ಸಾರಾಂಶ
ಶಿವಮೊಗ್ಗ : ಸ್ಥಳೀಯ ಸಂಸ್ಥೆಗಳಿಗೆ ನಿಯಮಾನುಸಾರವಾಗಿ ಸಾರ್ವಜನಿಕರಿಂದ ಪಾವತಿಯಾಗಬೇಕಾದ ಕರ ವಸೂಲಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರು ಮಹಾನಗರ ಪಾಲಿಕೆಯ ಮಾದರಿಯಲ್ಲಿ ಎಲ್ಲಾ ಆಸ್ತಿಗಳನ್ನು ಎ ಮತ್ತು ಬಿ ಖಾತಾಗಳನ್ನಾಗಿ ವಿಂಗಡಿಸಿ, ರಾಜ್ಯಾದ್ಯಂತ ಏಕರೀತಿಯ ಕರ ವಸೂಲಾತಿಗೆ ಹೊಸ ಕಾಯ್ದೆಯನ್ನು ಮುಂದಿನ ಒಂದು ತಿಂಗಳೊಳಗೆ ಜಾರಿಗೊಳಿಸಲಾಗುವುದು ಎಂದು ಪೌರಾಡಳಿತ ಸಚಿವ ರಹೀಂಖಾನ್ ಹೇಳಿದರು.
ಇಲ್ಲಿನ ಮಹಾನಗರ ಪಾಲಿಕೆಯ ಪರಿಷತ್ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಬಹುತೇಕ ಎಲ್ಲಾ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಇತ್ತೀಚಿನ ಕೆಲವು ದಶಕಗಳಿಂದೀಚೆಗೆ ನಿರ್ಮಾಣಗೊಂಡಿರುವ ಬಡಾವಣೆಗಳಲ್ಲಿ ಅಧಿಕೃತವಾಗಿ ಹಾಗೂ ಇನ್ನೂ ಕೆಲವು ಪರವಾನಿಗೆ ಪಡೆಯದೇ ಅನಧಿಕೃತವಾಗಿ ನಿರ್ಮಾಣಗೊಂಡಿರುವ ಎಲ್ಲಾ ಕಟ್ಟಡಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಲಾಗುತ್ತಿದ್ದು, ಅದಕ್ಕೆ ಪೂರಕವಾಗಿ ಸ್ಥಳೀಯ ಸಂಸ್ಥೆಗಳಿಗೆ ಸಂದಾಯವಾಗಬೇಕಾದ ಭಾರೀ ಪ್ರಮಾಣದ ಕರ ವಸೂಲಾಗದೇ ಬಾಕಿ ಉಳಿಯುತ್ತಿರುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ ಎಂದರು.
ಮಹಾನಗರ ಪಾಲಿಕೆಯಲ್ಲಿ ಕೊರತೆಯಿರುವ ಹುದ್ದೆಗಳಲ್ಲಿ ಕೆಲವು ಹುದ್ದೆಗಳನ್ನು ತುರ್ತಾಗಿ ಭರ್ತಿ ಮಾಡಲು ಉದ್ದೇಶಿಸಲಾಗಿದೆ. ಅಲ್ಲದೇ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಲ್ಲಿ ನೇರಪಾವತಿಯಡಿ ಕಾರ್ಯನಿರ್ವಹಿಸುತ್ತಿರುವ 38 ಪೌರ ಕಾರ್ಮಿಕರ ನೇರ ನೇಮಕಾತಿ ಪ್ರಕ್ರಿಯೆಯನ್ನು ಕೂಡಲೇ ಪೂರ್ಣಗೊಳಿಸಲಾಗುವುದು. ಕರವಸೂಲಾತಿಗೆ ಸಂಬಂಧಿಸಿದಂತೆ ಸಿಬ್ಬಂದಿ ಕೊರತೆ ಇರುವ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಸ್ವ-ಸಹಾಯ ಗುಂಪುಗಳ ಪ್ರತಿನಿಧಿಗಳ ನೆರವನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು.ನಗರ ಮತ್ತು ಪಟ್ಟಣ ಪ್ರದೇಶಗಳ ವ್ಯಾಪ್ತಿಯ ಆಯಕಟ್ಟಿನ ಸ್ಥಳಗಳಲ್ಲಿ ಸ್ಥಳೀಯ ಸಂಸ್ಥೆಗೆ ಸಂಬಂಧಿಸಿದ ವಿಶಾಲವಾದ ಸ್ವತ್ತುಗಳಿದ್ದು, ವಾಣಿಜ್ಯ ಸಂಕೀರ್ಣ ನಿರ್ಮಿಸಿ, ನಿರ್ವಹಿಸಲು ಉತ್ಸುಕರಿದ್ದು, ಕ್ರಿಯಾಯೋಜನೆ ತಯಾರಿಸಿ, ಪ್ರಸ್ತಾವನೆ ಸಲ್ಲಿಸಿದಲ್ಲಿ ಸರ್ಕಾರದಿಂದ ಅಗತ್ಯ ಹಣಕಾಸಿನ ನೆರವನ್ನು ಒದಗಿಸಲಾಗುವುದು ಎಂದು ಹೇಳಿದರು.
