ಸಾರಾಂಶ
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳನ್ನು ಈಡೇರಿಸಿ ಬೆಳಗಾವಿ ಅಧಿವೇಶನದಲ್ಲಿ ಘೋಷಿಸಬೇಕೆಂದು ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿ ಜಿಲ್ಲಾಡಳಿತ ಭವನದ ಮುಂದೆ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿತು.ಸಂಘದ ಜಿಲ್ಲಾ ಗೌರವಾಧ್ಯಕ್ಷ ಜಿ. ಹನುಮೇಶ್ ಮಾತನಾಡಿ, ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಸರ್ಕಾರದ ಪ್ರೋತ್ಸಾಹ ಧನ ಮತ್ತು ರಾಜ್ಯ ಸರ್ಕಾರದ ನಿಶ್ಚಿತ ಮಾಸಿಕ ಗೌರವಧನ ಹಾಗೂ ಪ್ರಣಾಳಿಕೆಯ ಭರವಸೆಯ ಮೊತ್ತ ಒಟ್ಟುಗೂಡಿಸಿ 15,000 ರು.ಗಳ ಮಾಸಿಕ ನಿಶ್ಚಿತ ಗೌರವಧನ ನೀಡಬೇಕು ಎಂಬ ಬೇಡಿಕೆ ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
ಸಂಘದ ಬೇಡಿಕೆಗಳು:ನಗರ ಆತಾ ಕಾರ್ಯಕರ್ತೆಯರಿಗೆ ಹೆಚ್ಚುವರಿ ಕೆಲಸ ಮತ್ತು ನಗರ ಜೀವನದ ದುಬಾರಿ ಖರ್ಚು ವೆಚ್ಚಗಳಿಗೆ ಅನುಗುಣವಾಗಿ ಮಾಸಿಕ ಕನಿಷ್ಠ 2000 ರು. ಗೌರವಧನವನ್ನು ಹೆಚ್ಚಿಗೆ ಮಾಡಬೇಕು. ಮೊಬೈಲ್ ಕೆಲಸಗಳನ್ನು ಒತ್ತಾಯ ಪೂರ್ವಕವಾಗಿ ಮಾಡಿಸಿಕೊಳ್ಳುತ್ತಿರುವುದನ್ನು ಕೈಬಿಡಬೇಕು, ಅಥವಾ ಮೊಬೈಲ್ ಡಾಟಾ ಒದಗಿಸಿ, ಮೊಬೈಲ್ ಕೆಲಸಗಳಿಗೆ ಪ್ರೋತ್ಸಾಹಧನ ನಿಗದಿ ಮಾಡಬೇಕು. ಯಾರಿಗೆ ಮೊಬೈಲ್ ಕೆಲಸ ಮಾಡಲು ಆಗುವುದಿಲ್ಲವೊ ಅವರಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕು.
60 ವರ್ಷಕ್ಕೆ ಸೇವಾ ನಿವೃತ್ತಿ ಪಡೆಯುವ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಇರುವಂತೆ ಇಡಗಂಟು 3 ಲಕ್ಷಕ್ಕೆ ಹೆಚ್ಚಿಸಬೇಕು. ತೀವ್ರವಾದ ಅನಾರೋಗ್ಯ, ಚಿಕಿತ್ಸೆ ಪಡೆಯುವ ಅವಧಿಯಲ್ಲಿ ಕನಿಷ್ಠ 3 ತಿಂಗಳುಗಳ ಕಾಲ ರಾಜ್ಯ ಸರ್ಕಾರದ ನಿಶ್ಚಿತ ಗೌರವಧನ ಮತ್ತು ರೊಟೀನ್ ಚಟುವಟಿಕೆಗಳ ನಿಗದಿತ ಪ್ರೋತ್ಸಾಹಧನ ನೀಡಬೇಕು. ಆಶಾ ಸೇವೆಯಲ್ಲಿ ಇದ್ದಾಗ ಆಗುವ ಅನಾಹುತಗಳಿಗೆ ಸಂಪೂರ್ಣ ಜವಾಬ್ದಾರಿಯನ್ನು ಇಲಾಖೆ ವಹಿಸಿಕೊಳ್ಳಬೇಕು.ಪ್ರತೀ ವರ್ಷ ಪ್ರತೀ ಆಶಾ ಕಾರ್ಯಕರ್ತೆಗೆ ಸಂಪೂರ್ಣ ಆರೋಗ್ಯ ತಪಾಸಣೆ ಮಾಡಬೇಕು. ತೀವ್ರ ಕಾಯಿಲೆಗಳಿದ್ದಲ್ಲಿ ಕೂಡಲೇ ಉಚಿತ ಚಿಕಿತ್ಸೆ ಮಾಡಬೇಕು. ಮತ್ತು ಆಶಾ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಿ, ಕನಿಷ್ಠ ವೇತನ, ಗ್ರಾಚ್ಯುಟಿ, ಪಿಎಫ್-ಇಎಸ್ಐ ಸೌಲಭ್ಯ ನೀಡ ಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.
