ಸಾರಾಂಶ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಸಮುದ್ರ ತೀರದ ರಾಜ್ಯಗಳಾದ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಮಂಗಳವಾರ ಭಾರೀ ಪ್ರಮಾಣದ ಮಳೆ ಸುರಿದಿದೆ.
ಚೆನ್ನೈ/ಪುದುಚೇರಿ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಸಮುದ್ರ ತೀರದ ರಾಜ್ಯಗಳಾದ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಮಂಗಳವಾರ ಭಾರೀ ಪ್ರಮಾಣದ ಮಳೆ ಸುರಿದಿದೆ.
ಭಾರೀ ಮಳೆಯಿಂದಾಗಿ ಜನವಸತಿ ಪ್ರದೇಶಗಳಿಗೆ ನೀರು ನುಗ್ಗಿದ್ದು ಸಾಮಾನ್ಯ ಜನಜೀವನ ಅಸ್ತವ್ಯಸ್ಥಗೊಂಡಿದೆ. ಮತ್ತೊಂದೆಡೆ ವಿವಿಧ ನಗರಗಳಲ್ಲಿ ರೈಲ್ವೆ ಹಳಿಗಳ ಮೇಲೂ ನೀರು ನಿಂತಿದ್ದ ಕಾರಣ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ. ಅಲ್ಲದೆ ನಗರ ಪ್ರದೇಶಗಳಲ್ಲೂ ರಸ್ತೆಗಳ ಮೇಲೆ ನೀರು ಹರಿದ ಕಾರಣ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಇದಲ್ಲದೇ ಕೆಲವು ದೇಶೀಯ ವಿಮಾನಗಳ ಸಂಚಾರ ರದ್ದಾಗಿದ್ದರೆ, ಇನ್ನು ಕೆಲ ವಿಮಾನಗಳ ಸಂಚಾರದಲ್ಲಿ ವಿಳಂಬವಾಗಿದೆ.
ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಹಾಗೂ ಡಿಸಿಎಂ ಉದಯನಿಧಿ ಸ್ಟಾಲಿನ್ ಮಳೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ.
ಪುದುಚೇರಿ ಹಾಗೂ ತಮಿಳುನಾಡಿನ ಕರಾವಳಿ ಪ್ರದೇಶಗಳಾದ ತಿರುವಳ್ಳೂರು, ಕಾಂಚೀಪುರಂ, ಚೆಂಗಲ್ಪಟ್ಟು ಮತ್ತು ಚೆನ್ನೈ ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.
ಈ ಹಿನ್ನೆಲೆಯಲ್ಲಿ ಅಲ್ಲಿನ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ಬುಧವಾರ ರಜೆ ಘೋಷಿಸಿದೆ.