ಸಾರಾಂಶ
ನವದೆಹಲಿ: ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಹಾಕುವವರ ವಿರುದ್ಧ ಜೀವಾವಧಿಯಂಥ ಕಠಿಣ ಶಿಕ್ಷೆ ಜಾರಿ ಸೂಕ್ತ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ ನಾಯ್ಡು ಹೇಳಿದ್ದಾರೆ.
ಕಳೆದೊಂದು ವಾರದಲ್ಲಿ 100 ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಬಂದ ಬಗ್ಗೆ ಪ್ರತಿಕ್ರಿಯಿಸಿದ ನಾಯ್ಡು, ‘ವಂಚಕ ಕರೆಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಾಕುವವವರಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು.
ಅಂತಹ ಅಪರಾಧಿಗಳನ್ನು ಹಾರಾಟ ನಿಷೇಧ ಪಟ್ಟಿಗೆ ಸೇರಿಸಬೇಕು. ಇಂಥ ಕಠಿಣ ಅಂಶಗಳನ್ನು ಒಳಗೊಂಡ ಕಾಯ್ದೆ ಜಾರಿಗೆ ಪ್ರಸ್ತಾಪ ಮಾಡಲಾಗುವುದು ಎಂದು ಹೇಳಿದ್ದಾರೆ.ಅಲ್ಲದೆ ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಶಾಸನಾತ್ಮಕ ಕ್ರಮ ಕೈಗೊಳ್ಳಲು ಚಿಂತನೆ ನಡೆಸುತ್ತಿದೆ. ವಿಮಾನಯಾನ ಸುರಕ್ಷತೆಗೆ ಸಂಬಂಧಿಸಿದಂತೆ ತಿದ್ದುಪಡಿ ಬಗ್ಗೆ ಯೋಚಿಸಲಾಗುತ್ತಿದೆ. ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯೂರಿಟಿ, ವಿಮಾನಗಳಿಗೆ ಬೆದರಿಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಜೊತೆಗೆ ನಿರಂತರ ಸಂಪರ್ಕದಲ್ಲಿದೆ. ಪ್ರಯಾಣಿಕರ ಸುರಕ್ಷತೆ ಮತ್ತು ರಕ್ಷಣೆ ನಮ್ಮ ಆದ್ಯತೆ’ ಎಂದರು.