ಶ್ರಮಕ್ಕೆ ತಕ್ಕ ಪ್ರತಿಫಲ ಇಲ್ಲಜಿಲ್ಲಾಧ್ಯಕ್ಷೆ ಸರಸ್ವತಮ್ಮ ಮಾತನಾಡಿ,ಅಸಹಾಯಕ ಬಡ ಮಹಿಳೆಯರು, ವಿಧವೆಯರು, ವಿಚ್ಛೇದಿತರನ್ನು ''''''''ಆಶಾ'''''''' ಗಳನ್ನಾಗಿ ನೇಮಕ ಮಾಡಿಕೊಂಡು ಅವರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿಸಲಾಗುತ್ತದೆ ಎಂಬುದು ಸರ್ಕಾರದ ಘೋಷಣೆ. ಆದರೆ ಆಶಾಗಳ ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕುತ್ತಿಲ್ಲವೆಂಬುದು ವಾಸ್ತವ. ರಾಜ್ಯದಲ್ಲಿ ಪ್ರೋತ್ಸಾಹಧನ ನೀಡಲು ಆಶಾನಿಧಿ ಪೋರ್ಟಲ್ನಲ್ಲಿ ಆನ್ ಲೈನ್ ದಾಖಲು ಮಾಡಬೇಕಿದ್ದು, ಆಶಾಗಳು ಮಾಡಿದ ಕೆಲಸಗಳು ದಾಖಲಾಗದೆ ಕಳೆದ 8 ವರ್ಷಗಳಿಂದ ಮಾಡಿದ ಕೆಲಸಕ್ಕೆ ಪ್ರೋತ್ಸಾಹಧನ ಸಿಗುತ್ತಿಲ್ಲ ಎಂದು ಹೇಳಿದರು.
ಗೌರವಧನ ₹7000 ನೀಡಲಿಹಲವಾರು ಸಮಸ್ಯೆಯಿಂದ ಆಶಾ ಕಾರ್ಯಕರ್ತೆಯರಿಗೆ ಬಹು ದೊಡ್ಡ ಪ್ರಮಾಣದ ಅನ್ಯಾಯ ಆಗುತ್ತಿದೆ. ಸಮಸ್ಯೆಗಳ ಕುರಿತು ಆರೋಗ್ಯ ಇಲಾಖೆ ಮತ್ತು ಸರ್ಕಾರಕ್ಕೆ ಕಳೆದ 8 ವರ್ಷಗಳಿಂದ ಲೆಕ್ಕವಿಲ್ಲದಷ್ಟು ದೂರುಗಳನ್ನು ಸಲ್ಲಿಸಲಾಗಿದೆ. ಆದರೆ ಯಾವುದೇ ಸಮಸ್ಯೆಯೂ ಪರಿಹಾರವಾಗಿಲ್ಲ. ಆದ್ದರಿಂದ ಈ ಸಮಸ್ಯೆಯನ್ನು ಪರಿಹರಿಸಲು, ರಾಜ್ಯ ಸರ್ಕಾರ ಈಗ ನೀಡುತ್ತಿರುವ ರೂ.5000 ಮಾಸಿಕ ನಿಶ್ಚಿತ ಗೌರವಧನ ಮತ್ತು ವಿವಿಧ ಚಟುವಟಿಕೆಗಳಿಗೆ ಕೇಂದ್ರ ಸರ್ಕಾರ ನಿಗದಿಪಡಿಸಿರುವ ರೂ.7000 ಹಾಗೂ ರಾಜ್ಯ ಸರ್ಕಾರದ ಪ್ರತಿಷ್ಠೆಯ ಐದು ಗ್ಯಾರಂಟಿಗಳ ಜೊತೆಯಲ್ಲಿ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸುವುದಾಗಿ ಪ್ರಣಾಳಿಕೆಯಲ್ಲಿ ಭರವಸೆಯ ನೀಡಿರುವ ರೂ. 3000 ಗಳನ್ನು ಒಟ್ಟುಗೂಡಿಸಿ ಮಾಸಿಕ ರೂ.15,000 ಗೌರವಧನ ನಿಗದಿ ಮಾಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯ ನಂತರ ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್ ರಿಗೆ ಮನವಿ ಪತ್ರ ಸಲ್ಲಿಸಿದರು. ಜಿಲ್ಲಾ ಕಾರ್ಯದರ್ಶಿ ರೇಷ್ಮಾ ಸೇರಿದಂತೆ ನೂರಾರು ಆಶಾ ಕಾರ್ಯಕರ್ತೆಯರು ಇದ್ದರು.