ಈ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಎ.ಎಂ. ಮಹೇಶ್ಪ್ರಭು, ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ವಿದೇಶಿ ಕಂಪನಿಗಳ ಶೋಷಣೆ ವಿರುದ್ಧ ನಡೆದ ಕ್ವಿಟ್ ಇಂಡಿಯಾ ಚಳವಳಿಯ ಮಾದರಿಯಲ್ಲಿ, ಇಂದಿನ ವಿದೇಶಿ ಕಾರ್ಪೊರೇಟ್ ಕಂಪನಿಗಳ ಹಸ್ತಕ್ಷೇಪ ಹಾಗೂ ಸರ್ಕಾರಗಳ ನೀತಿಗಳ ವಿರುದ್ಧ ಹೋರಾಟ ನಡೆಸಲಾಗುತ್ತಿದೆ ಎಂದರು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಕ್ವಿಟ್ ಇಂಡಿಯಾ ಚಳವಳಿ ನೆನಪಿನ ಅಂಗವಾಗಿ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ವತಿಯಿಂದ ನಗರದಲ್ಲಿ ಜೈಲ್ ಭರೋ ಚಳವಳಿ ನಡೆಯಿತು.ನಗರದ ಜನನ ಮಂಟಪದ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕುತ್ತಾ, ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತದಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿದರು. ನಂತರ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ, ಕರೆದೊಯ್ದರು, ಕೆಲ ಸಮಯದ ನಂತರ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಎ.ಎಂ. ಮಹೇಶ್ಪ್ರಭು, ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ವಿದೇಶಿ ಕಂಪನಿಗಳ ಶೋಷಣೆ ವಿರುದ್ಧ ನಡೆದ ಕ್ವಿಟ್ ಇಂಡಿಯಾ ಚಳವಳಿಯ ಮಾದರಿಯಲ್ಲಿ, ಇಂದಿನ ವಿದೇಶಿ ಕಾರ್ಪೊರೇಟ್ ಕಂಪನಿಗಳ ಹಸ್ತಕ್ಷೇಪ ಹಾಗೂ ಸರ್ಕಾರಗಳ ನೀತಿಗಳ ವಿರುದ್ಧ ಹೋರಾಟ ನಡೆಸಲಾಗುತ್ತಿದೆ ಎಂದರು.ದೇಶದ ಸಾರ್ವಜನಿಕ ವ್ಯವಸ್ಥೆ ಹಾಗೂ ಕೃಷಿ ಕ್ಷೇತ್ರದ ಮೇಲೆ ಪ್ರಭಾವ ಬೀರುತ್ತಿರುವ ವಿದೇಶಿ ಕಾರ್ಪೊರೇಟ್ ಕಂಪನಿಗಳು ದೇಶದಿಂದ ಹೊರ ಹೋಗಬೇಕು. ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಡಿವಾಣ ಹಾಕಿ, ರೈತರು ಹಾಗೂ ಸಾಮಾನ್ಯ ಜನರ ಬದುಕಿಗೆ ಅನುಕೂಲವಾಗುವ ನೀತಿಗಳನ್ನು ಸರ್ಕಾರ ರೂಪಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಶಿವಪುರ ಮಹದೇವಪ್ಪ, ರಾಜ್ಯ ಮುಖಂಡ ಜ್ಯೋತಿಗೌಡನಪುರ ಸಿದ್ದರಾಜು, ಭಾಸ್ಕರ್ ಇತರರು ಭಾಗವಹಿಸಿದ್ದರು.