ರೋಣ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರ ಶ್ರೇಯೋಭಿವೃದ್ಧಿಗೆ ಶೇ. 24ರಷ್ಟು ಅನುದಾನ ಕಾಯ್ದಿರಿಸಿದ್ದು, ಈ ಮೂಲಕ ಅಭಿವೃದ್ಧಿ ಕೈಗೊಳ್ಳಲಾಗುತ್ತಿದೆ. ಕೋಟ್ಯಂತರ ರು. ವೆಚ್ಚದಲ್ಲಿ ಡಾ. ಅಂಬೇಡ್ಕರ್, ಡಾ. ಬಾಬು ಜಗಜೀವನರಾಂ, ವಾಲ್ಮೀಕಿ ಸಮುದಾಯ ಭವನ ನಿರ್ಮಿಸಲಾಗುವುದು ಎಂದು ಶಾಸಕ ಜಿ.ಎಸ್. ಪಾಟೀಲ ತಿಳಿಸಿದರು.

ಭಾನುವಾರ ಪಟ್ಟಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ, ಮಹರ್ಷಿ ವಾಲ್ಮೀಕಿ ಸಮುದಾಯ ಭವನದ ಮುಂದುವರಿದ ಕಾಮಗಾರಿ ಹಾಗೂ ಡಾ. ಬಾಬು ಜಗಜೀವನರಾಂ ಸಮುದಾಯ ಭವನ ನಿರ್ಮಾಣ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ, ಬಳಿಕ ಜರುಗಿದ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ ಬಾರಿ ಶಾಸಕನಿದ್ದಾಗ ತಾಲೂಕಿನ ವಾಲ್ಮೀಕಿ ಭವನ ಸೇರಿದಂತೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿಗೆ ಸಮುದಾಯ ಭವನ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದು, ಅವು ಪೂರ್ಣಗೊಳ್ಳದಿರುವುದಕ್ಕೆ ಈ ಹಿಂದಿನ ಸರ್ಕಾರವೇ ಕಾರಣವಾಗಿದೆ. ಅಪೂರ್ಣಗೊಂಡ ಕಾಮಗಾರಿಗಳಿಗೆ ಮತ್ತೆ ಅನುದಾನ ಬಿಡುಗಡೆ ಮಾಡಿರುವೆ ಎಂದರು.

ರೋಣದಲ್ಲಿ ₹1 ಕೋಟಿ ವೆಚ್ಚದಲ್ಲಿ ಡಾ. ಅಂಬೇಡ್ಕರ್ ಸಮುದಾಯ ಭವನ, ₹2 ಕೋಟಿ ವೆಚ್ಚದಲ್ಲಿ ಡಾ. ಬಾಬು ಜಗಜೀವನರಾಂ ಸಮುದಾಯ ಭವನ ಮತ್ತು ಅರ್ಧಕ್ಕೆ ನಿಂತಿರುವ ವಾಲ್ಮೀಕಿ ಸಮುದಾಯ ಭವನ ಪೂರ್ಣಗೊಳ್ಳಲು ₹1 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಆ ಅನುದಾನವನ್ನು ಸದುಪಯೋಗಪಡಿಸಿಕೊಳ್ಳಬೇಕು. ಸಮಾಜದವರು ಮುತುವರ್ಜಿ ವಹಿಸಿ ಗುಣಮಟ್ಟದ ಕಟ್ಟಡ ನಿರ್ಮಾಣ ಮಾಡಲು ಶ್ರಮಿಸಬೇಕು ಎಂದರು.

