ಕಾಂಗ್ರೆಸ್‌ ಗೆದ್ದರೆ ರೈತರ ಸಾಲವನ್ನು ಮನ್ನಾ ಮಾಡುವ ಜೊತೆಗೆ ದಿನಗೂಲಿಯನ್ನು 400 ರು.ಗೆ ಹೆಚ್ಚ ಮಾಡುವುದಾಗಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭರವಸೆ ನೀಡಿದ್ದಾರೆ.

ಖರ್ಗೋನ್‌ (ಮಧ್ಯಪ್ರದೇಶ): ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ರೈತರ ಸಾಲವನ್ನು ಮನ್ನಾ ಮಾಡಲಾಗುವುದು. ಗ್ರಾಮೀಣ ಉದ್ಯೋಗ ಖಾತ್ರಿಯ ದಿನಗೂಲಿಯನ್ನು 250 ರಿಂದ 400 ರು. ಗೆ ಏರಿಕೆ ಮಾಡಲಾಗುತ್ತದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭರವಸೆ ನೀಡಿದ್ದಾರೆ.

ಸೋಮವಾರ ಚುನಾವಣಾ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಸಂವಿಧಾನ ಬದಲಿಸಲು ಪ್ರಯತ್ನಿಸುತ್ತಿದ್ದಾರೆ. ಭಾರತದ ಸಂಪತ್ತನ್ನು ಅದಾನಿ ಸೇರಿದಂತೆ 22 ರಿಂದ 25 ಮಂದಿ ಶ್ರೀಮಂತರಿಗೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ರಕ್ಷಿಸುವುದರ ಜೊತೆಗೆ ಪ್ರಮುಖವಾಗಿ ಬುಡಕಟ್ಟು ಜನರ ಕಾಡು, ಜಲ, ಜಮೀನನ್ನು ರಕ್ಷಿಸುತ್ತದೆ ಎಂದರು.