ಸಾಫ್ಟ್ವೇರ್ ರಫ್ತಿನಲ್ಲಿ ಶೇ.40 ಪಾಲು ರಾಜ್ಯದ್ದು, 1700 ಸ್ಟಾರ್ಟಪ್ಗಳಿಗೆ ಬೆಂಗಳೂರು ನೆಲೆಇದೀಗ ಕರ್ನಾಟಕವನ್ನು ಎಐ ನೇಟಿವ್ ರಾಜ್ಯವಾಗಿ ಮಾಡುವ ಗುರಿ ರಾಜ್ಯ ಸರ್ಕಾರದ್ದು: ಡಿಕೆಇದರ ಭಾಗವಾಗಿ ಸಾರ್ವಜನಿಕ ಸೇವೆ ವಿತರಣೆಯಲ್ಲಿ ಎಐ ತಂತ್ರಜ್ಞಾನಗಳ ಸಂಯೋಜನೆಎಐ-ಸಹಾಯದ ಬೋಧನೆ ಮೂಲಕ ಶಿಕ್ಷಣ ಕ್ಷೇತ್ರ, ರೋಗಗಳ ತ್ವರಿತ ಪತ್ತೆ, ಚಿಕಿತ್ಸೆಗೆ ಒತ್ತುಶಿಕ್ಷಣ ಸಂಸ್ಥೆ ಉದ್ಯಮ, ಸರ್ಕಾರದ ನಡುವೆ ಸಹಯೋಗಕ್ಕೆ ಎಐ ವಿಶ್ವವಿದ್ಯಾಲಯ ಸ್ಥಾಪನೆಕನ್ನಡಪ್ರಭ ವಾರ್ತೆ, ಬೆಂಗಳೂರು
ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (ಎಐ) ವಿಶ್ವವಿದ್ಯಾಲಯ ಸ್ಥಾಪನೆ ಮಾಡುವ ಜತೆಗೆ ಕರ್ನಾಟಕವನ್ನು ಎಐ ತಂತ್ರಜ್ಞಾನದ ಜಾಗತಿಕ ಕೇಂದ್ರವನ್ನಾಗಿ ರೂಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) ಮಂಗಳವಾರ ನಡೆದ ಗೂಗಲ್ ಐಓ ಕನೆಕ್ಟ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕರ್ನಾಟಕವನ್ನು ‘ಎಐ-ನೇಟಿವ್’ ರಾಜ್ಯವನ್ನಾಗಿ ರೂಪಿಸುವುದು ಮತ್ತು ಆಡಳಿತ ಹಾಗೂ ಸಾರ್ವಜನಿಕ ಸೇವೆಗಳ ವಿತರಣೆಯಲ್ಲಿ ಎಐ ತಂತ್ರಜ್ಞಾನವನ್ನು ಸಂಯೋಜಿಸುವ ಗುರಿ ಹೊಂದಿದ್ದೇವೆ. ಎಐ ಪ್ರತಿಭೆಗಳನ್ನು ಅಭಿವೃದ್ಧಿಪಡಿಸಲು, ಶಿಕ್ಷಣ ಸಂಸ್ಥೆ ಉದ್ಯಮ ಹಾಗೂ ಸರ್ಕಾರದ ನಡುವೆ ಸಹಯೋಗ ಬೆಳೆಸಲು ಕೃತಕ ಬುದ್ಧಿಮತ್ತೆ (ಎಐ) ವಿಶ್ವವಿದ್ಯಾಲಯವನ್ನು ಸ್ಥಾಪಿಸುವುದಾಗಿ ಹೇಳಿದರು.ಎಐ-ಸಹಾಯದ ಬೋಧನೆಯ ಮೂಲಕ ಶಿಕ್ಷಣ ಕ್ಷೇತ್ರ, ರೋಗಗಳ ತ್ವರಿತ ಪತ್ತೆ ಮತ್ತು ಚಿಕಿತ್ಸೆಗೆ ಪೂರಕವಾಗಿ ಆರೋಗ್ಯ ಕ್ಷೇತ್ರದಲ್ಲಿ, ರೈತರಿಗೆ ಎಐ-ಚಾಲಿತ ಸಲಹಾ ಸೇವೆಗಳ ಮೂಲಕ ಕೃಷಿ ಕ್ಷೇತ್ರದಲ್ಲಿ ಎಐ ಬಳಕೆಗೆ ಉತ್ತೇಜನ ನೀಡಲು ಉದ್ದೇಶಿಸಿದ್ದೇವೆ. ಸರ್ಕಾರಿ ಸೇವೆ, ಸಂಚಾರದಟ್ಟಣೆ ನಿಯಂತ್ರಣ ಹಾಗೂ ಎಐ ಪರಿಕರಗಳನ್ನು ಬಳಸಿಕೊಂಡು ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವ ಮೂಲಕ ಸಣ್ಣ ಉದ್ಯಮಗಳಲ್ಲಿ ಬದಲಾವಣೆ ತರಲಾಗುತ್ತದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.ತಂತ್ರಜ್ಞಾನ ಬೆಂಗಳೂರಿನ ದೈನಂದಿನ ಭಾಗ ಆಗಿದೆ:
