ಜ.2ರಂದು 10ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ

| Published : Jan 01 2024, 01:15 AM IST

ಸಾರಾಂಶ

ಸಾಹಿತ್ಯ, ಸಾಹಿತಿಯ ಅವತಾರ ಆಗಬೇಕಾದರೆ ಅದಕ್ಕೆ ವಯಸ್ಸಿನ ಅಂತರವಿಲ್ಲ. ಚಿಕ್ಕಂದಿನಿಂದಲೇ ಮಕ್ಕಳಿಗೆ ಸಾಹಿತ್ಯ ಹವ್ಯಾಸ ಬೆಳೆಸಿದರೆ ಅವರು ಭವಿಷ್ಯದಲ್ಲಿ ದೇಶಕ್ಕೆ ಆಸ್ತಿಯಾಗುತ್ತಾರೆ ಎಂಬ ನಿಟ್ಟಿನಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನಗಳು ಜಾರಿಯಲ್ಲಿವೆ. ಭದ್ರಾವತಿಯಲ್ಲೂ 10ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಜ.2ರಂದು ವೇದಿಕೆ ಸಜ್ಜಾಗಿದೆ. ಸತ್ಯಸಾಯಿ ಪ್ರೌಢಶಾಲೆ ವಿದ್ಯಾರ್ಥಿನಿ ಕೆ.ಆರ್.ಸೇವಂತಿ ಸಮ್ಮೇಳನಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷೆ ಎಂ.ಎಸ್. ಸುಧಾಮಣಿ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ, ಭದ್ರಾವತಿ

10ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಜ.2ರಂದು ನ್ಯೂಟೌನ್ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯಲ್ಲಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷೆ ಎಂ.ಎಸ್. ಸುಧಾಮಣಿ ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ಸಹಯೋಗದೊಂದಿಗೆ ಸಮ್ಮೇಳನ ಆಯೋಜಿಸಲಾಗಿದೆ ಅಂದು ಬೆಳಗ್ಗೆ 10 ಗಂಟೆಗೆ ಭದ್ರಾ ಕಾಲೋನಿ ಭದ್ರಾ ಪ್ರೌಢಶಾಲೆ 9ನೇ ತರಗತಿ ವಿದ್ಯಾರ್ಥಿನಿ ಸಿಂಚನ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಶ್ರೀ ಸತ್ಯಸಾಯಿ ಪ್ರೌಢಶಾಲೆ 8ನೇ ತರಗತಿ ವಿದ್ಯಾರ್ಥಿನಿ ಕೆ.ಆರ್. ಸೇವಂತಿ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಶಾಸಕ ಡಿ.ಕೆ. ಸಂಗಮೇಶ್ವರ್, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಡಿ.ಮಂಜುನಾಥ್, ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ ಡಿ.ಪ್ರಭಾಕರ ಬೀರಯ್ಯ, ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ. ನಾಗೇಂದ್ರಪ್ಪ, ಕಸಾಪ ತಾಲೂಕು ಅಧ್ಯಕ್ಷ ಕೋಡ್ಲು ಯಜ್ಞಯ್ಯ, ಕರ್ನಾಟಕ ಜಾನಪದ ಪರಿಷತ್ತು ತಾಲೂಕು ಅಧ್ಯಕ್ಷ ಎಂ.ಆರ್. ರೇವಣಪ್ಪ ಇನ್ನಿತರರು ಪಾಲ್ಗೊಳ್ಳಲಿದ್ದಾರೆ ಎಂದರು.

ಇದಕ್ಕೂ ಮೊದಲು ಬೆಳಗ್ಗೆ 9.30ಕ್ಕೆ ಪ್ರಶಾಂತಿ ಸೇವಾ ಟ್ರಸ್ಟ್ ಜಂಟಿ ಕಾರ್ಯದರ್ಶಿ ಶಿವಪ್ಪ ರಾಷ್ಟ್ರ ಧ್ವಜಾರೋಹಣ, ಸಂಚಾರಿ ಪೊಲೀಸ್ ಠಾಣಾಧಿಕಾರಿ ಶಾಂತಲಾ ನಾಡಧ್ವಜಾರೋಹಣ ಹಾಗೂ ಎಂ.ಎಸ್. ಸುಧಾಮಣಿ ಕನ್ನಡ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದರು.

ಉದ್ಘಾಟನಾ ಸಮಾರಂಭದ ನಂತರ ಕವಿಗೋಷ್ಠಿ, ಕಥಾಗೋಷ್ಠಿ ಮತ್ತು ಪ್ರಚಲಿತ ವಿದ್ಯಾಮಾನಗಳು ಕುರಿತ ಗೋಷ್ಠಿ ನಡೆಯಲಿವೆ. ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್, ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ವಿ.ಎಚ್. ಪಂಚಾಕ್ಷರಿ, ಶಿಕ್ಷಣ ಸಂಯೋಜಕ ರವಿಕುಮಾರ್, ಉದ್ಯಮಿ ಬಿ.ಕೆ. ಜಗನ್ನಾಥ್, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಕಣ್ಣಪ್ಪ, ಸಮಾಜ ಸೇವಕ ವೆಂಕಟರಮಣ ಶೇಟ್, ಸಿದ್ದಪ್ಪ ಮತ್ತು ಎಚ್.ಪಿ. ಪ್ರಸನ್ನ ಉಪಸ್ಥಿತರಿರುವರು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಕೋಡ್ಲು ಯಜ್ಞಯ್ಯ, ಜೆ.ಉಮಾಪತಿ, ಎಚ್.ತಿಮ್ಮಪ್ಪ, ಗಂಗರಾಜ್, ಬಿ.ಕಾಂತಪ್ಪ, ತಿಪ್ಪಮ್ಮ ಮತ್ತು ಬಿ.ಎಸ್. ಪ್ರಕಾಶ್ ಇನ್ನಿತರರು ಉಪಸ್ಥಿತರಿದ್ದರು.

- - -

-ಡಿ31ಬಿಡಿವಿಟಿ:

ಭದ್ರಾವತಿಯಲ್ಲಿ 10ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಕುರಿತು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷೆ ಎಂಎಸ್ ಸುಧಾಮಣಿ ಮಾಹಿತಿ ನೀಡಿದರು.