ಎಸ್‌ಸಿಪಿ, ಟಿಎಸ್‌ಪಿ ಕ್ರಿಯಾಯೋಜನೆಗೆ 15 ದಿನಗಳ ಗಡವು: ಜಿಲ್ಲಾಧಿಕಾರಿ ದಿವ್ಯಾಪ್ರಭು

| Published : Dec 29 2023, 01:32 AM IST

ಎಸ್‌ಸಿಪಿ, ಟಿಎಸ್‌ಪಿ ಕ್ರಿಯಾಯೋಜನೆಗೆ 15 ದಿನಗಳ ಗಡವು: ಜಿಲ್ಲಾಧಿಕಾರಿ ದಿವ್ಯಾಪ್ರಭು
Share this Article
  • FB
  • TW
  • Linkdin
  • Email

ಸಾರಾಂಶ

ಎಸ್‌ಸಿಪಿ, ಟಿಎಸ್‌ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ದಿವ್ಯಾಪ್ರಭು ಸೂಚನೆ. ಎಲ್ಲಾ ಇಲಾಖೆಗಳು ಫೆಬ್ರವರಿ ಅಂತ್ಯದ ವೇಳೆ ಶೇ.100 ರಷ್ಟು ಆರ್ಥಿಕ ಪ್ರಗತಿ ಸಾಧಿಸಬೇಕು

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಗೆ ಬರುವ ಪೂರ್ವದಲ್ಲಿಯೇ ಎಲ್ಲಾ ಇಲಾಖೆಗಳ ಎಸ್‌ಸಿಪಿ ಹಾಗೂ ಟಿಎಸ್‌ಪಿ ಅನುದಾನಗಳ ಬಳಕೆ ಮಾಡಿ ಸಂಪೂರ್ಣ ಪ್ರಗತಿ ಸಾಧಿಸಬೇಕು. ಬಿಡುಗಡೆಯಾಗಿರುವ ಅನುದಾನದ ಬಳಕೆಗೆ 15 ದಿನದ ಒಳಗಾಗಿ ಕ್ರಿಯಾ ಯೋಜನೆ ಸಿದ್ಧಪಡಿಸಿ ಅನುಮತಿ ಪಡೆಯುವಂತೆ ಜಿಲ್ಲಾಧಿಕಾರಿ ದಿವ್ಯಾಪ್ರಭು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ 2023-24ನೇ ಸಾಲಿನ ನವೆಂಬರ್-2023 ಮಾಹೆಯ ಅಂತ್ಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಉಪಯೋಜನೆ (ಎಸ್‌ಸಿಪಿ ಹಾಗೂ ಟಿಎಸ್‌ಪಿ) ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲಾ ಇಲಾಖೆಗಳು ಫೆಬ್ರವರಿ ಅಂತ್ಯದ ವೇಳೆ ಶೇ.100 ರಷ್ಟು ಆರ್ಥಿಕ ಪ್ರಗತಿ ಸಾಧಿಸಬೇಕು. ಲೋಕಸಭಾ, ವಿಧಾನ ಪರಿಷತ್ ಹಾಗೂ ಪಂಚಾಯ್ತಿ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ ಹೊಸ ಯೋಜನೆಗಳಿಗೆ ಅನುಮೋದನೆ ನೀಡುವುದು ಸಾಧ್ಯವಾಗುವುದಿಲ್ಲ. ಹೀಗಾಗಿ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಗೆ ಬರುವ ಪೂರ್ವದಲ್ಲಿಯೇ ಎಲ್ಲಾ ಇಲಾಖೆಗಳು ಅನುದಾನಗಳ ಬಳಕೆ ಮಾಡಿ ಸಂಪೂರ್ಣ ಪ್ರಗತಿ ಸಾಧಿಸಬೇಕು ಎಂದರು.

ಜಿಲ್ಲೆಯ ಎಲ್ಲಾ ವಿದ್ಯಾರ್ಥಿ ನಿಲಯಗಳ ಕುಡಿಯುವ ನೀರು, ಸೋಲಾರ್ ವಾಟರ್ ಹೀಟರ್ ಸೇರಿ ಇತರೆ ಅಗತ್ಯ ಮೂಲಭೂತ ಸೌಕರ್ಯ ಅಳವಡಿಕೆಗೆ ಎಸ್‌ಸಿಪಿ ಹಾಗೂ ಟಿಎಸ್‌ಪಿ ಅನುದಾನ ಬಳಕೆಗೆ ಆದ್ಯತೆ ನೀಡಬೇಕು. ಎಲ್ಲಾ ನಗರ, ಪಟ್ಟಣ ಹಾಗೂ ಗ್ರಾಮ ಪಂಚಾಯಿತಿಗಳಿಂದ ವಿದ್ಯಾರ್ಥಿಗಳ ನಿಲಯಗಳಿಗೆ ನೀರಿನ ಸಂಪರ್ಕ ಒದಗಿಸಲು ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ತಿಂಗಳ ಅಂತ್ಯದ ವೇಳೆಗೆ ವಸತಿ ಯೋಜನೆಗಳ ಫಲಾನುಭವಿ ಗುರುತಿಸಿ ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಪಟ್ಟಿ ಕಳುಹಿಸಿಕೊಡಬೇಕು. ವಿವಿಧ ನಿಗಮಗಳಡಿ ನೀಡಲಾಗುವ ಸೌಲಭ್ಯಗಳಿಗೆ ಸಂಬಂಧಿಸಿದಂತೆ ಶಾಸಕರ ನೇತೃತ್ವದಲ್ಲಿ ಫಲಾನುಭವಿ ಆಯ್ಕೆ ಮಾಡಲು ಎಲ್ಲಾ ಇಲಾಖೆ ಹಾಗೂ ನಿಗಮಗಳ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲೆಯ ಎಲ್ಲಾ ಇಲಾಖೆ ಹಾಗೂ ಅಭಿವೃದ್ಧಿ ನಿಗಮಗಳಿಂದ ಎಸ್ಪಿಪಿ ಯೋಜನೆಯಡಿ ₹144.15 ಕೋಟಿ ಹಾಗೂ ಟಿಎಸ್‌ಪಿ ಯೋಜನೆಯಡಿ ₹102.78 ಕೋಟಿ ಅನುದಾನ ಖರ್ಚು ಮಾಡಿ ಒಟ್ಟು ಶೇ.92 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಸಭೆಯಲ್ಲಿ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಒಟ್ಟು 37 ಅನುಷ್ಠಾನ ಇಲಾಖೆಗಳ ಪ್ರಗತಿ ಪರಿಶೀಲನೆಯನ್ನು ಜಿಲ್ಲಾಧಿಕಾರಿಗಳ ನಡೆಸಿದರು.

ಜಿ.ಪಂ ಯೋಜನಾ ನಿರ್ದೇಶಕ ಡಾ.ರಂಗಸ್ವಾಮಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್ ರೆಡ್ಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಭಾರತಿ ಆರ್.ಬಣಕಾರ್, ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಪರಮೇಶ್ವರಪ್ಪ, ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.