ಸಾರಾಂಶ
ಕಳಪೆ ಕಾಮಗಾರಿ/ ಅನಗತ್ಯ ವಿಳಂಬ, ನಿರ್ಲಕ್ಷ್ಯ ಸಲ್ಲದು/ ಹೆಲಿಪ್ಯಾಡ್ ನಿರ್ಮಾಣ, ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ
ಕನ್ನಡಪ್ರಭ ವಾರ್ತೆ ಹೊಸಪೇಟೆಪ್ರವಾಸೋದ್ಯಮಕ್ಕೆ ಪೂರಕವಾಗಿ ನೂತನವಾಗಿ 20 ಕೊಠಡಿಗಳ ಹೈಟೆಕ್ ಪ್ರವಾಸಿ ಮಂದಿರವನ್ನು ನಗರದಲ್ಲಿ ನಿರ್ಮಾಣಕ್ಕೆ ಶೀಘ್ರ ಕ್ರಮವಹಿಸಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಂಗಳವಾರ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಂಗಳವಾರ ಮಾತನಾಡಿದ ಅವರು, ಪ್ರತಿ ಎರಡು ತಿಂಗಳಿಗೊಮ್ಮೆ ಪಿಡಬ್ಲೂಡಿ ಅಧಿಕಾರಿಗಳು ಆಯಾ ಶಾಸಕರ ನೇತೃತ್ವದಲ್ಲಿ ಕಾಮಗಾರಿಗಳ ಪ್ರಗತಿ, ಸ್ಥಳೀಯ ಸಮಸ್ಯೆಗಳ ಅವಲೋಕನ, ಅಗತ್ಯವಿರುವ ಕಾಮಗಾರಿಗಳ ಕ್ರಿಯಾಯೋಜನೆ ಕುರಿತು ಕಡ್ಡಾಯವಾಗಿ ಸಭೆ ನಡೆಸಿ ವರದಿ ಸಲ್ಲಿಸಬೇಕು. ಇಲಾಖೆಯ ಯಾವುದೇ ಕಾಮಗಾರಿಗಳು ಕಳಪೆ ಗುಣಮಟ್ಟ, ನಿರ್ಲಕ್ಷ್ಯ, ವಿಳಂಬ ಆಗದಂತೆ ಪೂರ್ಣಗೊಳಿಸಿ ಸಾರ್ವಜನಿಕರ ಅನುಕೂಲಕ್ಕೆ ಒದಗಿಸಬೇಕು. ಈಗಾಗಲೇ ರಾಜ್ಯದಲ್ಲಿ ಗಡಿ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ನೆರೆ ರಾಜ್ಯದ ರಸ್ತೆಗಳಿಗೂ, ನಮ್ಮ ರಾಜ್ಯದ ರಸ್ತೆಗಳಿಗೆ ಹೋಲಿಕೆ ಮಾಡದಂತೆ ಹೆಚ್ಚಿನ ಗುಣಮಟ್ಟದಲ್ಲಿ ರಸ್ತೆ ಅಭಿವೃದ್ಧಿಗೆ ಅನುದಾನ ಕಲ್ಪಿಸಲಾಗಿದೆ. ಜಿಲ್ಲೆಯ ಪಿಡಬ್ಲೂಡಿ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಇಲ್ಲ. ಎಲ್ಲಾ ಎಇಇ, ಇಇ ಹೆಚ್ಚಿನ ಮುತುವರ್ಜಿ ವಹಿಸಿ ವಿಳಂಬ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಎಇಇ ನಿಮ್ಮ ಸ್ಥಳೀಯ ಶಾಸಕರೊಂದಿಗೆ ಉತ್ತಮ ಸಂವಹನದೊಂದಿಗೆ ಸಾಮಾನ್ಯ ಜನರ ಬೇಡಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.