ಕರಡಿ ಬಸವೇಶ್ವರ ಜಾತ್ರೆಯಲ್ಲಿ ಮತ ಜಾಗೃತಿ

| Published : Apr 21 2024, 02:20 AM IST

ಸಾರಾಂಶ

ಪ್ರಜಾಪ್ರಭುತ್ವದ ಸುಭದ್ರತೆಗೆ ಪ್ರತಿಯೊಬ್ಬ ನಾಗರಿಕರು ಮೇ.7 ರಂದು ಜರಗುವ ಮತದಾನ ಕೇಂದ್ರಕ್ಕೆ ಬಂದು ಮತ ಚಲಾಯಿಸಬೇಕು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಪವಿತ್ರವಾಗಿದೆ. ಎಲ್ಲರೂ ತಪ್ಪದೇ ತಮ್ಮ ಮತದಾನದ ಹಕ್ಕು ಚಲಾಯಿಸಬೇಕೆಂದು ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಹಾಗೂ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಹೇಳಿದರು.

ಇಳಕಲ್ಲ ತಾಲೂಕಿನ ಕರಡಿ ಗ್ರಾಮದಲ್ಲಿ ಗುರುವಾರ ನಡೆದ ಬಸವೇಶ್ವರ ಜಾತ್ರೆಯಲ್ಲಿ ಮತದಾನ ಜಾಗೃತಿ ಮೂಡಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಸುಭದ್ರತೆಗೆ ಪ್ರತಿಯೊಬ್ಬ ನಾಗರಿಕರು ಮೇ.7 ರಂದು ಜರಗುವ ಮತದಾನ ಕೇಂದ್ರಕ್ಕೆ ಬಂದು ಮತ ಚಲಾಯಿಸಬೇಕು. ಜೊತೆಗೆ ಇತರರು ತಪ್ಪದೇ ಮತ ಚಲಾಯಿಸುವಂತೆ ಮಾಡಬೇಕು ಎಂದರು.

ನಮ್ಮದು ಪ್ರಜಾಪ್ರಭುತ್ವ ದೇಶ. ಆದ್ದರಿಂದ ಪ್ರಜಾ ಪ್ರತಿನಿಧಿಗಳನ್ನು ಆಯ್ಕೆಮಾಡಿ ಕಳುಹಿಸಬೇಕಾಗಿದೆ. ಪ್ರತಿ 5 ವರ್ಷಗಳಿಗೊಮ್ಮೆ ಬರುವ ಈ ಪ್ರಜಾಪ್ರಭುತ್ವದ ಚುನಾವಣಾ ಹಬ್ಬದಲ್ಲಿ ಯೋಗ್ಯ ವ್ಯಕ್ತಿಯನ್ನು ಆಯ್ಕೆ ಮಾಡಬೇಕು. ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೇ ನಿರ್ಭಯದಿಂದ ಮತ ಚಲಾಯಿಸುವಂತಾಗಬೇಕು. ನಿಮ್ಮ ಅಮೂಲ್ಯ ಮತದಾನದಲ್ಲಿ ದೇಶದ ಭವಿಷ್ಯ ಅಡಗಿದೆ. ಈ ಕಾರಣದಿಂದ ಮತದಾನ ಪ್ರಮಾಣ ಹೆಚ್ಚಳಕ್ಕೆ ಸ್ವೀಪ್ ಸಮಿತಿ ಮೂಲಕ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು..

ಜಾಗೃತಿ ಕಾರ್ಯಕ್ರಮದಲ್ಲಿ ಇಳಕಲ್ಲ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮುರಳಿಧರ ದೇಶಪಾಂಡೆ, ನರೇಗಾ ಯೋಜನೆಯ ತಾ.ಪಂ ಸಹಾಯಕ ನಿರ್ದೇಶಕ ಶಿರಗುಪ್ಪಿ ಸೇರಿದಂತೆ ಇತರರು ಇದ್ದರು.