ಘನತ್ಯಾಜ್ಯ ವಸ್ತುಗಳ ನಿರ್ವಹಣೆ ಹಾಗೂ ಘಟಕಗಳ ನಿರ್ಮಾಣಕ್ಕೆ ಬಿಡುಗಡೆಯಾಗಿರುವ ಅನುದಾನವನ್ನು ಸಕಾಲದಲ್ಲಿ ಬಳಸುವಂತೆ ಕಳೆದ 6 ತಿಂಗಳ ಹಿಂದೆಯೇ ಸೂಚನೆ ನೀಡಲಾಗಿದೆ. ಆದಾಗ್ಯೂ ಅನುದಾನ ಬಳಸದೇ ಬಾಕಿ ಉಳಿಸಿಕೊಂಡಿರುವುದು ಸರಿಯಲ್ಲ. ಕೂಡಲೇ ಹಣ ಬಳಕೆ ಮಾಡಿ ವರದಿ ನೀಡಬೇಕು. ನಗರ ಮತ್ತು ಪಟ್ಟಣ ಪ್ರದೇಶದಲ್ಲಿನ ಎಲ್ಲಾ ಶಾಲೆಗಳಿಗೆ ಶುದ್ಧ ಕುಡಿಯುವ ನೀರನ್ನು ಪೂರೈಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್ ಬಾನು ಮಾತನಾಡಿ, ಶಿವಮೊಗ್ಗ ಮತ್ತು ಭದ್ರಾವತಿ ನಗರಗಳಲ್ಲಿ ನದಿಗೆ ಕಲುಷಿತ ನೀರು ಸೇರುತ್ತಿದ್ದು, ಅದರ ನಿಯಂತ್ರಣಕ್ಕೆ ಕ್ರಮ ವಹಿಸಬೇಕು. ಅಲ್ಲದೇ ನಗರವಾಸಿಗಳಿಗೆ ಸರಬರಾಜು ಮಾಡಲಾಗುತ್ತಿರುವ ನೀರನ್ನು ಶುದ್ಧೀಕರಿಸಿ ಪೂರೈಸಲು ಕ್ರಮ ವಹಿಸುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ರಾಜ್ಯ ಪೌರಾಡಳಿತ ನಿರ್ದೇಶನಾಲಯದ ವ್ಯವಸ್ಥಾಪಕ ಪ್ರುಭುಲಿಂಗ ಕವಳೀಕಟ್ಟಿ, ಬೋವಿ ನಿಗಮದ ರಾಜ್ಯಾಧ್ಯಕ್ಷ ರವಿಕುಮಾರ್, ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಚಂದ್ರಭೂಪಾಲ್, ಮಹಾನಗರ ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್ ಮತ್ತಿತರರು ಇದ್ದರು.
180 ಇಂದಿರಾ ಕ್ಯಾಂಟೀನ್ ಮಂಜೂರು:
ಸಿಎಂ ಸಿದ್ಧರಾಮಯ್ಯ ಅವರು ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ 180 ಇಂದಿರಾ ಕ್ಯಾಂಟೀನ್ಗಳನ್ನು ಮಂಜೂರು ಮಾಡಿ, ಜನಸಾಮಾನ್ಯರ ಹಸಿವು ಇಂಗಿಸುವ ಕಾರ್ಯ ಮಾಡಿದ್ದರು. ಪ್ರಸ್ತುತ ಸಂದರ್ಭದಲ್ಲಿಯೂ ಪುನಃ 180 ಇಂದಿರಾ ಕ್ಯಾಂಟೀನ್ಗಳನ್ನು ಮಂಜೂರು ಮಾಡಿದ್ದು, ಶೀಘ್ರದಲ್ಲಿ ಕಾರ್ಯಾರಂಭಗೊಳ್ಳಲಿವೆ ಎಂದು ಸಚಿವ ರಹೀಂಖಾನ್ ತಿಳಿಸಿದರು. ಕೆಲವು ಕ್ಯಾಂಟೀನ್ಗಳಲ್ಲಿ ನಿರ್ವಹಣೆ ಸರಿಯಾಗಿ ಆಗದಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳಿವೆ. ಇದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಅಲ್ಲದೇ ಸಿದ್ದರಾಮಯ್ಯ ಕನಸಿನ ಯೋಜನೆಯ ಅನುಷ್ಠಾನದಲ್ಲಿ ವ್ಯತ್ಯಯಗಳು ಕಂಡುಬಂದಲ್ಲಿ ಅಂತಹ ವ್ಯಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ವಹಿಸಲಾಗುವುದು ಎಂದರು.
ಆಹಾರ ವಿತರಣೆಯಲ್ಲಿಯೂ ತಪ್ಪು ದಾಖಲಾತಿಗಳ ನಿರ್ವಹಣೆ ಮಾಡುತ್ತಿರುವ ಬಗ್ಗೆ ದೂರುಗಳಿವೆ. ಇಲ್ಲಿಯೂ ದೂರುಗಳ ಕೇಳಿ ಬಂದಲ್ಲಿ ಕ್ಯಾಂಟೀನ್ ನಿರ್ವಹಣಾ ಗುತ್ತಿಗೆ ಸಂಸ್ಥೆಗಳಿಗೆ ನೀಡಿರುವ ಪರವಾನಿಗೆಯನ್ನು ಹಿಂಪಡೆಯಲಾಗುವುದಲ್ಲದೇ ಸಂಬಂಧಿಸಿದ ಇಲಾಖಾ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದರು. ಸ್ಥಳೀಯ ಸಂಸ್ಥೆಗಳಿಗೆ ಸರ್ಕಾರದಿಂದ ಬಿಡುಗಡೆಯಾಗಿರುವ ಅನುದಾನವನ್ನು ಉದ್ಧೇಶಿತ ಯೋಜನೆಗಳಿಗೆ ಬಳಸಿಕೊಂಡು ಗುಣಮಟ್ಟದ ಕಾಮಗಾರಿಗಳನ್ನು ನಿಗಧಿತ ಕಾಲಮಿತಿಯೊಳಗಾಗಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.