ಮೀಸಲು ಮಿತಿ 50%ಕ್ಕಿಂತ ಹೆಚ್ಚಳ ಮಾಡ್ತೇವೆ. ಜೊತೆಗೆ ಈ ಬಾರಿ ಬಿಜೆಪಿ 150 ಸ್ಥಾನ ಗೆಲ್ಲುವುದೂ ಕಷ್ಟ ಎಂದು ರಾಹುಲ್‌ ಗಾಂಧಿ ಕಿಡಿಕಾರಿದ್ದಾರೆ.

ಅಲಿರಾಜಪುರ್‌ (ಮಧ್ಯಪ್ರದೇಶ): ಕಾಂಗ್ರೆಸ್‌ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮೀಸಲಾತಿ ಪ್ರಮಾಣವನ್ನು ಶೇ.50ಕ್ಕಿಂತ ಹೆಚ್ಚಿಸಲಾಗುವುದು ಎಂದು ಪುನರುಚ್ಚರಿಸಿರುವ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ, ಆ ಮೀಸಲಾತಿಯಲ್ಲೇ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಆದಿವಾಸಿಗಳಿಗೆ ಅಗತ್ಯಕ್ಕೆ ತಕ್ಕಂತೆ ಮೀಸಲು ನೀಡಲಾಗುವುದು ಎಂದು ಹೇಳಿದ್ದಾರೆ. 

ಈ ಮೂಲಕ ಅವರ ಮೀಸಲು ಪ್ರಮಾಣ ಹೆಚ್ಚಿಸುವ ಸುಳಿವು ನೀಡಿದ್ದಾರೆ.ಸೋಮವಾರ ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಒಟ್ಟಾರೆ ಮೀಸಲಾತಿ ಪ್ರಮಾಣವನ್ನು ಶೇ.50ಕ್ಕಿಂತ ಹೆಚ್ಚಿಸಲಾಗುವುದು. ಜಾತಿ ಆಧರಿತ ಜನಗಣತಿಯನ್ನು ಮಾಡಲಾಗುತ್ತದೆ. 

ದಲಿತರು, ಬುಡಕಟ್ಟು ಜನಾಂಗ ಮತ್ತು ಹಿಂದುಳಿದವರ ಕಲ್ಯಾಣಕ್ಕಾಗಿ ಅವರ ಅಗತ್ಯಕ್ಕೆ ತಕ್ಕಂತೆ ಮೀಸಲು ನೀಡಲಾಗುವುದು ಎಂದರು.ಬಿಜೆಪಿಗೆ 150 ಸೀಟೂ ಬರಲ್ಲ:ಭಾರತದ ಸಂವಿಧಾನವನ್ನು ಬದಲಿಸಲು ಮುಂದಾಗಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 150 ಸ್ಥಾನ ಮಾತ್ರ ಗೆಲ್ಲಬಹುದು ಎಂದ ರಾಹುಲ್‌, ‘ಪ್ರಧಾನಿ ನರೇಂದ್ರ ಮೋದಿ ಒಬ್ಬ ಸುಳ್ಳುಗಾರ. ಜನರ ಹಕ್ಕನ್ನು ಕಸಿದುಕೊಂಡಿದ್ದಾರೆ. 

ಸಂವಿಧಾನವನ್ನು ಬದಲಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಆದ್ದರಿಂದಲೇ 400 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ. ಆದರೆ ಈ ಬಾರಿ ಅವರು 150 ಸ್ಥಾನಗಳನ್ನು ಗೆಲ್ಲುವುದೂ ಕಷ್ಟ’ ಎಂದರು.