ಜನನಿಬಿಡ ಪ್ರದೇಶಗಳಲ್ಲೇ ಪಾಕ್‌ ತೀವ್ರ ಶೆಲ್ ದಾಳಿ ಹಿನ್ನೆಲೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಮತ್ತು ಪೂಂಛ್ ನಗರಗಳನ್ನು ಗುರಿಯಾಗಿಸಿ ಪಾಕಿಸ್ತಾನದ ಸೇನೆ ಇತ್ತೀಚೆಗೆ ನಡೆಸಿದ ಗುಂಡು ಮತ್ತು ಶೆಲ್‌ ದಾಳಿಯಲ್ಲಿ ಹಲವು ನಾಗರಿಕರು ಸಾವನ್ನಪ್ಪಿ, ಹಲವರು ಗಾಯಗೊಂಡ ಹಿನ್ನೆಲೆಯಲ್ಲಿ ಆ ಪ್ರದೇಶಗಳಲ್ಲಿ ಮತ್ತು ನಿಯಂತ್ರಣ ರೇಖೆಯ ಉದ್ದಕ್ಕೂ ಇರುವ ಇತರ ಅಸುರಕ್ಷಿತ ಪ್ರದೇಶಗಳಲ್ಲಿ ಸಮುದಾಯ ಬಂಕರ್‌ಗಳನ್ನು ನಿರ್ಮಿಸಲು ಸರ್ಕಾರ ತಯಾರಿ ನಡೆಸಿದೆ.

ಕಳೆದೊಂದು ದಶಕದಲ್ಲಿ ನಿಯಂತ್ರಣ ರೇಖೆ ಮತ್ತು ಅಂತಾರಾಷ್ಟ್ರೀಯ ಗಡಿಯುದ್ದಕ್ಕೂ ಪ್ರತ್ಯೇಕ ಮತ್ತು ಸಮುದಾಯ ಬಂಕರ್‌ಗಳನ್ನು ನಿರ್ಮಿಸಿ, ನಾಗರಿಕರ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಂಡಿದೆ. ಆದರೆ ಯಾವುದೇ ಸಂಘರ್ಷದ ಸಂದರ್ಭದಲ್ಲೂ ಪಾಕ್‌ ಸೇನೆ ರಜೌರಿ ಮತ್ತು ಪೂಂಛ್ ನಗರಗಳ ಮೇಲೆ ಶೆಲ್ಲಿಂಗ್ ನಡೆಸಿರಲಿಲ್ಲ. ಹಾಗಾಗಿ ಅಲ್ಲಿ ಬಂಕರ್‌ಗಳನ್ನು ನಿರ್ಮಿಸಿರಲಿಲ್ಲ. ಆದರೆ ಈ ಬಾರಿ ಇವುಗಳ ಮೇಲೆ ತೀವ್ರತರವಾದ ಶೆಲ್ ದಾಳಿ ನಡೆಸುತ್ತಿರುವುದರಿಂದ, ಸಮುದಾಯ ಬಂಕರ್‌ಗಳ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ.

‘ಹಿಂದೆಂದಿಗಿಂತಲೂ ಈ ಬಾರಿ ದಾಳಿಯ ಸ್ವರೂಪ ಮತ್ತು ತೀವ್ರತೆ ಭಿನ್ನವಾಗಿದೆ. ಇದೇ ಮೊದಲ ಬಾರಿಗೆ, ರಜೌರಿ ಮತ್ತು ಪೂಂಛ್‌ನಂತಹ ಜನನಿಬಿಡ ಪಟ್ಟಣಗಳು ​​ನೇರ ಗುಂಡಿನ ದಾಳಿಗೆ ಒಳಗಾಗಿವೆ. ಹಾಗಾಗಿ ಪ್ರತ್ಯೇಕ ಬಂಕರ್‌ಗಳಿಗಿಂತ ಸಮುದಾಯ ಬಂಕರ್‌ಗಳ ನಿರ್ಮಾಣ ಅಗತ್ಯ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.