೨೦೨೩ ಜೂನ್ ೧೧ ರಂದು ಶಕ್ತಿ ಯೋಜನೆಗೆ ಚಾಲನೆ ನೀಡಿ ಅಂದಿನಿಂದ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗಿ ಇದುವರೆಗೂ ೫೦೦ ಕೋಟಿ ಬಾರಿ ಮಹಿಳಾ ಪ್ರಯಾಣಿಕರು ಯೋಜನೆಯ ಲಾಭವನ್ನು ಪಡೆದಿದ್ದಾರೆ. ಕೋಲಾರ ಜಿಲ್ಲೆಯಲ್ಲಿ ಒಟ್ಟು ೧೦ ಕೋಟಿಗಿಂತ ಹೆಚ್ಚು ಬಾರಿ ಮಹಿಳೆಯರು ಪ್ರಯಾಣಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಕೋಲಾರರಾಜ್ಯದ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿಗಳಲ್ಲಿ ಒಂದಾದ ಶಕ್ತಿ ಯೋಜನೆಯ ೫೦೦ ಕೋಟಿ ಮಹಿಳಾ ಪ್ರಯಾಣ ಸಂಭ್ರಮದ ಅಂಗವಾಗಿ ಸೋಮವಾರ ನಗರದ ಹೊಸ ಬಸ್ ನಿಲ್ದಾಣದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ನೇತೃತ್ವದಲ್ಲಿ ಪ್ರಯಾಣಿಕರಿಗೆ ಟಿಕೆಟ್ ವಿತರಿಸುವ ಮೂಲಕ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು,ಕಳೆದ ೨೦೨೩ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನೇತೃತ್ವದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. ಅದರಂತೆ ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಜಾರಿಗೊಳಿಸಲಾಯಿತು ಎಂದು ಶಾಸಕರು ಹೇಳಿದರು.

ಜಿಲ್ಲೆಯಲ್ಲಿ 10 ಕೋಟಿ ಬಾರಿ ಪ್ರಯಾಣ

೨೦೨೩ ಜೂನ್ ೧೧ ರಂದು ಶಕ್ತಿ ಯೋಜನೆಗೆ ಚಾಲನೆ ನೀಡಿ ಅಂದಿನಿಂದ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗಿ ಇದುವರೆಗೂ ೫೦೦ ಕೋಟಿಗಿಂತ ಹೆಚ್ವಿನ ಮಹಿಳಾ ಪ್ರಯಾಣಿಕರು ಯೋಜನೆಯ ಲಾಭವನ್ನು ಪಡೆದಿದ್ದಾರೆ. ಕೋಲಾರ ಜಿಲ್ಲೆಯಲ್ಲಿ ಒಟ್ಟು ೧೦ ಕೋಟಿಗಿಂತ ಹೆಚ್ಚಿನ ಮಹಿಳಾ ಪ್ರಯಾಣಿಕರು ಈ ಯೋಜನೆಯ ಸೌಲಭ್ಯವನ್ನು ಪಡೆದಿದ್ದಾರೆ ಎಂದು ತಿಳಿಸಿದರು.

ಕೋಲಾರ ತಾಲೂಕಿನಲ್ಲಿ ೨.೭೫ ಲಕ್ಷ, ಕೆಜಿಎಫ್ ೨.೨೭, ಶ್ರೀನಿವಾಸಪುರ ೧.೭೩, ಮುಳಬಾಗಿಲು ೧.೭೯, ಮತ್ತು ಮಾಲೂರು ೧.೭೩ ಲಕ್ಷದಷ್ಟು ಪ್ರಯಾಣಿಕರು ಸೌಲಭ್ಯ ಪಡೆದಿದ್ದಾರೆ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಲ್ಲಿಯವರೆಗೆ ಜನ ಶಕ್ತಿ ಹಾಗೂ ಅಧಿಕಾರ ನೀಡುತ್ತಾರೋ ಅಲ್ಲಿಯ ತನಕ ಯೋಜನೆಗಳು ಮುಂದುವರೆಯುತ್ತವೆ ಎಂದು ತಿಳಿಸಿದರು.

ಬಡವರಿಗೆ ನೀಡಿರುವ ಸೌಲಭ್ಯ

ಶಕ್ತಿ ಯೋಜನೆಯಿಂದ ರಾಜ್ಯದ ಉದ್ದಗಲಕ್ಕೂ ಮಹಿಳೆಯರು ಸರ್ಕಾರಿ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಯಾವುದೇ ಖರ್ಚು ಇಲ್ಲದೆ ಪ್ರಯಾಣ ಮಾಡಬಹುದು. ಅದು ಕಾಂಗ್ರೆಸ್ ಸರ್ಕಾರ ಬಡವರಿಗೆ ಕೊಟ್ಟಿರುವ ಸೌಲಭ್ಯವಾಗಿದೆ. ಗ್ಯಾರಂಟಿ ಯೋಜನೆ ಬಗ್ಗೆ ಯಾರು ಎಷ್ಟೇ ಟೀಕೆ ಮಾಡಿದರೂ ಅವುಗಳು ಕಾಲಕ್ರಮೇಣ ಸತ್ತು ಹೋಗುತ್ತವೆ. ನಮ್ಮ ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ. ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿರುವ ಕಾರಣಕ್ಕೆ ಕಾಂಗ್ರೆಸ್ ಯಶಸ್ಸು ಪಡೆದಿದೆ. ಇದೆಲ್ಲವನ್ನು ಜಾರಿ ಮಾಡಲು ಜನ ನೀಡಿರುವ ಶಕ್ತಿಯಿಂದ ನಮಗೆ ಬಲಬಂದಿದೆ ಎಂದರು.ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ತಾಲೂಕು ಅಧ್ಯಕ್ಷ ವೇಮಗಲ್ ಮುನಿಯಪ್ಪ, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಸದಸ್ಯರಾದ ಅಫ್ಸರ್, ರಫೀಕ್, ಕೆ.ಎಸ್.ಆರ್.ಟಿ.ಸಿ ಡಿಸಿ ಶ್ರೀನಾಥ್, ಮ್ಯಾನೇಜರ್ ಶ್ರೀನಿವಾಸಯ್ಯ, ನಿಲ್ದಾಣಾಧಿಕಾರಿ ಶಿವಕುಮಾರ್, ಕೋಮುಲ್ ನಿರ್ದೇಶಕ ಷಂಷೀರ್, ಗ್ಯಾರಂಟಿ ಸಮಿತಿ ಸದಸ್ಯರಾದ ಭರತ್, ವಿನೋದ್, ಮಂಗಳಾ, ಬಾಬು, ಪುನೀತ್, ಇಮ್ರಾನ್, ವಿಜಯಕುಮಾರ್, ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ಕುರಿಗಳ ರಮೇಶ್, ಯಲವಾರ ರಾಜಕುಮಾರ್ ಇದ್ದರು.