ಹೊಸಕೋಟೆ: ಗ್ರಾಮೀಣರಿಗೆ ಉದ್ಯೋಗದ ಜೊತೆಗೆ ಶಾಶ್ವತ ಆಸ್ತಿ ನಿರ್ಮಾಣಕ್ಕೂ ಅವಕಾಶ ಕಲ್ಪಿಸಿರುವ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್ಗಾರ್ ಆಂಡ್ ಆಜೀವಿಕಾ ಮಿಷನ್(ಗ್ರಾಮೀಣ) ವಿಬಿ ಜಿ ರಾಮ್ ಜಿ ಯೋಜನೆಯ ಸೌಲಭ್ಯಗಳನ್ನು ಅರ್ಹರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಪಂ ಉಪ ಕಾರ್ಯದರ್ಶಿ ಶಿವಕುಮಾರ್ ಕರೆ ನೀಡಿದರು
ಹೊಸಕೋಟೆ: ಗ್ರಾಮೀಣರಿಗೆ ಉದ್ಯೋಗದ ಜೊತೆಗೆ ಶಾಶ್ವತ ಆಸ್ತಿ ನಿರ್ಮಾಣಕ್ಕೂ ಅವಕಾಶ ಕಲ್ಪಿಸಿರುವ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್ಗಾರ್ ಆಂಡ್ ಆಜೀವಿಕಾ ಮಿಷನ್(ಗ್ರಾಮೀಣ) ವಿಬಿ ಜಿ ರಾಮ್ ಜಿ ಯೋಜನೆಯ ಸೌಲಭ್ಯಗಳನ್ನು ಅರ್ಹರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಪಂ ಉಪ ಕಾರ್ಯದರ್ಶಿ ಶಿವಕುಮಾರ್ ಕರೆ ನೀಡಿದರು.
ತಾಲೂಕಿನ ಕುಂಬಳಹಳ್ಳಿ ಗ್ರಾಪಂ ಆವರಣದಲ್ಲಿ ಆಯೋಜಿಸಿದ್ದ ಜಾಬ್ ಕಾರ್ಡ್ ಹಾಗೂ ವೈಯಕ್ತಿಕ ಕಾಮಗಾರಿಗಳ ಆದೇಶ ಪತ್ರ ವಿತರಿಸಿ ಮಾತನಾಡಿದ ಅವರು, ಹಿಂದೆ ನರೇಗಾ ಯೋಜನೆಯಡಿ ಕುಟುಂಬವೊಂದಕ್ಕೆ 100 ದಿನಗಳ ಉದ್ಯೋಗ ನೀಡಲಾಗುತ್ತಿತ್ತು. ಇದೀಗ ವಿಬಿ-ಜಿ ರಾಮ್ ಜಿ ಯೋಜನೆಯಡಿ 125 ದಿನಗಳ ಉದ್ಯೋಗ ಒದಗಿಸಲು ಅವಕಾಶ ಕಲ್ಪಿಸಲಾಗಿದೆ. ಹಿಂದೆ 370 ರು. ಇದ್ದ ದಿನಗೂಲಿ ಈಗ 382 ರು. ನಿಗದಿಯಾಗಿದೆ. ಉದ್ಯೋಗ ಚೀಟಿ (ಜಾಬ್ ಕಾರ್ಡ್) ಹೊಂದಿರುವವರು ಕೆಲಸದ ಬೇಡಿಕೆ ಸಲ್ಲಿಸಿದ ಬಳಿಕ ಉದ್ಯೋಗ ಒದಗಿಸುವ ವ್ಯವಸ್ಥೆ ಇದೆ. ಈ ಯೋಜನೆಯಡಿ ಕೇವಲ ಕೂಲಿ ಉದ್ಯೋಗಕ್ಕೆ ಸೀಮಿತವಾಗದೆ, ಗ್ರಾಮೀಣರು ತಮ್ಮ ಜಮೀನುಗಳಲ್ಲಿ ಶಾಶ್ವತ ಆಸ್ತಿಗಳನ್ನು ನಿರ್ಮಿಸಿಕೊಳ್ಳಲು ಅವಕಾಶವಿದೆ. ದನದ ಕೊಟ್ಟಿಗೆ, ಕೋಳಿ ಸಾಕಾಣಿಕೆ ಶೆಡ್, ಕೃಷಿ ಹೊಂಡ, ಬೋರ್ವೆಲ್ಗಳಿಗೆ ರೀಚಾರ್ಜ್ ಪಿಟ್, ಇಂಜೆಕ್ಷನ್ ವೆಲ್ ಸೇರಿದಂತೆ ಹಲವು ವೈಯಕ್ತಿಕ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ ಎಂದು ತಿಳಿಸಿದರು.ಪಿಡಿಒ ಚೇತನ್ ಮಾತನಾಡಿ, ವಿಬಿ ಜಿ ರಾಮ್ ಜಿ ಯೋಜನೆಯ ಸೌಲಭ್ಯ ಪಡೆಯಲು ಮೊದಲಿಗೆ ಅರ್ಹರು ಉದ್ಯೋಗ ಚೀಟಿ ಅಥವಾ ಜಾಬ್ ಕಾರ್ಡ್ ಹೊಂದಿರಬೇಕು. ಹಲವು ಕಾಮಗಾರಿಗಳ ಜತೆಗೆ ಈ ಹಿಂದೆ ಅವಕಾಶವಿರದ ಕೆಲವು ಕಾಮಗಾರಿಗಳಿಗೂ ಇದೀಗ ಅವಕಾಶ ಕಲ್ಪಿಸಲಾಗಿದೆ. ವಸತಿ ಯೋಜನೆಯಡಿ ಮನೆ ಮಂಜೂರಾಗಿರುವ ಫಲಾನುಭವಿಗಳು ಮನೆ ನಿರ್ಮಾಣಕ್ಕೆ ಸಂಬಂಧಿಸಿದ ಕಾಮಗಾರಿಗಳಿಗೂ ಯೋಜನೆಯ ನೆರವು ಪಡೆಯಬಹುದಾಗಿದೆ ಎಂದರು.
ಕಾರ್ಯಕ್ರಮದಲ್ಲಿ ತಾಪಂ ಇಒ ಮುನಿಯಪ್ಪ, ಗ್ರಾಪಂ ಕಾರ್ಯದರ್ಶಿ ಅನಸೂಯ, ಮಾಹಿತಿ ಶಿಕ್ಷಣ ಮತ್ತು ಸಂವಹನಾಧಿಕಾರಿ ಮಧುಸೂದನ್, ಎಂಜಿನಿಯರ್ ರಾಜೇಶ್ ಉಪಸ್ಥಿತರಿದ್ದರು.ಫೋಟೋ: 24 ಹೆಚ್ಎಸ್ಕೆ 1
ಹೊಸಕೋಟೆ ತಾಲೂಕಿನ ಕುಂಬಳಹಳ್ಳಿ ಗ್ರಾಪಂ ಆವರಣದಲ್ಲಿ ಜಾಬ್ ಕಾರ್ಡ್ ಹಾಗೂ ವೈಯಕ್ತಿಕ ಕಾಮಗಾರಿಗಳ ಆದೇಶ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಜಿಪಂ ಉಪ ಕಾರ್ಯದರ್ಶಿ ಶಿವಕುಮಾರ್ ಆದೇಶ ಪತ್ರಗಳನ್ನು ವಿತರಿಸಿದರು.