25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ಜಿಲ್ಲೆಯಲ್ಲಿ 78 ಕೇಂದ್ರ ಸ್ಥಾಪನೆ

| Published : Mar 20 2024, 01:19 AM IST / Updated: Mar 20 2024, 03:36 PM IST

25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ಜಿಲ್ಲೆಯಲ್ಲಿ 78 ಕೇಂದ್ರ ಸ್ಥಾಪನೆ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲೆಯಲ್ಲಿ ಮಾ.25 ರಿಂದ ಏಪ್ರಿಲ್ 6ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿದ್ದು, ಸುವ್ಯವಸ್ಥಿತವಾಗಿ ಪರೀಕ್ಷೆಗಳನ್ನು ನಡೆಸಲು ಅಗತ್ಯವಾದ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಬೇಕು. ಜಿಲ್ಲೆಯ ಒಟ್ಟು 78 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದೆ. 

ಕನ್ನಡಪ್ರಭ ವಾರ್ತೆ ಶಿವಮೊಗ್ಗ ಜಿಲ್ಲೆಯಲ್ಲಿ ಮಾ.25 ರಿಂದ ಏಪ್ರಿಲ್ 6ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿದ್ದು, ಸುವ್ಯವಸ್ಥಿತವಾಗಿ ಪರೀಕ್ಷೆಗಳನ್ನು ನಡೆಸಲು ಅಗತ್ಯವಾದ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗ ರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಸರ್ಕಾರಿ ನೌಕರರ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿ, ಜಿಲ್ಲೆಯ ಒಟ್ಟು 78 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗೆ ನಿಯೋಜನೆಗೊಂಡಿರುವ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಕಸ್ಟೋಡಿಯನ್, ಕ್ಷೇತ್ರ ಶಿಕ್ಷಣಾಧಿಕಾರಿಗಳು, ನೋಡಲ್ ಅಧಿಕಾರಿಗಳು, ಸಿಟ್ಟಿಂಗ್ ಸ್ಕ್ಯಾಡ್, ಮಾರ್ಗಾಧಿಕಾರಿಗಳು ಸೇರಿದಂತೆ ಪ್ರತಿ ಅಧಿಕಾರಿ ತಮ್ಮ ಜವಾಬ್ದಾರಿಯನ್ನು ಕಟ್ಟುನಿಟ್ಟಾಗಿ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ಮೂಲಸೌಕರ್ಯಗಳಿಗೆ ಸೂಚನೆ:

ಪರೀಕ್ಷಾ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳಾದ ಆಸನ, ಕುಡಿಯುವ ನೀರು ಸೇರಿದಂತೆ ಇತರೇ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಬಂದೋಬಸ್ತ್‌ ಅನ್ನು ಪೊಲೀಸ್ ಇಲಾಖೆಯಿಂದ ಒದಗಿಸಲಾಗುವುದು. ವಾಹನ ವ್ಯವಸ್ಥೆಯನ್ನು ತಮ್ಮ ವತಿಯಿಂದ ಮಾಡಲಾಗುವುದು. ಸುಗಮ ಪರೀಕ್ಷೆಗೆ ಅಗತ್ಯವಾದ ಎಲ್ಲ ಸಹಕಾರವನ್ನು ನೀಡಲಾಗುವುದು. ಪ್ರತಿ ಹಂತದಲ್ಲಿ ನಿಯೋಜಿತ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಶಿಸ್ತಿನಿಂದ ನಿರ್ವಹಿಸುವ ಮೂಲಕ ಯಶಸ್ವಿಯಾಗಿ ಪರೀಕ್ಷೆಗಳನ್ನು ನಡೆಸಬೇಕೆಂದು ಸೂಚನೆ ನೀಡಿದರು.

