ಅರಸೀಕೆರೆ: ರಾಷ್ಟ್ರೀಯ ಮಟ್ಟದ ಜೆಇಇ ಮೇನ್ಸ್ ಪರೀಕ್ಷೆಯಲ್ಲಿ 99.4 ಪರ್ಸೆಂಟೈಲ್ ಗಳಿಸಿ, ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 3,888ನೇ ರ್ಯಾಂಕ್ ಪಡೆದು ನಗರದ ಪ್ರತಿಭಾವಂತ ವಿದ್ಯಾರ್ಥಿ ಚೇತನ ಮೂರ್ತಿ ಭಾರತೀಯ ತಾಂತ್ರಿಕ ಸಂಸ್ಥೆ (ಐಐಟಿ) ಮುಂಬೈನಲ್ಲಿ ಪ್ರವೇಶ ಪಡೆಯುವ ಮೂಲಕ ತಾಲೂಕಿಗೆ ಹೆಮ್ಮೆ ತಂದಿದ್ದಾರೆ.ಚೇತನ ಮೂರ್ತಿ ಅವರು ಹಿಂದೆ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ದಿವಂಗತ ಮೇಳೇಗೌಡ ಅವರ ಮೊಮ್ಮಗರಾಗಿದ್ದು, ಹೈದರಾಬಾದ್‌ನ ಶ್ರೀ ಚೈತನ್ಯ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ದ್ವಿತೀಯ ಪಿಯುಸಿಯಲ್ಲಿ ಶೇ. 98 ಅಂಕ ಗಳಿಸಿದ್ದಾರೆ. ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ)ಯಲ್ಲೂ 544 ಅಂಕಗಳನ್ನು ಪಡೆದು ತಮ್ಮ ಪ್ರತಿಭೆಯನ್ನು ಮೆರೆದಿದ್ದಾರೆ.ಶಿಕ್ಷಕರಾದ ಶಶಿಕಲಾ ಹಾಗೂ ಕೆ.ಎಸ್. ಮೂರ್ತಿ ದಂಪತಿಯ ಪುತ್ರರಾದ ಚೇತನ ಮೂರ್ತಿ ಅವರ ಸಾಧನೆಗೆ ತಹಸೀಲ್ದಾರ್ ಸಂತೋಷ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್, ಕ್ಷೇತ್ರ ಸಮನ್ವಯಾಧಿಕಾರಿ (ಪ್ರಭಾರ) ಕುಮಾರ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಯೋಗೇಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಯಣ್ಣ, ಉಪಾಧ್ಯಕ್ಷೆ ಕಮಲ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಹಿರೇಮಠ್, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ್, ಗೌರವಾಧ್ಯಕ್ಷ ಕುಮಾರ್ ಹಾಗೂ ಕಾರ್ಯದರ್ಶಿ ನವೀನ್ ಸೇರಿದಂತೆ ಅನೇಕ ಗಣ್ಯರು ಅಭಿನಂದಿಸಿ ಶುಭ ಹಾರೈಸಿದ್ದಾರೆ