ಮಹಾರಾಷ್ಟ್ರ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಯಲ್ಲಿ ಭಾರೀ ಅಕ್ರಮದ ಕುರಿತು ಅನುಮಾನ ವ್ಯಕ್ತಪಡಿಸಿದ ಎರಡೇ ದಿನದಲ್ಲಿ ಚುನಾವಣಾ ಅಂಕಿ ಅಂಶಗಳ ವಿಶ್ಲೇಷಕ, ಸಿಎಸ್‌ಡಿಎಸ್‌ ಸಂಸ್ಥೆ ಮುಖ್ಯಸ್ಥ ಸಂಜಯ್‌ ಕುಮಾರ್‌ ತಮ್ಮ ಪೋಸ್ಟ್‌ ಬಗ್ಗೆ ಕ್ಷಮೆ  

ನವದೆಹಲಿ: ಮಹಾರಾಷ್ಟ್ರ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಯಲ್ಲಿ ಭಾರೀ ಅಕ್ರಮದ ಕುರಿತು ಅನುಮಾನ ವ್ಯಕ್ತಪಡಿಸಿದ ಎರಡೇ ದಿನದಲ್ಲಿ ಚುನಾವಣಾ ಅಂಕಿ ಅಂಶಗಳ ವಿಶ್ಲೇಷಕ, ಸಿಎಸ್‌ಡಿಎಸ್‌ ಸಂಸ್ಥೆ ಮುಖ್ಯಸ್ಥ ಸಂಜಯ್‌ ಕುಮಾರ್‌ ತಮ್ಮ ಪೋಸ್ಟ್‌ ಬಗ್ಗೆ ಕ್ಷಮೆ ಯಾಚಿಸಿದ್ದು ಅದನ್ನು ಹಿಂದಕ್ಕೆ ಪಡೆಯುತ್ತಿರುವುದಾಗಿ ಹೇಳಿದ್ದಾರೆ. ಅಲ್ಲದೆ ಸಂಸ್ಥೆ ಸಿಬ್ಬಂದಿ ಲೆಕ್ಕಾಚಾರದಲ್ಲಿ ತಪ್ಪಾಗಿದೆ ಎಂದು ಒಪ್ಪಿಕೊಂಡಿದ್ದಾರೆ.

ಆದರೆ ಸಂಜಯ್‌ ಪೋಸ್ಟ್‌ ಅನ್ನೇ ಬಳಸಿಕೊಂಡು ಚುನಾವಣಾ ಆಯೋಗದ ವಿರುದ್ಧ ತನ್ನ ಆರೋಪವನ್ನು ಪುನರುಚ್ಚರಿಸಿದ್ದ ಕಾಂಗ್ರೆಸ್‌ಗೆ ಇದರಿಂದ ಭಾರೀ ಮುಖಭಂಗವಾಗಿದೆ. ಮತ್ತೊಂದೆಡೆ ಕಾಂಗ್ರೆಸ್‌ ಆರೋಪ ಪ್ರಸ್ತಾಪಿಸಿ ಅದರ ವಿರುದ್ಧ ಬಿಜೆಪಿ ವ್ಯಂಗ್ಯವಾಡಿದೆ.

ಸಂಜಯ್‌ ಆರೋಪವೇನಿತ್ತು?:

‘ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ನಾಸಿಕ್ ಪಶ್ಚಿಮ ಮತ್ತು ಹಿಂಗ್ಲಾ ಕ್ಷೇತ್ರಗಳಲ್ಲಿ ಶೇ.47 ಮತ್ತು ಶೇ.43ರಷ್ಟು ಮತ ಪ್ರಮಾಣ ಹೆಚ್ಚಾಗಿದೆ. ರಾಮ್‌ಟೆಕ್ ಮತ್ತು ದೇಬ್‌ಲಾಲಿ ಕ್ಷೇತ್ರಗಳಲ್ಲಿ ಶೇ.38 ಮತ್ತು ಶೇ.36ರಷ್ಟು ಕುಸಿತ ಕಂಡಿದೆ’ ಎಂದಿದ್ದರು. ಕಾಂಗ್ರೆಸ್‌ ಕೂಡ ಇದನ್ನು ಹಂಚಿಕೊಂಡಿತ್ತು.

ಕ್ಷಮೆಯಾಚನೆ:

ಈ ನಡುವೆ ಸಂಜಯ್‌ ಮಂಗಳವಾರ ದಿಢೀರ್‌ ತಮ್ಮ ಪೋಸ್ಟ್ ಅಳಿಸಿ ಹಾಕಿದ್ದಾರೆ. ಮಾತ್ರವಲ್ಲದೇ, ‘ 2024ರ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳ ದತ್ತಾಂಶದಲ್ಲಿ ತಪ್ಪಾಗಿದೆ ಎಂದು ಮಾಡಿದ್ದ ಪೋಸ್ಟ್‌ಗೆ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ. ದತ್ತಾಂಶವನ್ನು ನಮ್ಮ ತಂಡ ತಪ್ಪಾಗಿ ಓದಿದೆ. ಹಾಗಾಗಿ ಪೋಸ್ಟ್ ಅಳಿಸಲಾಗಿದೆ. ತಪ್ಪು ಮಾಹಿತಿಯನ್ನು ಹರಡುವ ಯಾವ ಉದ್ದೇಶವೂ ನನಗಿರಲಿಲ್ಲ’ ಎಂದಿದ್ದಾರೆ.

ಬಿಜೆಪಿ ಕಿಡಿ?

ಇನ್ನು ಸಂಜಯ್‌ ಕ್ಷಮೆಯಾಚನೆ ಬೆನ್ನಲ್ಲೇ ಬಿಜೆಪಿ ಕಾಂಗ್ರೆಸ್‌ ವಿರುದ್ಧ ಕಿಡಿ ಕಾರಿದೆ. ಐಟಿ ವಿಭಾಗದ ಮುಖ್ಯಸ್ಥ ಅಮಿತ್‌ ಮಾಳವೀಯ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ‘ ರಾಹುಲ್‌ ಗಾಂಧಿ ತಮ್ಮ ಆರೋಪಗಳನ್ನು ಪ್ರಚಾರ ಮಾಡಲು ನಂಬಿ ಕೊಂಡಿದ್ದ ಸಂಸ್ಥೆಯ ಅಂಕಿಅಂಶಗಳು ತಪ್ಪಾಗಿವೆ ಎಂದು ಈಗ ಸಾಬೀತಾಗಿದೆ. ಚುನಾವಣಾ ಆಯೋಗವನ್ನು ನಿರ್ಲಜ್ಜವಾಗಿ ಗುರಿಯಾಗಿಸಿಕೊಂಡಿರುವ ಮತ್ತು ನೈಜ ಮತದಾರರನ್ನು ನಕಲಿ ಎಂದು ಬಿಂಬಿಸುವ ರಾಹುಲ್ ಗಾಂಧಿ ಈಗ ಯಾವ ನಿಲುವು ಹೊಂದಿದ್ದಾರೆ ’ ಎಂದು ಪ್ರಶ್ನಿಸಿದ್ದಾರೆ.