ಸಾರಾಂಶ
ಪತಂಜಲಿ ಕಂಪನಿಯ ‘ಆಯುರ್ವೇದ’ ಉತ್ಪನ್ನಗಳಿಗೆ ರೋಗ ಗುಣಪಡಿಸುವ ಶಕ್ತಿಯಿದೆ ಎಂಬ ಸುಳ್ಳು ಜಾಹೀರಾತುಗಳನ್ನು ಪ್ರಸಾರ ಮಾಡಿದ ವಿಷಯಕ್ಕೆ ಸಂಬಂಧಿಸಿದಂತೆ ಬಾಬಾ ರಾಮದೇವ್ ಅವರನ್ನು ಮತ್ತೊಮ್ಮೆ ಸುಪ್ರೀಂಕೋರ್ಟ್ ತೀವ್ರವಾಗಿ ತರಾಟೆ ತೆಗೆದುಕೊಂಡಿದೆ.
ನವದೆಹಲಿ: ಪತಂಜಲಿ ಕಂಪನಿಯ ‘ಆಯುರ್ವೇದ’ ಉತ್ಪನ್ನಗಳಿಗೆ ರೋಗಗಳನ್ನು ಗುಣಪಡಿಸುವ ಶಕ್ತಿಯಿದೆ ಎಂಬ ಸುಳ್ಳು ಜಾಹೀರಾತುಗಳನ್ನು ಪ್ರಸಾರ ಮಾಡಿದ ವಿಷಯಕ್ಕೆ ಸಂಬಂಧಿಸಿದಂತೆ ಕಂಪನಿಯ ಪ್ರವರ್ತಕರಾದ ಬಾಬಾ ರಾಮದೇವ್ ಹಾಗೂ ಆಚಾರ್ಯ ಬಾಲಕೃಷ್ಣ ಅವರನ್ನು ಮತ್ತೊಮ್ಮೆ ಸುಪ್ರೀಂಕೋರ್ಟ್ ತೀವ್ರವಾಗಿ ತರಾಟೆ ತೆಗೆದುಕೊಂಡಿದೆ. ಅಲ್ಲದೆ, ಅವರಿಬ್ಬರೂ ಬೇಷರತ್ ಕ್ಷಮೆಯಾಚಿಸಿ ಸಲ್ಲಿಸಿದ ಅಫಿಡವಿಟ್ ಅನ್ನು ತಿರಸ್ಕರಿಸಿರುವ ನ್ಯಾಯಪೀಠ, ‘ನಿಮ್ಮ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ’ ಎಂದು ನೇರವಾಗಿ ಹೇಳಿದೆ.
ಇದೇ ವೇಳೆ, ಪತಂಜಲಿ ಕಂಪನಿಯ ಉತ್ಪನ್ನಗಳು ಮತ್ತು ಜಾಹೀರಾತುಗಳಿಗೆ ಅನುಮೋದನೆ ನೀಡಿದ ಹಾಗೂ ನಂತರ ಅವುಗಳ ವಿರುದ್ಧ ಕ್ರಮ ಕೈಗೊಳ್ಳದೆ ವಿಳಂಬ ಧೋರಣೆ ತೋರಿದ ಉತ್ತರಾಖಂಡ ಪರವಾನಗಿ ಇಲಾಖೆಯ ವಿರುದ್ಧವೂ ಕಿಡಿಕಾರಿರುವ ಸುಪ್ರೀಂಕೋರ್ಟ್, ನಾವು ಈ ವಿಷಯವನ್ನು ಹಗುರವಾಗಿ ತೆಗೆದುಕೊಳ್ಳುವುದಿಲ್ಲ. ‘ನಿಮ್ಮನ್ನು ಸುಲಿದುಹಾಕುತ್ತೇವೆ’ ಎಂದು ತೀಕ್ಷ್ಣವಾಗಿ ಹೇಳಿದೆ.
‘ಖುದ್ದಾಗಿ ಹಾಜರಾಗುವಂತೆ ನೋಟಿಸ್ ನೀಡಿದಾಗ ರಾಮದೇವ್ ಮತ್ತು ಬಾಲಕೃಷ್ಣ ನುಣುಚಿಕೊಳ್ಳಲು ಪ್ರಯತ್ನಿಸಿದರು. ಅದು ಅಕ್ಷಮ್ಯ. ಕೋರ್ಟ್ನಲ್ಲಿ ಛೀಮಾರಿ ಹಾಕಿದ ಮೇಲೂ ಮಾರುಕಟ್ಟೆಗೆ ಹೋಗಿ ಬಾಯಿಗೆ ಬಂದಂತೆ ಮಾತನಾಡಿದರು. ಅದನ್ನು ನಾವು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ’ ಎಂದೂ ಕೋರ್ಟ್ ಹೇಳಿದೆ.
ಮುಂದಿನ ವಿಚಾರಣೆಯನ್ನು ಏ.16ಕ್ಕೆ ನಿಗದಿಪಡಿಸಲಾಗಿದೆ.