ನಿರ್ಭೀತಿಯಿಂದ ಪರೀಕ್ಷೆ ಎದುರಿಸಬೇಕು:

ಎಎಸ್‌ಪಿ ಅನಿಲ್‌ಕುಮಾರ್ ಭೂಮರಡ್ಡಿ ಮಾತನಾಡಿ, ಪರೀಕ್ಷೆ ಕೂಡ ಒಂದು ಮಿನಿ ಚುನಾವಣೆ ಇದ್ದ ಹಾಗೆ. ವಿದ್ಯಾರ್ಥಿಗಳು ನಿರ್ಭೀತರಾಗಿ, ಉತ್ತಮವಾಗಿ ಪರೀಕ್ಷೆಗಳನ್ನು ಎದುರಿಸಬೇಕು. ಪರೀಕ್ಷೆಗಳು ಸುಗಮವಾಗಿ ನಡೆಯಲು ಪೊಲೀಸ್ ಇಲಾಖೆ ವತಿಯಿಂದ ಅಗತ್ಯವಾದ ಎಲ್ಲ ಸಹಕಾರವನ್ನು ನೀಡಲಾಗುವುದು ಎಂದು ತಿಳಿಸಿದರು.

ಜಿ.ಪಂ. ಉಪ ಕಾರ್ಯದರ್ಶಿ ದಾಸೇಗೌಡ ಮಾತನಾಡಿ, ಚುನಾವಣೆ ಮತ್ತು ಪರೀಕ್ಷೆಗಳು ಒಟ್ಟಾಗಿ ಘೋಷಣೆಯಾಗಿವೆ. ಎರಡನ್ನೂ ಸುಗಮವಾಗಿ ನಡೆಸುವಂತಹ ವ್ಯವಸ್ಥೆ ಮಾಡಿಕೊಂಡು ಯಶಸ್ವಿಗೊಳಿಸಬೇಕು. ವಿದ್ಯಾರ್ಥಿಗಳು ಚೆನ್ನಾಗಿ ಪರೀಕ್ಷೆಗಳನ್ನು ಬರೆಯುವ ಮೂಲಕ ಜಿಲ್ಲೆಗೆ ಉನ್ನತ ಸ್ಥಾನ ತಂದು ಕೊಡಬೇಕು ಎಂದರು.

ಡಯಟ್ ಪ್ರಾಂಶುಪಾಲ ಬಸವರಾಜಪ್ಪ ಮಾತನಾಡಿ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ತಯಾರಿಗೆ ಶಿಕ್ಷಕರು ಉತ್ತಮವಾಗಿ ಪ್ರೋತ್ಸಾಹ ನೀಡಿದ್ದಾರೆ. ಗುಣಮಟ್ಟದ ಫಲಿತಾಂಶ ಬರುವುದೆಂಬ ಭರವಸೆ ಇದೆ ಎಂದರು.

ಆರ್‌ಸಿಎಚ್‌ ಅಧಿಕಾರಿ ಡಾ.ನಾಗರಾಜ ನಾಯ್ಕ್ ಮಾತನಾಡಿ, ಮಕ್ಕಳು ಪರೀಕ್ಷೆಗೆ ಮಾನಸಿಕವಾಗಿ ಸಿದ್ಧತೆ ಮಾಡಿಕೊಳ್ಳಬೇಕು. ಬೆಳಗ್ಗೆ ನಿಯಮಿತವಾಗಿ ತಿಂಡಿ ತಿನ್ನಬೇಕು. ಬೇಸಿಗೆ ಸಮಯವಾದ್ದರಿಂದ ಪದೇಪದೆ ಶುದ್ಧ ಕುಡಿಯುವ ನೀರನ್ನು ಕುಡಿಯಬೇಕು. ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಇಲಾಖೆಯಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದರು.