ಕೂಡ್ಲಿಗಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಮಾತನಾಡಿ, ಕೂಡ್ಲಿಗಿ ಕ್ಷೇತ್ರದ ಉಜ್ಜಿಯಿನಿ ಮತ್ತು ಗುಡೆಕೋಟೆಯಲ್ಲಿ ಪ್ರವಾಸಿ ಮಂದಿರ ನಿರ್ಮಾಣದ ಅಗತ್ಯ ಇದೆ. ಹೊಸಹಳ್ಳಿ, ಇಮಡಾಪುರ, ಬಣವಿಕಲ್ಲು ಗ್ರಾಮದಲ್ಲಿ ಚತುಷ್ಪಥ ರಸ್ತೆ ನಿರ್ಮಾಣ, ಪಟ್ಟಣದಲ್ಲಿ ಬೈಪಾಸ್ ರಸ್ತೆ ನಿರ್ಮಾಣ ಸೇರಿ ಅಗಲೀಕರಣ, ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಟ್ಟು ಹೋಗಿರುವ ಸೇವಾ ರಸ್ತೆಗಳ ನಿರ್ಮಾಣ ಕಾರ್ಯ ನಡೆಯಬೇಕಿದೆ. ಜಿಲ್ಲೆಯಲ್ಲಿ ಡಿಎಂಎಫ್, ಕೆಎಂಇಆರ್ಸಿ, ಕೆಕೆಆರ್ಡಿಬಿ ಯೋಜನೆಯಡಿ ಅನುದಾನ ಲಭ್ಯತೆ ಕಡಿಮೆ ಇದ್ದು, ರಾಜ್ಯ ಸರ್ಕಾರದ ಅನುದಾನದ ಅಗತ್ಯ ಇದೆ ಎಂದು ಹೇಳಿದರು.ಹೊಸಹಳ್ಳಿ ಹೋಬಳಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಶಾಲೆ ನಿರ್ಮಾಣ ಕಾರ್ಯ ನನೆಗುದಿಗೆ ಬಿದ್ದಿದೆ. ಅಧಿಕಾರಿಗಳು ತ್ವರಿತ ವೇಗ ನೀಡುವ ಮೂಲಕ ಪೂರ್ಣಗೊಳಿಸಲು ಅಗತ್ಯ ಅನುದಾನ ನೀಡಬೇಕಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ದ್ವಿಚಕ್ರ ವಾಹನಗಳು ಅಪಘಾತಗೊಂಡು ಹಿಂಬದಿ ಸವಾರರ ಸಾವಿನ ಸಂಖ್ಯೆ ಹೆಚ್ಚಾಗಿದೆ. ವೈಜ್ಞಾನಿಕವಾಗಿ ರಸ್ತೆ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಹಾನಗಲ್ ಮೂಲಕ ಇಟಿಗಿ, ಕೊಟ್ಟೂರು, ಉಜ್ಜಿನಿ, ಗುಡೇಕೋಟೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಆದ್ಯತೆ ನೀಡಬೇಕು ಎಂದರು.
ಹಗರಿಬೊಮ್ಮನಹಳ್ಳಿ ಶಾಸಕ ಕೆ.ನೇಮರಾಜ ನಾಯ್ಕ ಮಾತನಾಡಿ, ಕೊಟ್ಟೂರು ತಾಲೂಕಾದ ಹಿನ್ನೆಲೆ ಪ್ರತ್ಯೇಕವಾಗಿ ಪಿಡಬ್ಲೂಡಿ ಕಚೇರಿ ಆರಂಭಿಸಲು ಕ್ರಮ ವಹಿಸಬೇಕು. ಮಲ್ಲನಾಯಕನಹಳ್ಳಿ ಗ್ರಾಮದ ರಸ್ತೆ ಮಾರ್ಗಕ್ಕೆ ಅಂದಾಜು 2 ಕೋಟಿ ರು. ಅನುದಾನ ನೀಡಬೇಕು ಎಂದು ಮನವಿ ಮಾಡಿದರು.ಮರಿಯಮ್ಮನಹಳ್ಳಿ-ಶಿವಮೊಗ್ಗ ಪಿಪಿಪಿ ರಸ್ತೆ:
ಮರಿಯಮ್ಮನಹಳ್ಳಿ-ಹಗರಿಬೊಮ್ಮನಹಳ್ಳಿ-ಹರಪನಹಳ್ಳಿ-ಹರಿಹರ-ಮಲೆಬೆನ್ನೂರು-ಶಿವಮೊಗ್ಗ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸುವ ಕೆಲಸವನ್ನು ಕೇಂದ್ರ ಕೈಬಿಟ್ಟ ಕಾರಣ ಪ್ರಸ್ತುತ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿರುವುದರಿಂದ ಇದನ್ನು ಖಾಸಗಿ ಸಹಭಾಗಿತ್ವದಲ್ಲಿ ರಸ್ತೆ ಅಭಿವೃದ್ದಿ ಮಾಡಿ ಶುಲ್ಕ ಸಂಗ್ರಹಿಸುವ ಖಾಸಗಿಯವರಿಂದ ನಿರ್ಮಾಣ ಮಾಡಲು ಟೆಂಡರ್ ಕರೆಯಲಾಗಿದೆ. 