಲಾಗಲೇ ಐಸಿಯು ಮತ್ತು ವಾರ್ಡ್‌ನಲ್ಲಿದ್ದ 23 ರೋಗಿಗಳ ಪೈಕಿ 10 ರೋಗಿಗಳು ಸಾವನ್ನಪ್ಪಿದ್ದಾರೆ. ಈ ಪೈಕಿ 7 ಜನರ ಬೆಂಕಿಯಿಂದ ಮತ್ತು ಇತರೆ ಮೂವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಘಟನೆ ಕುರಿತು ತನಿಖೆಗೆ ಸರ್ಕಾರ 6 ಜನರ ಸತ್ಯಶೋಧನಾ ತಂಡ ರಚಿಸಿದೆ.

₹27 ಲಕ್ಷ ಪರಿಹಾರ:

ಪ್ರಧಾನಿ ನರೇಂದ್ರ ಮೋದಿ ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರು. ಹಾಗೂ ಗಾಯಾಳುಗಳಿಗೆ 50,000 ರು. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಮುಖ್ಯಮಂತ್ರಿ ಮಾಝಿ ಸಹ ಮೃತರ ಕುಟುಂಬಕ್ಕೆ 25 ಲಕ್ಷ ರು. ಪರಿಹಾರ ಘೋಷಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್‌ ಸಂತಾಪ ಸೂಚಿಸಿದ್ದಾರೆ.