ಸುಪ್ರಿಂನ ವಿಶೇಷ ಲೋಕ ಅದಾಲತ್ ಸಂಬಂಧಿಸಿದಂತೆ ಜಿಲ್ಲಾ ನ್ಯಾಯಾಧೀಶ ರೋಣ ವಾಸುದೇವ ಸುದ್ದಿಗಾರರಿಗೆ ಮಾಹಿತಿ ನೀಡಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥ ಪಡಿಸಿಕೊಳ್ಳಲು ಸುಪ್ರೀಂ ಕೋರ್ಟ್-ಸಮಾಧಾನ್ ಸಮರೋಹ್ ಎನ್ನುವ ವಿಶೇಷ ಲೋಕಾದಾಲತ್ ಆಯೋಜಿಸಿದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ ತಿಳಿಸಿದರು.

ನಗರದ ಜಿಲ್ಲಾ ನ್ಯಾಯಾಲಯದ ಮಧ್ಯಸ್ಥಿಕೆ ಕೇಂದ್ರದಲ್ಲಿ ಗುರುವಾರ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಯಲ್ಲಿ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಅನುಶಿವರಾಮನ್ ಹಾಗೂ ಸದಸ್ಯ ಕಾರ್ಯದರ್ಶಿ ಎಚ್.ಶಶಿಧರ್ ಶೆಟ್ಟಿ ಅವರು ಆನ್‍ಲೈನ್ ಮೂಲಕ 30 ರಾಜ್ಯದ ಎಲ್ಲ ಜಿಲ್ಲೆಗಳ ಪತ್ರಕರ್ತರೊಂದಿಗೆ ನಡೆಸಿದ ಸಂವಾದದ ಬಳಿಕ ಅವರು ಮಾಹಿತಿ ನೀಡಿದರು.

ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ 2026ರ ಆಗಸ್ಟ್ 21, 22 ಮತ್ತು 23ರಂದು ಭಾರತ ಸರ್ವೋಚ್ಚ ನ್ಯಾಯಾಲಯದ ವಿಶೇಷ ಲೋಕ್ ಅದಾಲತ್-ಸಮಾಧಾನ್ ಸಮರೋಹ್ ನಡೆಯಲಿದೆ. ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದಂತೆ ಒಟ್ಟು 4,328 ಪ್ರಕರಣಗಳನ್ನು ವಿಶೇಷ ಲೋಕಾದಾಲತ್‍ಗಾಗಿ ಗುರುತಿಸಲಾಗಿದೆ. ಇದರಲ್ಲಿ ಚಿತ್ರದುರ್ಗ ಜಿಲ್ಲೆಗೆ ಸಂಬಂಧಿಸಿದ 58 ಪ್ರಕರಣಗಳು ಸೇರಿವೆ.

ಈ ಪ್ರಕರಣಗಳನ್ನು ಇತ್ಯರ್ಥಪಡಿಸಲು ಜಿಲ್ಲಾ ಮತ್ತು ತಾಲೂಕು ಕಾನೂನು ಸೇವಾ ಸಮಿತಿಗಳು ಹಾಗೂ ರಾಜ್ಯ ಮಟ್ಟದ ಕಾನೂನು ಸೇವಾ ಪ್ರಾಧಿಕಾರಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.

ಪ್ರಕರಣದ ಹಿತದೃಷ್ಟಿಯಿಂದ ಪಕ್ಷಗಾರರು ಖುದ್ದಾಗಿ ಹಾಜರಾಗಲು ಸಾಧ್ಯವಾಗದಿದ್ದರೆ, ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಹನ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಮೊಬೈಲ್ ಮತ್ತು ಕಂಪ್ಯೂಟರ್ ಗಳ ಮೂಲಕ ತಾವಿದ್ದ ಸ್ಥಳದಿಂದಲೇ ಮಧ್ಯಸ್ಥಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿ ಪ್ರಕರಣವನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಬಹುದು. ಹಲವು ವರ್ಷಗಳಿಂದ ಸುಪ್ರೀಂ ಕೋರ್ಟ್‍ನಲ್ಲಿ ಬಾಕಿ ಇರುವ ಪ್ರಕರಣಗಳಿಂದಾಗಿ ಪಕ್ಷಗಾರರ ಮೇಲೆ ಒತ್ತಡವಿರುತ್ತದೆ, ಅಂತಹ ಪ್ರಕರಣಗಳನ್ನು ಪರಸ್ಪರ ಮಾತುಕತೆಯ ಮೂಲಕ ಇತ್ಯರ್ಥಪಡಿಸಿಕೊಂಡರೆ ಶೀಘ್ರವಾಗಿ ನ್ಯಾಯ ಸಿಗಲಿದೆ. ಯಾವುದೇ ವಿವಾದವಿರಲಿ, ಅದನ್ನು ಕಾನೂನು ಚೌಕಟ್ಟಿನಲ್ಲಿ ಮಾತುಕತೆಯ ಮೂಲಕ ಬಗೆಹರಿಸಲು ಸಾಧ್ಯವಿದೆ. ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಮಟ್ಟದಲ್ಲಿ ಬಾಕಿ ಇರುವ ಸಂಕೀರ್ಣ ಪ್ರಕರಣಗಳಿಗೂ ಇಲ್ಲಿ ಪರಿಹಾರ ಕಂಡುಕೊಳ್ಳಬಹುದು.

ವೈಯಕ್ತಿಕ ಘನತೆಗೆ ಸಂಬಂಧಿಸಿದ ಅಥವಾ ಮಾನನಷ್ಟ ಮೊಕದ್ದಮೆಗಳಂತಹ ಸೂಕ್ಷ್ಮ ಪ್ರಕರಣಗಳನ್ನು ಕೂಡ ಈ ವಿಶೇಷ ಲೋಕ ಅದಾಲತ್‍ನಲ್ಲಿ ಚರ್ಚಿಸಿ ಇತ್ಯರ್ಥಪಡಿಸಲು ಅವಕಾಶವಿದೆ. ಮಾಧ್ಯಮಗಳು ಈ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಸುಪ್ರೀಂ ಕೋರ್ಟ್‍ನಲ್ಲಿ ಪ್ರಕರಣವಿದ್ದರೂ ಸಹ ಅದನ್ನು ಮಧ್ಯಸ್ಥಿಕೆ ಮೂಲಕ ಮುಗಿಸಿಕೊಳ್ಳಬಹುದು ಎಂಬ ಮಾಹಿತಿ ಜನರಿಗೆ ತಲುಪಿದರೆ ಹೆಚ್ಚಿನ ಫಲಿತಾಂಶ ನಿರೀಕ್ಷಿಸಲು ಸಾಧ್ಯ ಎಂದುರೋಣ ವಾಸುದೇವ ಮನವಿ ಮಾಡಿದರು. ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಇದ್ದರು.