12 ರಾಜ್ಯಗಳಲ್ಲಿ ಟೆಂಡರ್ ಕರೆಯಲಾಗಿದ್ದು ಟೆಂಡರ್ ಅಂತಿಮವಾಗಿರುವುದಿಲ್ಲ. ಮುಂದಿನ ದಿನಗಳಲ್ಲಿ ಈ ರಸ್ತೆಯನ್ನು ಅಭಿವೃದ್ದಿ ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದರು.ಎನ್.ಎಚ್.ಎ.ಐ ಮತ್ತು ಜಿಲ್ಲಾಧಿಕಾರಿಗಳ ಸಭೆಗೆ ಶಾಸಕರಿಗೆ ಆಹ್ವಾನ:
ರಸ್ತೆ, ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ನಡೆಯುವ ಉನ್ನತ ಮಟ್ಟದ ಅಧಿಕಾರಿಗಳ ಸಭೆಗೆ ಸಮಸ್ಯೆಗಳಿರುವ ಕ್ಷೇತ್ರಗಳ ಶಾಸಕರನ್ನು ಆಹ್ವಾನಿಸಲಾಗುತ್ತದೆ. ಅಲ್ಲಿ ಉನ್ನತ ಮಟ್ಟದ ಅಧಿಕಾರಿಗಳಿರುವುದರಿಂದ ಸಮಸ್ಯೆಗಳನ್ನು ನಿವಾರಣೆ ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದರು.ಶಾಸಕ ಎಚ್.ಆರ್. ಗವಿಯಪ್ಪ ಮಾತನಾಡಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಡೆ ಸೇವಾ ರಸ್ತೆಗಳಿಲ್ಲದ ಕಾರಣ ದ್ವಿಚಕ್ರವಾಹನದಲ್ಲಿ ತಿರುಗಾಡುವ ಹೆಚ್ಚಿನ ಕಾರ್ಮಿಕರು ಅಪಘಾತದಲ್ಲಿ ಮರಣ ಹೊಂದಿದ್ದಾರೆ. ಆದ್ದರಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸೇವಾರಸ್ತೆ ನಿರ್ಮಿಸಬೇಕು. ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿ ನ್ಯಾಯಾಲಯ ನಿರ್ಮಾಣಕ್ಕೆ 10 ಎಕರೆ ಜಾಗ ನೀಡಿದ್ದು, ಇದರ ನಿರ್ಮಾಣಕ್ಕೆ ಅನುದಾನ ಒದಗಿಸಬೇಕು ಎಂದು ಮನವಿ ಮಾಡಿದರು.
ಹರಪನಹಳ್ಳಿ ಶಾಸಕಿ ಎಂ.ಪಿ. ಲತಾ, ಹಡಗಲಿ ಶಾಸಕ ಕೃಷ್ಣನಾಯ್ಕ ಮಾತನಾಡಿ, ರಾಜ್ಯ ಹಾಗೂ ಜಿಲ್ಲಾ ರಸ್ತೆಗಳು ಹಾಳಾಗಿದ್ದರಿಂದ ಹೆಚ್ಚಿನ ಅನುದಾನ ನೀಡಲು ಮನವಿ ಮಾಡಿದರು.ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ, ಲೋಕೋಪಯೋಗಿ ಇಲಾಖೆ ಮುಖ್ಯ ಎಂಜಿನಿಯರ್ ಶರಣಪ್ಪ ಸೂಲಗುಂಟಿ, ಅಧೀಕ್ಷಕ ಎಂಜಿನಿಯರ್ ಅಮೀನ್ ಮುಕ್ತಾರ್, ಕಾರ್ಯನಿರ್ವಾಹಕ ಎಂಜಿನಿಯರ್ ದೇವದಾಸ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ಗಳು ಇದ್ದರು.