ಕನ್ನಡಪ್ರಭ ವಾರ್ತೆ ಸಕಲೇಶಪುರ
ಪಟ್ಟಣದ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಆತನಿಂದ ಸುಮಾರು 2.5 ಲಕ್ಷ ರು. ಮೌಲ್ಯದ 25 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.ಆಗಸ್ಟ್ 5ರಂದು ಮಧ್ಯಾಹ್ನ ಸುಮಾರು 2.15 ಗಂಟೆಗೆ ಗುರುದೇವ ಪೆಟ್ರೋಲ್ ಬಂಕ್ ಸಮೀಪದ ನಾಗ್ ಎನ್ಕ್ಲೇವ್ ಲೇಔಟ್ ಬಳಿ ಮಾದಕ ವಸ್ತು ಮಾರಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ನಗರ ಪೊಲೀಸರು ದಾಳಿ ನಡೆಸಿದರು. ಈ ವೇಳೆ ಕೊಡಗು ಜಿಲ್ಲೆಯ ಮೂಲದ ಅಜರುದ್ದೀನ್ ಎಂಬಾತನನ್ನು ಬಂಧಿಸಲಾಯಿತು.ಆರೋಪಿಯ ಕಾರಿನ ಪರಿಶೀಲನೆ ನಡೆಸಿದ ವೇಳೆ 25 ಗ್ರಾಂ ಎಂಡಿಎಂಎ ಮಾದಕ ವಸ್ತು ಪತ್ತೆಯಾಗಿದ್ದು, ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಸಕಲೇಶಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ನಗರ ಪೊಲೀಸ್ ಇನ್ಸ್ಪೆಕ್ಟರ್ ವನರಾಜು ಅವರ ಮಾರ್ಗದರ್ಶನದಲ್ಲಿ, ಅಪರಾಧ ವಿಭಾಗದ ಸಬ್ಇನ್ಸ್ಪೆಕ್ಟರ್ ಕೃಷ್ಣಪ್ಪ ಕೆ.ಎಸ್. ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಖಾದರ್ ಅಲಿ, ರೇವಣ್ಣ ಎಸ್.ಜೆ., ಶ್ರೀಧರ್, ರಾಕೇಶ್, ಸೋಮಶೇಖರ್, ಅಶೋಕ್, ಸುನಿಲ್ ಕುಮಾರ್, ಹನುಮಂತು, ಶಿವಕುಮಾರ್ ಹಾಗೂ ಚಾಲಕ ಮಧು ಕಾರ್ಯಾಚರಣೆಯಲ್ಲಿ ಭಾಗವಹಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.