ಭಾರತದ ನಾವೀನ್ಯತೆಯ ರಾಜಧಾನಿ. ಬೆಂಗಳೂರಿನಲ್ಲಿ ತಂತ್ರಜ್ಞಾನ ಎಂಬುದು ದೈನಂದಿನ ಜೀವನದ ಭಾಗವಾಗಿದೆ. ಇಂದು ನಮ್ಮ ರಾಜ್ಯವು ಭಾರತದ ಸಾಫ್ಟ್ವೇರ್ ರಫ್ತಿನ ಶೇ. 40ರಷ್ಟು ಕೊಡುಗೆ ನೀಡುತ್ತಿದೆ. ಬೆಂಗಳೂರು 17,000 ಕ್ಕೂ ಹೆಚ್ಚು ಸ್ಟಾರ್ಟ್ಅಪ್ಗಳಿಗೆ ನೆಲೆಯಾಗಿದೆ, ಇದು ಭಾರತದ ಸ್ಟಾರ್ಟ್ಅಪ್ ರಾಜಧಾನಿಯಾಗಿದೆ. ಇಡೀ ಪ್ರಪಂಚಕ್ಕಾಗಿ ಉತ್ಪನ್ನಗಳನ್ನು ವಿನ್ಯಾಸಗೊಳಿಸಲು, ಎಂಜಿನಿಯರಿಂಗ್ ಮತ್ತು ಹೊಸ ಆವಿಷ್ಕಾರಗಳನ್ನು ಮಾಡಲು ಸಾವಿರಾರು ಜಾಗತಿಕ ಸಾಮರ್ಥ್ಯ ಕೇಂದ್ರಗಳು (ಜಿಸಿಸಿ) ಕರ್ನಾಟಕವನ್ನು ಆರಿಸಿಕೊಂಡಿವೆ ಎಂದು ಶಿವಕುಮಾರ್ ತಿಳಿಸಿದರು.
ತಂತ್ರಜ್ಞಾನ ನಾಗರಿಕತೆ ಹಾದಿಯನ್ನೇ ಬದಲಿಸುತ್ತದೆ:
ಪ್ರತಿ ಪೀಳಿಗೆಯೂ ನಾಗರಿಕತೆಯ ಹಾದಿಯನ್ನೇ ಬದಲಾಯಿಸುವ ಒಂದು ತಂತ್ರಜ್ಞಾನವನ್ನು ಬಳುವಳಿಯಾಗಿ ಪಡೆಯುತ್ತದೆ. ಸ್ಟೀಮ್ ಎಂಜಿನ್ ಕೈಗಾರಿಕಾ ರಂಗವನ್ನು ಕ್ರಾಂತಿಗೊಳಿಸಿತು. ವಿದ್ಯುತ್ ನಗರಗಳನ್ನು ಮಾರ್ಪಡಿಸಿತು. ಇಂಟರ್ನೆಟ್ ಸಂಪರ್ಕ ಮಾಧ್ಯಮವನ್ನೇ ಬದಲಾಯಿಸಿತು. ಮೊಬೈಲ್ ತಂತ್ರಜ್ಞಾನವು ಎಲ್ಲವನ್ನೂ ಸುಲಭವಾಗಿ ಲಭ್ಯವಾಗುವಂತೆ ಮಾಡಿತು ಎಂದರು.ಇಂದು ಕೃತಕ ಬುದ್ಧಿಮತ್ತೆಯು (ಎಐ) ಸ್ವತಃ ಮಾನವ ಸಾಮರ್ಥ್ಯವನ್ನೇ ಮಾರ್ಪಡಿಸುವ ಭರವಸೆ ನೀಡುತ್ತಿದೆ. ನಾನು ಹೋದಲ್ಲೆಲ್ಲಾ ಜನರು ಕೇವಲ ಮತ್ತೊಂದು ತಂತ್ರಜ್ಞಾನವಾಗಿ ಮಾತ್ರವಲ್ಲದೆ, ಬಹುಶಃ ನಮ್ಮ ಪೀಳಿಗೆಯನ್ನು ವ್ಯಾಖ್ಯಾನಿಸುವ ಪ್ರಮುಖ ಶಕ್ತಿಯಾಗಿ ಎಐ ಬಗ್ಗೆ ಮಾತನಾಡುತ್ತಾರೆ ಎಂದು ಡಿ.ಕೆ. ಶಿವಕುಮಾರ್ ಎಐ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಆ ಪ್ರಯಾಣದಲ್ಲಿ ಗೂಗಲ್ ಅತ್ಯದ್ಭುತ ಪಾಲುದಾರನಾಗಿ ರಾಜ್ಯದ ಜತೆ ಇದೆ. ಭಾರತದಲ್ಲಿ ಗೂಗಲ್ 18 ಸಾವಿರ ಸಿಬ್ಬಂದಿ ಹೊಂದಿದ್ದು, ಅದರಲ್ಲಿ 12 ಸಾವಿರ ಸಿಬ್ಬಂದಿ ಬೆಂಗಳೂರಿನಲ್ಲಿದ್ದಾರೆ. ಇದರೊಂದಿಗೆ ಭಾರತದಲ್ಲಿ ಗೂಗಲ್ ನ ಸಿಬ್ಬಂದಿಯ 2/3 ಪ್ರಮಾಣ ಬೆಂಗಳೂರಿನಲ್ಲಿದೆ. ಇದು ನಮ್ಮ ನಗರದ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ಈ ಸಂಬಂಧವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ಉತ್ಸುಕವಾಗಿದ್ದೇವೆ ಎಂದರು.