ಸಾರಾಂಶ
ಮೀಟರ್ ಬಡ್ಡಿ ಕಿರುಕುಳ: ವ್ಯಕ್ತಿ ನೇಣಿಗೆ ಶರಣು
ಕನ್ನಡ ಪ್ರಭ ವಾರ್ತೆ ಗುಬ್ಬಿ
ಮೀಟರ್ ಬಡ್ಡಿ ಕಿರುಕುಳದಿಂದ ಬೇಸತ್ತ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ನಿಟ್ಟೂರಿನಲ್ಲಿ ನಡೆದಿದೆ. ಮೃತರನ್ನು ರಾಮಸ್ವಾಮಿ (45) ಎಂದು ಗುರುತಿಸಲಾಗಿದೆ.ಮೃತ ರಾಮಸ್ವಾಮಿ ಗ್ರಾಮದ ಯೋಗೀಶ್ ಎಂಬುವರ ಬಳಿ ಸಾಲವನ್ನು ಪಡೆದಿದ್ದು ಸುಮಾರು ಮೂರು ವರ್ಷಗಳ ಕಾಲ ಶೇ10ರಂತೆ ಬಡ್ಡಿಯನ್ನೂ ಸಹ ಕಟ್ಟಿದ್ದರು. ಆದರೂ ಇನ್ನೂ ಹೆಚ್ಚಿನ ಬಡ್ಡಿ ಹಣಕ್ಕಾಗಿ ಕಿರುಕುಳ ನೀಡಿದ್ದರಿಂದ ಬೇಸತ್ತು ನೇಣಿಗೆ ಶರಣಾಗಿದ್ದಾರೆ ಎಂದು ಕುಟುಂಬಸ್ಥರು ದೂರಿದ್ದಾರೆ.
ಹಣಕ್ಕಾಗಿ ಒತ್ತಡ ಹೆಚ್ಚಿದ್ದರಿಂದ ಬಡ್ಡಿ ಹಣವನ್ನು ಕಟ್ಟಲಾಗದೆ, ಅತ್ತ ವ್ಯವಹಾರವನ್ನೂ ಸರಿಯಾಗಿ ನಡೆಸಲಾಗದೆ ಮನನೊಂದಿದ್ದ ರಾಮಸ್ವಾಮಿ, ಮಂಗಳವಾರ ಮಧ್ಯಾಹ್ನ ಮನೆಗೆ ಬಂದು ಕೊಠಡಿಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಸುಮಾರು ಹೊತ್ತಾದರೂ ಕೊಠಡಿಯ ಬಾಗಿಲನ್ನು ತೆರೆಯದಿರುವ ಕಾರಣ ಅನುಮಾನಗೊಂಡ ಪತ್ನಿ ಕೂಗಾಟ ನಡೆಸಿದ್ದಾರೆ. ಆಗ ಅಕ್ಕಪಕ್ಕದವರು ನೆರವಿಗೆ ಬಂದು ಬಾಗಿಲು ಒಡೆದು ನೋಡಿದಾಗ ನೇಣಿಗೆ ಕೊರಳೊಡ್ಡಿರುವುದು ಕಂಡುಬಂದಿದೆ. ಈ ಕುರಿತು ಗುಬ್ಬಿ ಪೊಲೀಸ್ ಠಾಣೆಗೆ ದೂರು ನೀಡಿರುವ ಪತ್ನಿ ಮೀಟರ್ ಬಡ್ಡಿಗಾಗಿ ಒತ್ತಾಯಿಸಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.