ಕ್ರಾಂತಿಕಾರಿ ಚಿಂತನೆಯ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ತಂದ ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣದ ಜೀವಂತ ಮಾದರಿಯಾಗಿದ್ದಾರೆ ಎಂದು ಹೇಳಿದರು. ಇಂದಿನ ಮಹಿಳೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ವೈಜ್ಞಾನಿಕ ಕ್ಷೇತ್ರಗಳ ಜೊತೆಗೆ ವಾಹನ ಚಾಲನೆ ಸೇರಿದಂತೆ ಹಲವು ಸವಾಲಿನ ವೃತ್ತಿಗಳಲ್ಲೂ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾಳೆ ಎಂದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ಮಹಿಳೆಯರು ಸಂಘಟಿತರಾದಾಗ ಮಾತ್ರ ತಮ್ಮ ಹಕ್ಕುಗಳು ಹಾಗೂ ಗೌರವವನ್ನು ಸಮರ್ಪಕವಾಗಿ ಪಡೆಯಲು ಸಾಧ್ಯವಾಗುತ್ತದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕಿ ಕಮಲ ಹೇಳಿದರು.ನಗರದ ಬಿ. ಎಚ್. ರಸ್ತೆಯ ಸರ್ಕಾರಿ ಹಿರಿಯ ಪ್ರಾಥಮಿಕ ರಾಮಣ್ಣ ಶಾಲಾ ಆವರಣದಲ್ಲಿ ತಾಲೂಕು ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ವತಿಯಿಂದ ಆಯೋಜಿಸಿದ್ದ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಕ್ರಾಂತಿಕಾರಿ ಚಿಂತನೆಯ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ತಂದ ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣದ ಜೀವಂತ ಮಾದರಿಯಾಗಿದ್ದಾರೆ ಎಂದು ಹೇಳಿದರು. ಇಂದಿನ ಮಹಿಳೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ವೈಜ್ಞಾನಿಕ ಕ್ಷೇತ್ರಗಳ ಜೊತೆಗೆ ವಾಹನ ಚಾಲನೆ ಸೇರಿದಂತೆ ಹಲವು ಸವಾಲಿನ ವೃತ್ತಿಗಳಲ್ಲೂ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾಳೆ ಎಂದರು.ಸಂಘಟನೆ ಶಕ್ತಿಯ ಮೂಲವಾಗಿದ್ದು, ಸಂಘಟನೆಯ ಮೂಲಕವೇ ಹಕ್ಕುಗಳು ಹಾಗೂ ಅವಕಾಶಗಳನ್ನು ಪಡೆದುಕೊಳ್ಳಲು ಸಾಧ್ಯವಾಗಿದೆ ಎಂದು ತಿಳಿಸಿದ ಕಮಲ, ರಾಜ್ಯ ಮಟ್ಟದಲ್ಲಿ ಸಾವಿತ್ರಿಬಾಯಿ ಪುಲೆ ಸಂಘ ಸ್ಥಾಪನೆಯಾದ ಬಳಿಕ ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿಯೂ ಸಂಘಟನೆ ಬಲಿಷ್ಠವಾಗಿ ಬೆಳೆಯುತ್ತಿದೆ. ಸಂಘವನ್ನು ಇನ್ನಷ್ಟು ಸದೃಢಗೊಳಿಸಲು ಶಿಕ್ಷಕಿಯರು ಪರಸ್ಪರ ಪ್ರಚಾರದ ಮೂಲಕ ಸಂಘಟನೆಗೆ ಶಕ್ತಿ ತುಂಬಬೇಕು ಎಂದು ಕರೆ ನೀಡಿದರು.ಉಪನ್ಯಾಸಕಿ ಸುಧಾ ಮಾತನಾಡಿ, ಹೆಣ್ಣೊಂದು ಕಲಿತರೆ ನಾಡೆಲ್ಲ ಕಲಿತಂತೆ, ಹೆಣ್ಣೊಂದು ಕಲಿಸಿದರೆ ನಾಡೆಲ್ಲ ಕಲಿತಂತೆ ಎಂಬ ಸಾವಿತ್ರಿಬಾಯಿ ಫುಲೆ ಅವರ ಸಂದೇಶವು ಇಂದಿಗೂ ಪ್ರಸ್ತುತವಾಗಿದೆ ಎಂದು ಹೇಳಿದರು. ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಅಧ್ಯಕ್ಷೆ ಕುಸುಮ, ಸಾವಿತ್ರಿಬಾಯಿ ಪುಲೆ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುವಾಗ ಎದುರಿಸಿದ ಸವಾಲುಗಳು ಹಾಗೂ ಅವುಗಳನ್ನು ಧೈರ್ಯದಿಂದ ಎದುರಿಸಿ ಸಾಧನೆ ಮಾಡಿದ ಕುರಿತು ವಿವರಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಹಿರಿಯ ಪತ್ರಕರ್ತ ಎಚ್. ಡಿ. ಸೀತಾರಾಂ, ಸರ್ಕಾರ ಅಧಿಕೃತವಾಗಿ ಸಾವಿತ್ರಿಬಾಯಿ ಫುಲೆ ಜನ್ಮದಿನ ಆಚರಣೆಯನ್ನು ಜಾರಿಗೊಳಿಸುವುದಕ್ಕೂ ಮುನ್ನವೇ ತಾಲೂಕಿನಲ್ಲಿ ಶಿಕ್ಷಕಿಯರು ಈ ದಿನವನ್ನು ಅರ್ಥಪೂರ್ಣವಾಗಿ ಆಚರಿಸುತ್ತಾ ಬಂದಿರುವುದು ಶ್ಲಾಘನೀಯ ಎಂದು ಹೇಳಿದರು. ಶಿಕ್ಷಕಿಯರು ಸಾವಿತ್ರಿಬಾಯಿ ಫುಲೆ ಅವರ ಆದರ್ಶಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮವನ್ನು ಸಂಘದ ಕಾರ್ಯದರ್ಶಿ ಕಾತ್ಯಾಯಿನಿ ನಿರ್ವಹಿಸಿದರು.