ಸಾರಾಂಶ
ಬೆಂಗಳೂರು : ಕೇಂದ್ರದ ಮಾನದಂಡದ ಪ್ರಕಾರ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಈಗ ಭಿನ್ನರಾಗ ಹಾಡುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಗುರುವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇಂದ್ರದ ಮಾನದಂಡ ಎಂದು ರಾಜ್ಯ ಸರ್ಕಾರ ಈಗ ಭಿನ್ನರಾಗ ಹಾಡುತ್ತಿದೆ. ಆದರೆ, ಕಳೆದ ಒಂದು ವಾರ ಯಾಕೆ ಹೇಳಲಿಲ್ಲ? ಆಗೆಲ್ಲಾ ಹೇಳಿದ್ದು ಏನು ಹಾಗಾದರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಬಿಪಿಎಲ್ ಕಾರ್ಡು ವಿಚಾರದಲ್ಲಿ ರಾಜ್ಯ ಸರ್ಕಾರ ಗೊಂದಲವನ್ನುಂಟು ಮಾಡುತ್ತಿದೆ. ಜನತೆಗೆ ಉತ್ತರ ಕೊಡಲು ಸಾಧ್ಯವಾಗುತ್ತಿಲ್ಲ. ಮುಖ್ಯಮಂತ್ರಿಗಳು ಒಂದು ಹೇಳಿಕೆ ನೀಡಿದರೆ, ಆಹಾರ ಸಚಿವರೇ ಮತ್ತೊಂದು ಹೇಳಿಕೆ ಕೊಡುತ್ತಾರೆ. ಅವರಲ್ಲಿಯೇ ಸ್ಪಷ್ಟತೆ ಇಲ್ಲ. ಗ್ಯಾರಂಟಿ ಯೋಜನೆಗಳ ಬಗ್ಗೆ ಲಘುವಾಗಿ ಮಾತಾಡಿಲ್ಲ. ನಿರಂತರವಾಗಿ ತೆರಿಗೆ ಹೆಚ್ಚಳ ಮಾಡಿಕೊಂಡು ಖಜಾನೆ ತುಂಬಿಸಿಕೊಂಡಿದ್ದು, ಆ ದುಡ್ಡು ಎಲ್ಲಿ ಹೋಗುತ್ತಿದೆ ಎಂದಷ್ಟೇ ಕೇಳಿದ್ದೇನೆ. ಹಣಕಾಸು ನಿರ್ವಹಣೆಯಲ್ಲಿ ಸಮಸ್ಯೆಯಿದೆ. ಅದನ್ನು ಸರಿಪಡಿಸಿಕೊಳ್ಳಿ ಎಂದಿದ್ದೇನೆ ಎಂದರು.
ಎನ್ಡಿಎ ಅಭ್ಯರ್ಥಿಗೆ ಗೆಲುವು: ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ. ನಾನೇ ಅಲ್ಲಿ 15 ದಿನ ಪ್ರಚಾರದಲ್ಲಿ ಭಾಗವಹಿಸಿದ್ದು, ಜನತೆ ಭಾವನೆ ಏನೆಂಬುದು ಗೊತ್ತಿದೆ. ಗೆಲುವಿನಲ್ಲಿ ಯಾವುದೇ ಅನುಮಾನ ಇಲ್ಲ. ಎನ್ಡಿಎ ಅಭ್ಯರ್ಥಿ ಗೆದ್ದೇ ಗೆಲ್ಲುತ್ತಾರೆ. ಹಾಗೆಯೇ ಮಹಾರಾಷ್ಟ್ರ ಹಾಗೂ ಜಾರ್ಖಂಡ್ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.