ತಿರುವನಂತಪುರಂ: ಶಬರಿಮಲೆ ದೇವಸ್ಥಾನಕ್ಕೆ 10-50ರ ವಯೋಮಾನದ ಸ್ತ್ರೀಯರ ಪ್ರವೇಶಕ್ಕೆ ಅನುಮತಿ ನೀಡುವುದು ಬೇಡ ಎಂದು ಕೇರಳ ಸರ್ಕಾರ ಸುಪ್ರೀಂಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಲು ನಿರ್ಧರಿಸಿದೆ. 

ಕೇರಳ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವ ಹೊತ್ತಿನಲ್ಲೇ ಸಿಪಿಎಂ ನೇತೃತ್ವದ ಎಲ್‌ಡಿಎಫ್ ಸರ್ಕಾರ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.ಈ ಹಿಂದೆ 2018ರಲ್ಲಿ ಸುಪ್ರೀಂಕೋರ್ಟ್‌, ಮಹಿಳೆಯರ ಪ್ರವೇಶಕ್ಕೆ ಇದ್ದ ನಿರ್ಬಂಧ ತೆಗೆದುಹಾಕಿತ್ತು. ಇದನ್ನು ಸ್ವಾಗತಿಸಿದ್ದ ಅಂದಿನ ಎಲ್‌ಡಿಎಫ್‌ ಸರ್ಕಾರ ಮಹಿಳೆಯರ ಪ್ರವೇಶಕ್ಕೆ ಸಿದ್ಧತೆ ನಡೆಸಿತ್ತು.

ಭಾರೀ ಹೋರಾಟ ನಡೆದು ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ

ಆದರೆ ಇದರ ವಿರುದ್ಧ ಭಾರೀ ಹೋರಾಟ ನಡೆದು ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಅಲ್ಲಿ ಋತುಮತಿ ವಯಸ್ಸಿನ ಮಹಿಳೆಯರಿಗೆ ಅವಕಾಶ ನೀಡಬಾರದು. ಹಿಂದಿನ ಸಂಪ್ರದಾಯ ಪಾಲಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದರು. ವಿಷಯ ಕೇರಳದಲ್ಲಿ ಎಡಪಕ್ಷಗಳು, ಕಾಂಗ್ರೆಸ್, ಬಿಜೆಪಿ ನಡುವೆ ವಾಕ್ಸಮರಕ್ಕೆ ಕಾರಣವಾಗಿತ್ತು.


ಸುಪ್ರೀಂಕೋರ್ಟ್‌ ಪ್ರಕರಣದಲ್ಲಿ ಕೇರಳ ಸರ್ಕಾರದ ಅಭಿಪ್ರಾಯ ಕೇಳಿತ್ತು

ಈ ನಡುವೆ ಸುಪ್ರೀಂಕೋರ್ಟ್‌ ಪ್ರಕರಣದಲ್ಲಿ ಕೇರಳ ಸರ್ಕಾರದ ಅಭಿಪ್ರಾಯ ಕೇಳಿತ್ತು. ಈ ವೇಳೆ ತನ್ನ ಹಳೆಯ ನಿಲುವಿನಿಂದ ಹಿಂದೆ ಸರಿದು, ಮಹಿಳೆಯರಿಗೆ ಪ್ರವೇಶ ಬೇಡ ಎಂಬ ಸಲಹೆಯನ್ನು ಸುಪ್ರೀಂಕೋರ್ಟ್‌ಗೆ ನೀಡಲು ದೇಗುಲದ ಉಸ್ತುವಾರಿ ಹೊತ್ತಿರುವ ಸರ್ಕಾರದ ಅಧೀನ ತಿರುವಾಂಕೂರು ದೇವಸ್ವಂ ಮಂಡಳಿ(ಟಿಡಿಬಿ) ನಿರ್ಧರಿಸಿದೆ. ಮಂಡಳಿಯ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಅಂಗೀಕರಿಸಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅದರ ಅಧ್ಯಕ್ಷ ಕೆ. ಜಯಕುಮಾರ್‌ ಹೇಳಿದ್ದಾರೆ.