ಪ್ರಸನ್ನ ಬಿ ವರಾಳೆ ಅವರ ನೇಮಕದೊಂದಿಗೆ ಖಾಲಿಯಿದ್ದ ಒಂದು ಸ್ಥಾನ ಭರ್ತಿಯಾಗಿದ್ದು, ಇಂದಿನಿಂದ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೆ 34 ನ್ಯಾಯಾಧೀಶರು ಕಾರ್ಯನಿರ್ವಹಿಸಲಿದ್ದಾರೆ.

ನವದೆಹಲಿ: ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಧೀಶ ಪ್ರಸನ್ನ ಬಿ. ವರಾಳೆ, ಗುರುವಾರ ಸುಪ್ರೀಂಕೋರ್ಟ್‌ನ ನ್ಯಾಯಾಧೀಶರಾಗಿ ಮುಖ್ಯ ನ್ಯಾ. ಡಿ ವೈ ಚಂದ್ರಚೂಡ್‌ ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು.

ವರಾಳೆ ಅವರ ನೇಮಕದೊಂದಿಗೆ ಸುಪ್ರೀಂ ಕೋರ್ಟ್‌ನಲ್ಲಿರುವ ಎಲ್ಲ 34 ನ್ಯಾಯಾಧೀಶರ ಹುದ್ದೆ ಭರ್ತಿಯಾದಂತಾಗಿದೆ.

ಇದಕ್ಕೂ ಮೊದಲು ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನ್ಯಾ. ಎಸ್‌.ಕೆ. ಕೌಲ್‌ ಅವರ ನಿವೃತ್ತಿಯಿಂದಾಗಿ ಒಂದು ಸ್ಥಾನ ಖಾಲಿಯಾಗಿತ್ತು.

ಈ ಹಿನ್ನೆಲೆಯಲ್ಲಿ ಪ್ರಸ್ತುತ ಹೈಕೋರ್ಟ್‌ನ ನ್ಯಾಯಾಧೀಶರುಗಳಲ್ಲಿ ಅತ್ಯಂತ ಹಿರಿಯ ಮತ್ತು ಏಕಮಾತ್ರ ಪರಿಶಿಷ್ಟ ವರ್ಗಕ್ಕೆ ಸೇರಿದ ವ್ಯಕ್ತಿಯಾಗಿದ್ದ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಅವರ ಹೆಸರನ್ನು ಖಾಲಿ ಸ್ಥಾನಕ್ಕೆ ಕೊಲಿಜಿಯಂ ಶಿಫಾರಸು ಮಾಡಿತ್ತು.

ಇದರೊಂದಿಗೆ ಸುಪ್ರೀಂ ಕೋರ್ಟ್‌ನಲ್ಲಿ ದಲಿತ ಸಮುದಾಯಕ್ಕೆ ಸೇರಿದ ನ್ಯಾಯಮೂರ್ತಿಗಳ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.