ಸಾರ್ವಜನಿಕ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ಸೌಲಭ್ಯ

| Published : Sep 02 2024, 02:03 AM IST

ಸಾರಾಂಶ

ಚಳ್ಳಕೆರೆ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಹೆಚ್ಚುವರಿ ಮಾರ್ಗಗಳಿಗೆ ಐದು ಬಸ್‌ಗಳನ್ನು ಶಾಸಕ ಟಿ.ರಘುಮೂರ್ತಿ ಚಾಲನೆ ನೀಡಿದರು.

ಕನ್ನಡಪ್ರಭವಾರ್ತೆ ಚಳ್ಳಕೆರೆ

ಗ್ರಾಮೀಣ ಭಾಗದ ಸಾರ್ವಜನಿಕರ ಹಿತಕ್ಕಾಗಿ ಬಸ್ ಸೌಲಭ್ಯಗಳನ್ನು ಹೆಚ್ಚಿಸುವಂತೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಸೂಚನೆ ಮೇರೆಗೆ ಹೆಚ್ಚುವರಿಯಾಗಿ 5 ಮಾರ್ಗಗಳಲ್ಲಿ ಬಸ್‌ ಸೇವೆ ಆರಂಭಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕ, ಟಿ.ರಘುಮೂರ್ತಿ ತಿಳಿಸಿದರು.

ಭಾನುವಾರ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಚಳ್ಳಕೆರೆ, ಓಬಳಾಪುರ, ತಪ್ಪಗೊಂಡನಹಳ್ಳಿ, ನಾಯಕನಹಟ್ಟಿ ಮಾರ್ಗಗಳ ಹೆಚ್ಚುವರಿ ಬಸ್ ಸೇವೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಗ್ರಾಮೀಣ ಭಾಗದ ಪ್ರಯಾಣಿಕರು ಹಲವಾರು ಬಾರಿ ಕೆಎಸ್‌ಆರ್‌ಟಿಸಿ ಬಸ್ ಸೌಕರ್ಯ ಒದಗಿಸುವಂತೆ ಮನವಿ ಮಾಡಿದ್ದರು. ಕೆಲವೊಂದು ಮಾರ್ಗಗಳಲ್ಲಿ ನಷ್ಟ ಉಂಟಾದರೂ ಸಾರ್ವಜನಿಕ ಹಿತದೃಷ್ಟಿಯಿಂದ ಬಸ್ ಓಡಿಸುವಂತೆ ಸೂಚನೆ ನೀಡಿದ್ದು, ಅದು ಇಂದು ಕಾರ್ಯಗತವಾಗಿದೆ ಎಂದರು.

ಕೆಎಸ್‌ಆರ್‌ಟಿಸಿ ಡಿಸಿ ಶ್ರೀನಿವಾಸ್ ಮಾತನಾಡಿ, ಪ್ರಸ್ತುತ ಚಳ್ಳಕೆರೆ ಘಟಕದಲ್ಲಿ 71 ಬಸ್‌ಗಳನ್ನು ಸಾರ್ವಜನಿಕ ಸೇವೆಗಾಗಿ ಒದಗಿಸಲಾಗಿದೆ. ಶಾಸಕರ ಸೂಚನೆ ಮೇರೆಗೆ ಗ್ರಾಮೀಣ ಭಾಗದ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್‌ಗಳ ಸೇವೆ ಕಲ್ಪಿಸಿದೆ. ಚಿತ್ರದುರ್ಗ ವಿಭಾಗಕ್ಕೆ ನೂತನವಾಗಿ 46 ಬಸ್ ನೀಡಿದ್ದು, ಆ ಪೈಕಿ 5 ಬಸ್‌ಗಳನ್ನು ಇಲ್ಲಿಗೆ ನೀಡಲಾಗಿದೆ ಎಂದರು.

ನಗರಸಭೆ ಅಧ್ಯಕ್ಷೆ ಜೈತುಂಬಿ, ಉಪಾಧ್ಯಕ್ಷೆ ಸುಜಾತ, ಸದಸ್ಯರಾದ ಎಂ.ಜೆ.ರಾಘವೇಂದ್ರ, ಬಿ.ಟಿ.ರಮೇಶ್‌ಗೌಡ, ಕೆ.ವೀರಭದ್ರಪ್ಪ, ನಾಮ ನಿರ್ದೇಶಕ ಆರ್.ವೀರಭದ್ರಪ್ಪ, ಡಿಪೋ ವ್ಯವಸ್ಥಾಪಕ ಪ್ರಭು, ಠಾಣಾ ಇನ್ಸ್ಪೆಕ್ಟರ್ ರಾಜಫಕೃದ್ದೀನ್ ದೇಸಾಯಿ, ಪಿಎಸ್‌ಐ ಜೆ.ಶಿವರಾಜ್ ಮುಂತಾದವರು ಉಪಸ್ಥಿತರಿದ್ದರು.