ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ

| N/A | Published : Jun 17 2025, 02:36 AM IST / Updated: Jun 17 2025, 10:13 AM IST

ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Share this Article
  • FB
  • TW
  • Linkdin
  • Email

ಸಾರಾಂಶ

ಮುಂಬರುವ ದಿನಗಳಲ್ಲಿ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು.

 ಬಳ್ಳಾರಿ :  ಮುಂಬರುವ ದಿನಗಳಲ್ಲಿ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಮಕ್ಕಳ ಕಲಿಕೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ನಮ್ಮ ಸರ್ಕಾರ ಶಾಲೆಗಳಿಗೆ ಮೂಲಭೂತ ಸೌಕರ್ಯ, ಗುಣಮಟ್ಟ ಶಿಕ್ಷಣದ ಬೋಧನೆಗೆ ಆದ್ಯತೆ ನೀಡುತ್ತಿದೆ. ಈ ನಿಟ್ಟಿನಲ್ಲಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಸಲು ನಿರ್ಧರಿಸಲಾಗಿದೆ. ಇದಕ್ಕೆ ಮುಖ್ಯಮಂತ್ರಿಯವರು ಸಮ್ಮತಿ ನೀಡಿದ್ದಾರೆ. ಹೆಚ್ಚಿನ ಶಿಕ್ಷಕರನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡಲಾಗುತ್ತಿದೆ ಎಂದು ಹೇಳಿದರು.

ಅಧಿಕಾರಿಗಳಿಗೆ ವಿಶೇಷ ಜವಾಬ್ದಾರಿ:

ಶಿಕ್ಷಣ ಇಲಾಖೆಯ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿಗೆ ವಿಶೇಷ ಜವಾಬ್ದಾರಿ ವಹಿಸಲಾಗಿದ್ದು, ಶಾಲಾ ಸಮಯ ಹೊರತುಪಡಿಸಿ, ಸಂಜೆ ಸಮಯದಲ್ಲೂ ಮಕ್ಕಳಿಗೆ ವಿಶೇಷ ತರಗತಿಗಳ ಮೂಲಕ ಅಭ್ಯಾಸಿಸಲು ಮಾರ್ಗದರ್ಶನ ಮಾಡುತ್ತಿದ್ದಾರೆ ಎಂದರು.

ರಾಜ್ಯದ ಶಾಲೆಗಳಲ್ಲಿ ಶಿಕ್ಷಕರಿಗೆ ಮುಖಚಹರೆ ಆಧಾರಿತ ಹಾಜರಾತಿ ಕಡ್ಡಾಯವಾಗಿ ಮಾಡಲಾಗುತ್ತಿದ್ದು, ಈಗಾಗಲೇ ಈ ಕುರಿತು ಪ್ರಾಯೋಗಿಕ ಹಂತ ನಡೆಸಲಾಗಿದೆ. ಗುಣಮಟ್ಟ ಶಿಕ್ಷಣಕ್ಕೆ ಶಿಕ್ಷಕರಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿದವರು ಸಹ ಶಾಲೆಗೆ ಕೊಡುಗೆ ನೀಡಬೇಕು ಎಂದು ಹೇಳಿದರು.

ರಾಜ್ಯದ ಎಲ್ಲ ಶಾಲೆಗಳಲ್ಲಿ ನೀತಿ ಶಿಕ್ಷಣ ಅಳವಡಿಕೆ:

ಮಕ್ಕಳಲ್ಲಿ ನೀತಿ ಶಿಕ್ಷಣ ಬಹುಮುಖ್ಯವಾಗಿದ್ದು, ಪ್ರಸ್ತುತದಿಂದಲೇ ರಾಜ್ಯದ ಎಲ್ಲ ಶಾಲೆಗಳಲ್ಲಿ ಒಂದರಿಂದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ವಾರದಲ್ಲಿ 2 ದಿನ ಮಾನವೀಯ ಮೌಲ್ಯಗಳ ಕುರಿತು ನೀತಿ ಶಿಕ್ಷಣ ಬೋಧಿಸಲಾಗುತ್ತಿದೆ ಎಂದರು.

ಈ ಬಾರಿ ಬಜೆಟ್‌ನಲ್ಲಿ ಶಾಲಾ ಶಿಕ್ಷಣ ಇಲಾಖೆಗೆ ₹41 ಸಾವಿರ ಕೋಟಿ ಅನುದಾನ ನೀಡಲಾಗಿದೆ. 1008 ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿ ಪ್ರಾರಂಭಿಸಲಾಗಿದೆ. ರಾಜ್ಯದಲ್ಲಿ ಶಾಲೆಗಳ ಶಿಥಿಲ ಕೊಠಡಿಗಳ ದುರಸ್ತಿಗೆ ಕ್ರಮ ವಹಿಸಲಾಗುತ್ತಿದೆ ಎಂದು ಹೇಳಿದರು.

ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳು ಸಾಕಷ್ಟು ಪ್ರಭಾವ ಬೀರುತ್ತಿವೆ. ಈ ಶಾಲೆಗಳಲ್ಲಿ ಗುಣಮಟ್ಟ ಶಿಕ್ಷಣ ಲಭಿಸುತ್ತಿದ್ದು, ದಾಖಲಾತಿಗೆ ಬೇಡಿಕೆ ಹೆಚ್ಚುತ್ತಿದೆ. ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಭಯಭೀತರಾಗಬಾರದು. ಈ ಹಿಂದೆ ಅವಕಾಶದ ಕೊರತೆಯಿಂದ ವಿದ್ಯಾರ್ಥಿಗಳು ಅನುತ್ತೀರ್ಣರಾಗುತ್ತಿದ್ದರು. ಈಗ ಎಲ್ಲ ರೀತಿಯ ಅನುವು ಮಾಡಿಕೊಡಲಾಗುತ್ತಿದೆ ಎಂದು ಮಧು ಬಂಗಾರಪ್ಪ ವಿವರಿಸಿದರು.

Read more Articles on