ಸಾರಾಂಶ
ಪುಣೆ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಮುಗಿಯುತ್ತಿದ್ದಂತೆಯೇ ಮತ್ತು ಬೆಳಗಾವಿಯಲ್ಲಿ ವಿಧಾನಸಭೆ ಅಧಿವೇಶನ ಆರಂಭತ್ದ ಹೊತ್ತಿನಲ್ಲೇ ಉದ್ಧವ್ ಠಾಕ್ರೆ ಅವರ ಶಿವಸೇನೆ ಬೆಳಗಾವಿ ಗಡಿ ಕ್ಯಾತೆ ಆರಂಭಿಸಿದೆ. ‘ಬೆಳಗಾವಿಯಲ್ಲಿ ಮರಾಠಿ ಮಾತನಾಡುವ ಜನರಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ ಈ ಪ್ರದೇಶವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಣೆ ಮಾಡಬೇಕು’ ಎಂದು ಠಾಕ್ರೆ ಅವರ ಪುತ್ರನಾದ ಶಿವಸೇನೆ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಒತ್ತಾಯಿಸಿದ್ದಾರೆ.
ಮಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆಯ ಸಂಭ್ರಮಾಚರಣೆ ನಡೆಯುತ್ತಿರುವ ಸಂದರ್ಭದಲ್ಲಿ, ನೆರೆಯ ರಾಜ್ಯದ ಬೆಳಗಾವಿಯಲ್ಲಿ ಪರಿಸ್ಥಿತಿ ಹದೆಗೆಡುತ್ತಿದೆ. ಬೆಳಗಾವಿಯಲ್ಲಿ ಮರಾಠಿ ಭಾಷಿಕರನ್ನು ದಮನ ಮಾಡಲಾಗುತ್ತಿದೆ. ನಿನ್ನೆಯಿಂದ ಈ ಪ್ರದೇಶದಲ್ಲಿ ಪರಿಸ್ಥಿತಿ ಹದೆಗೆಡುತ್ತಿದೆ. ನಮ್ಮ ಪಕ್ಷದ ಕಾರ್ಯಕರ್ತರನ್ನು ಬಂಧಿಸಲಾಗುತ್ತಿದೆ’ ಎಂದರು.
‘ಹಿಂದಿನ ಮುಖ್ಯಮಂತ್ರಿ ಏಕನಥ ಶಿಂಧೆ ಅಲ್ಲಿನ ಮರಾಠಿ ಭಾಷಿಕರಿಗೆ ಹೆಚ್ಚುವರಿ ಹಣ ನೀಡುವುದಾಗಿ ಭರವಸೆ ನೀಡಿದ್ದರು. ವಿವಾದಿತ ಪ್ರದೇಶದಲ್ಲಿ ವಾಸಿಸುವ ಜನರಿಗೆ ನೀಡಿದ ಭರವಸೆ ಏನಾಯಿತು? ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕೆಂದು ನಮ್ಮ ಒತ್ತಾಯವಾಗಿತ್ತು. ಈಗಲೂ ಇದೆ. ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಲು ಬಿಜೆಪಿಗೆ ಮನಸ್ಸಿದೆಯೇ?’ ಎಂದು ಪ್ರಶ್ನಿಸಿದರು.