ಗಜೇಂದ್ರಗಡ ಪಟ್ಟಣದಲ್ಲಿ ಪರಿಶಿಷ್ಟ ಪಂಗಡದ ಸಮುದಾಯ ಭವನ ನಿರ್ಮಾಣಕ್ಕೆ ಸಮಾಜದ ವತಿಯಿಂದ 2 ಎಕರೆ ಜಮೀನು ನೀಡಲಾಗಿದ್ದು ₹2 ಕೋಟಿ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಿಸಲಾಗುವುದು. ಮತಕ್ಷೇತ್ರದ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ವಿದ್ಯಾರ್ಥಿಗಳಿಗಾಗಿ ವಸತಿ ಶಾಲೆಗಳನ್ನು ನಿರ್ಮಾಣ ಮಾಡುವಲ್ಲಿ ಹೆಚ್ಚಿನ ಒತ್ತು ನೀಡಲಾಗಿದೆ. ಪರಿಶಿಷ್ಟರಿಗೆ ನೀಡಲಾದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ರಾಜ್ಯ ಸರ್ಕಾರ ಬಳಸುತ್ತಿದೆ ಎಂಬ ವಿರೋಧ ಪಕ್ಷಗಳ ಆರೋಪ ಅರ್ಥವಿಲ್ಲದ್ದು ಎಂದರು.ತಾಲೂಕು ಮಹರ್ಷಿ ವಾಲ್ಮೀಕಿ ಸಮಾಜದ ಅಧ್ಯಕ್ಷ ಬಸವರಾಜ ತಳವಾರ ಮಾತನಾಡಿ, 2012ರಲ್ಲಿಯೇ ವಾಲ್ಮೀಕಿ ಭವನ ನಿರ್ಮಾಣ ಕಾಮಗಾರಿ ಅರಂಭವಾಗಿತ್ತು. ಆದರೆ, ಇಲ್ಲಿಯವರೆಗೂ ಪೂರ್ಣಗೊಂಡಿಲ್ಲ. ಶಾಸಕ ಜಿ.ಎಸ್. ಪಾಟೀಲ ಅವರು ಎರಡನೇ ಹಂತದ ಅನುದಾನ ಮಂಜೂರು ಮಾಡಿಸಿದ್ದಾರೆ. ವರ್ಷದೊಳಗೆ ಕಾಮಗಾರಿ ಪೂರ್ಣಗೊಳ್ಳಲಿ ಎಂದರು.


ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೀರಣ್ಣ ಶೆಟ್ಟರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ನಂದಾ ಹಣಬರಟ್ಟಿ, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಗೀತಾ ಆಲೂರ, ಪಿಕಾರ್ಡ ಬ್ಯಾಂಕ್ ಉಪಾಧ್ಯಕ್ಷ ಯಚ್ಚರಗೌಡ ಗೋವಿಂದಗೌಡ್ರ, ಸಿಪಿಐ ವಿಜಯಕುಮಾರ ನಾಯಕ, ವಿ.ಬಿ. ಸೋಮನಕಟ್ಟಿಮಠ, ತಾಪಂ ಇಒ ಚಂದ್ರಶೇಖರ ಕಂದಕೂರ, ನಾಜಬೇಗಂ ಯಲಿಗಾರ, ಬಸವರಾಜ ಕಡೇಮನಿ, ಸೋಮು ನಾಗರಾಜ, ಮಲಿಕ ಯಲಿಗಾರ, ಹನುಮಂತಪ್ಪ ದ್ವಾಸಲ, ಸುರೇಶ ಮಾಗಡಿ, ಸಂಜಯ ದೊಡ್ಡಮನಿ, ಆನಂದ ಸಿಂಗಾಡೆ, ಹನುಮಂತಪ್ಪ ನಾಗರಾಜ, ಭೀಮಣ್ಣ ತಳವಾರ, ದೇವೇಂದ್ರಪ್ಪ ಕೊಳ್ಳಪ್ಪನವರ, ಪ್ರಕಾಶ ಹೊಸಳ್ಳಿ, ಆನಂದ ಚಲವಾದಿ, ಯಮನೂರಪ್ಪ ತಳವಾರ ಮುಂತಾದವರು ಉಪಸ್ಥಿತರಿದ್ದರು.