ಕನ್ನಡಪ್ರಭ ವಾರ್ತೆ ಬೇಲೂರು
ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಸೂಚನೆಯಂತೆ ಜುಲೈ 25, 26 ರಂದು ವಿಧಾನಸಭಾ ಕ್ಷೇತ್ರದಲ್ಲಿ ಮನೆ ಮನೆಗೆ ತೆರಳಿ ಎಸ್ಐಆರ್ ಅಭಿಯಾನ ನಡೆಸಲಾಗುವುದು ಎಂದು ಶಾಸಕ ಎಚ್.ಕೆ.ಸುರೇಶ್ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ತಾಲೂಕಿನಲ್ಲಿ ಶೇ.80ರಷ್ಟು ಪರಿಷ್ಕರಣೆ ಕಾರ್ಯ ಪೂರ್ಣಗೊಂಡಿದ್ದು, ಉಳಿದ ಶೇ.20ರಷ್ಟು ಕಾರ್ಯವನ್ನು ಶೀಘ್ರ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸರಿಯಾಗಿದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಬೇಕು. ಅರ್ಹ ಮತದಾರರ ಹೆಸರು ಸೇರ್ಪಡೆ, ಹೆಸರು ಅಥವಾ ವಿಳಾಸದಲ್ಲಿನ ತಿದ್ದುಪಡಿ, ಅಗತ್ಯ ದಾಖಲೆಗಳ ಸಲ್ಲಿಕೆ ಸೇರಿ ಮತದಾರರ ಪಟ್ಟಿಗೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆಗಳಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಸಹಕರಿಸಬೇಕು ಎಂದು ಮನವಿ ಮಾಡಿದರು.
ಮನೆ ಮನೆಗೆ ಭೇಟಿ ನೀಡುವ ಅಧಿಕಾರಿಗಳು ಹಾಗೂ ಬೂತ್ಮಟ್ಟದ ಅಧಿಕಾರಿಗಳಿಗೆ ಸಾರ್ವಜನಿಕರು ಅಗತ್ಯ ಮಾಹಿತಿ ಮತ್ತು ದಾಖಲೆಗಳನ್ನು ಒದಗಿಸುವ ಮೂಲಕ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಯಶಸ್ವಿಯಾಗಲು ಸಹಕಾರ ನೀಡಬೇಕು. ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಹಾಗೂ ಮತದಾರರ ಪಟ್ಟಿಯಲ್ಲಿ ಯಾವುದೇ ರೀತಿಯ ಲೋಪದೋಷಗಳು ಉಳಿಯದಂತೆ ಎಲ್ಲರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.ಬಿಜೆಪಿ ಮುಖಂಡ ರಂಗನಾಥ ಮಾತನಾಡಿ, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಎಸ್ಐಆರ್ ಪರಿಷ್ಕರಣೆ ಕಾರ್ಯ ಉತ್ತಮವಾಗಿ ನಡೆಯುತ್ತಿದೆ. ಉಳಿದಿರುವ ಪರಿಷ್ಕರಣೆ ಕಾರ್ಯವನ್ನು ಪೂರ್ಣಗೊಳಿಸುವ ಉದ್ದೇಶದಿಂದ ಜುಲೈ 25 ಮತ್ತು 26ರಂದು ಶಾಸಕ ಎಚ್.ಕೆ.ಸುರೇಶ್ ಅವರ ನೇತೃತ್ವದಲ್ಲಿ ಮನೆ ಮನೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಪುಟ್ಟಸ್ವಾಮಿ, ಶೋಭಾ ಗಣೇಶ್ ಸೇರಿ ಮತ್ತಿತರರು ಉಪಸ್ಥಿತರಿದ್ದರು.