ಡಿಡಿಪಿಐ ಸಿ.ಆರ್‌. ಪರಮೇಶ್ವರಪ್ಪ ಮಾತನಾಡಿ, ಮಾ.25ರಂದು ಪ್ರಥಮ ಭಾಷೆ, ಮಾ27ರಂದು ಸಮಾಜ ವಿಜ್ಞಾನ, ಮಾ.30ರಂದು ವಿಜ್ಞಾನ, ಏ.2ರಂದು ಗಣಿತ, ಏ.4ರಂದು ತೃತೀಯ ಭಾಷೆ ಮತ್ತು ಏ.6ರಂದು ದ್ವಿತೀಯ ಭಾಷೆ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದರು.

2023- 24ನೇ ಸಾಲಿಗೆ ಜಿಲ್ಲೆಯಲ್ಲಿ ರೆಗ್ಯುಲರ್ ವಿದ್ಯಾರ್ಥಿಗಳು 22044, ಪುನರಾವರ್ತಿತ 1430, ಖಾಸಗಿ 384 ಮತ್ತು ಖಾಸಗಿ ಪುನರಾವರ್ತಿತ 144 ಸೇರಿದಂತೆ ಒಟ್ಟು 24002 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 78 ಪರೀಕ್ಷಾ ಕೇಂದ್ರಗಳು ಇದ್ದು, 78 ಮುಖ್ಯ ಅಧೀಕ್ಷಕರು, 24 ಉಪ ಮುಖ್ಯ ಅಧೀಕ್ಷಕರನ್ನು ನೇಮಿಸಲಾಗಿದೆ.

102 ಸ್ಥಾನಿಕ ಜಾಗೃತ ದಳದ ಅಧಿಕಾರಿಗಳು, 31 ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಯಾವುದೇ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸದಂತೆ ಹಾಗೂ ಯಾವುದೇ ವಿದ್ಯುನ್ಮಾನ ಉಪಕರಣವನ್ನು ಪರೀಕ್ಷಾ ಕೇಂದ್ರದೊಳಗೆ ತರುವುದನ್ನು ನಿಷೇಧಿಸಲಾಗಿದೆ ಎಂದ ಅವರು ಪರೀಕ್ಷೆಗೆ ನಿಯೋಜನೆಗೊಂಡ ಎಲ್ಲ ಅಧಿಕಾರಿಗಳಿಗೆ ಸಂಬಂಧಿಸಿದ ಮಾರ್ಗಸೂಚಿಗಳ ಕುರಿತು ವಿವರವಾಗಿ ತಿಳಿಸಿದರು. ಪರೀಕ್ಷೆಗಳು ಮತ್ತು ಚುನಾವಣೆಯನ್ನು ಸುಗಮವಾಗಿ ನಡೆಸಬೇಕಿದ್ದು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ವಿವರಿಸಿದರು.

ಸಭೆಯಲ್ಲಿ ಎಲ್ಲ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿಕ್ಷಣಾಧಿಕಾರಿಗಳು, ಪರೀಕ್ಷೆಗೆ ನಿಯೋಜನೆಗೊಂಡ ಅಧಿಕಾರಿಗಳು ಹಾಜರಿದ್ದರು.

- - - ಬಾಕ್ಸ್‌* ಪರೀಕ್ಷಾ ವೇಳಾಪಟ್ಟಿಮಾ.25ರಂದು ಪ್ರಥಮ ಭಾಷೆ

ಮಾ27ರಂದು ಸಮಾಜ ವಿಜ್ಞಾನ

ಮಾ.30ರಂದು ವಿಜ್ಞಾನ

ಏ.2ರಂದು ಗಣಿತ

ಏ.4ರಂದು ತೃತೀಯ ಭಾಷೆ

ಏ.6ರಂದು ದ್ವಿತೀಯ ಭಾಷೆ

- - --19ಎಸ್‌ಎಂಜಿಕೆಪಿ01:

ಶಿವಮೊಗ್ಗದ ಜಿಲ್ಲಾ ಸರ್ಕಾರಿ ನೌಕರರ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವಸಿದ್ಧತಾ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಮಾತನಾಡಿದರು.