ಸಾರಾಂಶ
ಕನ್ನಡಪ್ರಭ ವಾರ್ತೆ ಮಾಗಡಿ
ಹೇಮಾವತಿ ಯೋಜನೆ ಎಕ್ಸ್ ಪ್ರೆಸ್ ಕೆನಾಲ್ ಕಾಮಗಾರಿ ಆರಂಭಿಸಲು 15 ದಿನಗಳ ಗಡುವು ನೀಡುತ್ತೇವೆ. ತುಮಕೂರಿನಲ್ಲಿ ಎಕ್ಸ್ ಪ್ರೆಸ್ ಕೆನಾಲ್ ಕಾಮಗಾರಿಗೆ ವಿರೋಧ ಮುಂದುವರಿಸಿದರೆ ಕಾಂಗ್ರೆಸ್ ಪಕ್ಷದ ವತಿಯಿಂದ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಪೂಜಾರಿ ಪಾಳ್ಯ ಕೆ.ಕೃಷ್ಣಮೂರ್ತಿ ಎಚ್ಚರಿಕೆ ನೀಡಿದರು.ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ತಾಲೂಕಿನ ಕೆರೆಗಳಿಗೆ ಹೇಮಾವತಿ ನೀರು ತರಬೇಕೆಂಬುದು ಮಾಜಿ ಸಚಿವ ಎಚ್.ಎಂ. ರೇವಣ್ಣನವರ ಕನಸಾಗಿದ್ದು, ಕಾಂಗ್ರೆಸ್ ಸರ್ಕಾರ ಕೋಟಿಗಟ್ಟಲೆ ಹಣ ಬಿಡುಗಡೆಗೊಳಿಸಿ ಯೋಜನೆ ಪೂರ್ಣಗೊಳ್ಳುವ ಹಂತದಲ್ಲಿರುವಾಗ ಎಕ್ಸ್ಪ್ರೆಸ್ ಕೆನಾಲ್ ಕಾಮಗಾರಿಗೆ ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ, ಮಾಜಿ ಸಚಿವ ಸೊಗಡು ಶಿವಣ್ಣ, ಜೆಡಿಎಸ್ ಶಾಸಕ ಎಂ.ಪಿ.ಕೃಷ್ಣಪ್ಪ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ, ರಾಮನಗರ ಜಿಲ್ಲೆಯವರಾಗಿರುವ ನೂತನ ಕೇಂದ್ರ ಸಚಿವ ಎಚ್. ಡಿ.ಕುಮಾರಸ್ವಾಮಿ ರವರು ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ತಮ್ಮ ಪಕ್ಷದ ಶಾಸಕರಿಗೆ ತಿಳುವಳಿಕೆ ಹೇಳಿ ಕಾಮಗಾರಿ ಪೂರ್ಣಗೊಳಿಸಲು ಸಂಪೂರ್ಣ ಸಹಕಾರ ನೀಡಬೇಕು. ಬರಪೀಡಿತ ತಾಲೂಕಾಗಿರುವ ಮಾಗಡಿಗೆ ನೀರಾವರಿ ಕೊಡುಗೆ ನೀಡುವ ಮೂಲಕ ರೈತರಿಗೆ ಅನುಕೂಲ ಮಾಡಬೇಕು. ಇಲ್ಲವಾದರೆ 15 ದಿನಗಳ ನಂತರ ನಮ್ಮ ಹೋರಾಟವನ್ನು ತೀವ್ರಗೊಳಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ತಾಪಂ ಮಾಜಿ ಸದಸ್ಯ ವೆಂಕಟೇಶ್ ಮಾತನಾಡಿ, ಮಾಜಿ ಸಚಿವ ಸೊಗಡು ಶಿವಣ್ಣನವರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಇಲ್ಲಸಲ್ಲದ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ, ಕುಣಿಗಲ್ ತಾಲೂಕಿಗೆ 3 ಟಿಎಂಸಿ ನೀರು ಮತ್ತು ಮಾಗಡಿಗೆ ಮುಕ್ಕಾಲು ಟಿಎಂಸಿ ನೀರು ಹಂಚಿಕೆ ಮಾಡಲಾಗಿದೆ. ಎಕ್ಸ್ಪ್ರೆಸ್ ಕೆನಾಲ್ ಮೂಲಕ ಸತತವಾಗಿ ಒಂದೂವರೆ ತಿಂಗಳು ನೀರು ಹರಿಸಿದರೆ ಮಾಗಡಿ ತಾಲೂಕಿನ 63 ಕೆರೆಗಳಿಗೆ ನೀರು ತುಂಬಿಸಬಹುದು. ಮಾಗಡಿ ತಾಲೂಕಿಗೆ ಮಾತ್ರ ಹೇಮಾವತಿ ಯೋಜನೆ ಅನುಷ್ಠಾನವಾಗಿದೆ, ರಾಮನಗರ ಮತ್ತು ಕನಕಪುರಕ್ಕೆ ಒಂದು ಹನಿ ನೀರನ್ನು ತೆಗೆದುಕೊಂಡು ಹೋಗುತ್ತಿಲ್ಲ, ಅಲ್ಲಿನ ಜನರಿಗೆ ಸುಳ್ಳು ಮಾಹಿತಿ ನೀಡಿ, ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.ಕಾಂಗ್ರೆಸ್ ಕಿಸಾನ್ ಸಮಿತಿ ಜಿಲ್ಲಾಧ್ಯಕ್ಷ ಆಗ್ರೋ ಪುರುಷೋತ್ತಮ್, ದಲಿತ ಮುಖಂಡ ಕಲ್ಕೆರೆ ಶಿವಣ್ಣ ಮಾತನಾಡಿದರು. ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.