ಸಾರಾಂಶ
ನವದೆಹಲಿ : ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ಪೋರ್ಟನ್ನು ರದ್ದುಪಡಿಸಬೇಕೆಂಬ ಕರ್ನಾಟಕ ಸರ್ಕಾರದ ಮನವಿಯನ್ವಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ಹೇಳಿವೆ.
ಈ ಕುರಿತು ಕರ್ನಾಟಕ ಸರ್ಕಾರ ಬರೆದಿರುವ ಪತ್ರ ತಲುಪಿದೆ. ಅದರಂತೆ ಜೆಡಿಎಸ್ ಸಂಸದನ ಪಾಸ್ಪೋರ್ಟ್ ರದ್ದುಪಡಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ವಿದೇಶಾಂಗ ಸಚಿವಾಲಯದ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಕರ್ನಾಟಕದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಬುಧವಾರ ‘ಕೇಂದ್ರ ಸರ್ಕಾರ ಪ್ರಜ್ವಲ್ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದುಪಡಿಸಬೇಕೆಂಬ ನಮ್ಮ ಮನವಿಗೆ ಪ್ರತಿಕ್ರಿಯಿಸುತ್ತಿಲ್ಲ’ ಎಂದು ಆರೋಪಿಸಿದ್ದರು. ಅದರ ಬೆನ್ನಲ್ಲೇ ಕೇಂದ್ರದಿಂದ ಈ ಪ್ರತಿಕ್ರಿಯೆ ಬಂದಿದೆ.
ಈ ತಿಂಗಳ ಆರಂಭದಲ್ಲಿ ವಿದೇಶಾಂಗ ಸಚಿವಾಲಯದ ವಕ್ತಾರರು ಪ್ರಜ್ವಲ್ ರಾಜತಾಂತ್ರಿಕ ಪಾಸ್ಪೋರ್ಟ್ ಬಳಸಿ ಜರ್ಮನಿಗೆ ಪ್ರಯಾಣಿಸಿದ್ದಾರೆ. ಅದಕ್ಕೆ ನಮ್ಮಿಂದ ಅನುಮತಿ ಕೇಳಿರಲಿಲ್ಲ ಎಂದು ತಿಳಿಸಿದ್ದರು.