ಕನ್ನಡಪ್ರಭ ವಾರ್ತೆ ಬೆಂಗಳೂರು
ದೇಶದಲ್ಲಿ ಮತಗಳ್ಳತನ ನಡೆಯುತ್ತಿದ್ದು, ಇದರ ವಿರುದ್ಧ ನಾವು ಕ್ವಿಟ್ ವೋಟ್ ಚೋರಿ ಚಳವಳಿ ಮಾಡಬೇಕಿದೆ. ರಾಜ್ಯದಲ್ಲೂ ಒಂದು ಕೋಟಿ ಮತದಾರರನ್ನು ಡಿಲೀಟ್ ಮಾಡಲು ಪ್ರಯತ್ನ ನಡೆಯುತ್ತಿದೆ. ಪ್ರತಿಯೊಬ್ಬರೂ ಹೋರಾಟ ಮಾಡಿ ಮತದಾನದ ಹಕ್ಕು ಉಳಿಸಿಕೊಳ್ಳುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.ಕೆಪಿಸಿಸಿ ಕಚೇರಿ ಭಾರತ ಜೋಡೋ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಕ್ವಿಟ್ ಇಂಡಿಯಾ ದಿನದ ಕಾರ್ಯಕ್ರಮದಲ್ಲಿ ಮಾತನಾಡಿ, ದೇಶದಲ್ಲಿ ಮತಚೋರಿ ನಡೆಯುತ್ತಿದೆ. ರಾಜ್ಯದಲ್ಲೂ ಒಂದು ಕೋಟಿ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆಯುವ ಪ್ರಯತ್ನ ನಡೆದಿದೆ. ಮತದಾರರು ಸೂಕ್ತ ದಾಖಲೆಗಳನ್ನು ಸಲ್ಲಿಸಿ ನಮ್ಮ ಮತದಾರರ ಹಕ್ಕು ಉಳಿಸಿಕೊಳ್ಳುವ ಕೆಲಸ ಮಾಡಬೇಕು, ಇದಕ್ಕಾಗಿ ನಮ್ಮ ಸರ್ಕಾರ ಮನೆಬಾಗಿಲಿಗೆ ಶಾಶ್ವತ ವಾಸಸ್ಥಳದ ದೃಢೀಕರಣ ಪತ್ರ ತಲುಪಿಸುವ ಕೆಲಸ ಮಾಡುತ್ತಿದೆ. ನಮ್ಮ ಪಕ್ಷದ ಕಾರ್ಯಕರ್ತರು, ಬಿಎಲ್ಎಗಳು ಅಗತ್ಯ ದಾಖಲೆಗಳನ್ನು ಮನೆಗಳಿಗೆ ತಲುಪಿಸಿ ಮತದಾನದ ಹಕ್ಕು ಉಳಿಸುವ ಕೆಲಸ ಮಾಡಬೇಕು. ಇದರಿಂದ ರಾಹುಲ್ ಗಾಂಧಿ ಅವರನ್ನು ದೇಶದ ಪ್ರಧಾನಮಂತ್ರಿಯಾಗಿಸಲು ಪೂರಕ ಹೆಜ್ಜೆಯಾಗಲಿದೆ ಎಂದರು.
ಮತದಾನದ ಹಕ್ಕು ಇಲ್ಲದವರಿಗೆ ಮುಂದೆ ಗ್ಯಾರಂಟಿ ಯೋಜನೆಗಳು ಸೇರಿ ಸರ್ಕಾರದ ಯೋಜನೆಗಳು ಲಭ್ಯವಾಗುವುದು ಕಷ್ಟವಾಗುತ್ತದೆ. ಬಿಹಾರದಲ್ಲಿ ಈಗಾಗಲೇ ಮತದಾನದ ಹಕ್ಕು ಇರುವವರಿಗೆ ಮಾತ್ರ ಸರ್ಕಾರಿ ಯೋಜನೆ ನೀಡಲಾಗುತ್ತಿದೆ ಎಂದು ಎಚ್ಚರಿಸಿದರು.18 ವರ್ಷ ತುಂಬಿರುವ ಯುವಕರಿಗೆ ಫಾರಂ 6 ಮೂಲಕ ಮತದಾನದ ಹಕ್ಕು ಪಡೆಯಲು ಮುಂದಾಗಿ. ಮತದಾನದ ಹಕ್ಕಿಲ್ಲ ಎಂದರೆ ನಿಮಗೆ ಧ್ವನಿ ಇರುವುದಿಲ್ಲ. ಕಾಂಗ್ರೆಸ್ ಮತದಾನದ ಹಕ್ಕನ್ನು 18 ವರ್ಷಕ್ಕೆ ಇಳಿಸಿದಾಗ ಎಲ್ಲ ವಿರೋಧ ಪಕ್ಷದವರು ವಿರೋಧಿಸಿದರು. ಆದರೆ ರಾಜೀವ್ ಗಾಂಧಿ ಅವರು 10ನೇ ತರಗತಿ ಪಾಸಾದ ವಿದ್ಯಾರ್ಥಿಗೆ ದೇಶ ಕಾಯುವ ಜವಾಬ್ದಾರಿ ನೀಡುತ್ತಿರುವಾಗ ಮತದಾನದ ಹಕ್ಕು ಯಾಕೆ ನೀಡಬಾರದು ಎಂದು ಪ್ರಶ್ನಿಸಿದ್ದರು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಸಚಿವ ರಾಮಲಿಂಗಾರೆಡ್ಡಿ, ಮಾಜಿ ಸಚಿವ ರಾಣಿ ಸತೀಶ್, ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷ ಎಲ್.ಹನುಮಂತಯ್ಯ ಉಪಸ್ಥಿತರಿದ್ದರು.
