ಹಲ್ಲೆ, ಲೈಂಗಿಕ ಕಿರುಕುಳ ಮತ್ತು ಜಮೀನು ವಿವಾದ ಸೇರಿದಂತೆ ಹೆಚ್ಚಿನ ಪ್ರಕರಣಗಳು ದಾಖಲಾಗುತ್ತಿವೆ.

ಹೊಸಪೇಟೆ: ಜಿಲ್ಲೆಯ ವಿವಿಧ ತಾಲ್ಲೂಕು ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ 15 ಸಂತ್ರಸ್ತರಿಗೆ ಜಾತಿ ನಿಂದನೆ, ಹಲ್ಲೆ , ಲೈಂಗಿಕ ಕಿರುಕುಳ ವಿವಿಧ ಪ್ರಕರಣಗಳಲ್ಲಿನ ಸಂತ್ರಸ್ತರಿಗೆ ಒಟ್ಟು 26,55,000 ನ್ಯಾಯಯುತವಾಗಿ ಶೀಘ್ರ ಪರಿಹಾರ ಧನ ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಗುರುವಾರ ಆಯೋಜಿಸಲಾಗಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಕುರಿತ ಜಿಲ್ಲಾ ಮಟ್ಟದ ಜಾಗೃತಿ ಹಾಗೂ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಜಾತಿ ನಿಂದನೆ, ಹಲ್ಲೆ, ಲೈಂಗಿಕ ಕಿರುಕುಳ ಮತ್ತು ಜಮೀನು ವಿವಾದ ಸೇರಿದಂತೆ ಹೆಚ್ಚಿನ ಪ್ರಕರಣಗಳು ದಾಖಲಾಗುತ್ತಿವೆ. ಅದರಲ್ಲೂ ಜಮೀನು ವಿವಾದಕ್ಕೆ ಸಂಬಂಧಿಸಿದ ಪ್ರಕರಣಗಳೇ ಹೆಚ್ಚಾಗಿವೆ. ಪ್ರಸಕ್ತ ಸಾಲಿನ ಕಳೆದ 3 ತಿಂಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ಕಾಯ್ದೆಯಡಿ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ 5, ಹರಪನಹಳ್ಳಿ, ಕೂಡ್ಲಿಗಿ ತಾಲೂಕಿನಲ್ಲಿ ತಲಾ 1, ಹಡಗಲಿ ತಾಲೂಕಿನಲ್ಲಿ 2 ಮತ್ತು ಡಿ ಸಿ ಆರ್ ಇ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 4 ಪ್ರಕರಣ ಸೇರಿ ಒಟ್ಟು 13 ಪ್ರಕರಣ ದಾಖಲಾಗಿದ್ದು ,7 ಪ್ರಕಾರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲಾಗಿದೆ.ಇನ್ನೂ ಉಳಿದವುಗಳು ತನಿಖಾ ಹಂತದಲ್ಲಿ ಬಾಕಿ ಇವೆ ಎಂದರು.ಹಾಗೆಯೇ ಕಳೆದ 3 ತಿಂಗಳಲ್ಲಿ ಹೊಸಪೇಟೆ ತಾಲ್ಲೂಕಿನಲ್ಲಿ ದಾಖಲಾದ 2 ಪ್ರಕರಣ, ಕೂಡ್ಲಿಗಿ ತಾಲೂಕಿನಲ್ಲಿ ಡಿ ಸಿ ಆರ್ ಇ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 2 ಪ್ರಕರಣ ಸೇರಿ ಒಟ್ಟು 5 ಪ್ರಕರಣಗಳಿಗೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. 2025 ಡಿಸೆಂಬರ್ ನಿಂದ ಮಾರ್ಚ್ 18ರವರೆಗೆ ಬಳ್ಳಾರಿ ಮತ್ತು ವಿಜಯನಗರ ಎರಡೂ ಜಿಲ್ಲೆಗಳಲ್ಲಿ ದಾಖಲಾದ 97 ಪ್ರಕರಣಗಳು ನ್ಯಾಯಾಲಯದಲ್ಲಿ ಬಾಕಿ ಇದ್ದು, ಯಾವುದೇ ಪ್ರಕರಣಗಳು ಇತ್ಯರ್ಥವಾಗಿರುವುದಿಲ್ಲ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ, ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಕುರಿತು ಜಿಲ್ಲಾದ್ಯಂತ ನಿರಂತರವಾಗಿ ಜಾಗೃತಿ ಕಾರ್ಯಗಾರ, ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಆದರೂ ಇಂತಹ ಪ್ರಕರಣಗಳು ದಾಖಲಾಗುತ್ತಿವೆ, ಎಂದು ಬೇಸರ ವ್ಯಕ್ತಪಡಿಸದರು.

ಗ್ರಾಮೀಣ ಭಾಗದಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದೆ. ಆದ್ದರಿಂದ ದೌರ್ಜನ್ಯ ತಡೆ ಕಾಯ್ದೆ ಬಗ್ಗೆ ಗ್ರಾಮೀಣ ಭಾಗದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವಜನಿರಿಗೆ ಬೀದಿ ನಾಟಕ, ಜಾಗೃತಿ ಅಥವಾ ಅರಿವು ಮೂಡಿಸುವ ಕಾರ್ಯಗಾರ ಆಯೋಜಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.

ಕೆಲವರು ಈ ಕಾಯ್ದೆಯನ್ನು ಬಂಡವಾಳವಾಗಿಸಿಕೊಂಡು ದುರ್ಬಳಕೆ ಮಾಡಿಕೊಳ್ಳಬಾರದು. ಅಂತಹ ಪ್ರಕರಣ ಕಂಡು ಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಪ್ರಕರಣಗಳ ಸಂಖ್ಯೆ ಕಡಿಮೆಗೊಳಿಸಲು ಅಧಿಕಾರಿಗಳು ಶ್ರಮಿಸಬೇಕು ಎಂದು ಹೇಳಿದರು. ಜಿಲ್ಲೆಯಲ್ಲಿ ದಾಖಲಾಗಿರುವ ದೌರ್ಜನ್ಯ ಪ್ರಕರಣಗಳನ್ನು ವಿಳಂಬ ಮಾಡದೆ ತನಿಖೆ ನಡೆಸಿ, ನಿಗದಿತ ಅವಧಿಯೊಳಗೆ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಬೇಕು. ಸಂತ್ರಸ್ತರಿಗೆ ಸರ್ಕಾರದಿಂದ ಸಿಗಬೇಕಾದ ಪರಿಹಾರ ಧನವನ್ನು ಯಾವುದೇ ವಿಳಂಬವಿಲ್ಲದೆ ತಲುಪಿಸಬೇಕು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಗ್ರಾಮೀಣ ಭಾಗಗಳಲ್ಲಿ ಇಂದಿಗೂ ಅಲ್ಲಲ್ಲಿ ಕೇಳಿಬರುತ್ತಿರುವ ಅಸ್ಪೃಶ್ಯತೆ ಆಚರಣೆ ಮತ್ತು ಸಾಮಾಜಿಕ ಬಹಿಷ್ಕಾರದಂತಹ ಪಿಡುಗುಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು. ಇಂತಹ ಘಟನೆಗಳು ಕಂಡುಬಂದಲ್ಲಿ ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ತಪ್ಪಿತಸ್ಥರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಸ್ಥಳೀಯ ಆಡಳಿತ ಸಂಸ್ಥೆಗಳು ಎಚ್ಚರವಹಿಸಿ ಕಾರ್ಯನಿರ್ವಹಿಸಬೇಕು. ಪರಿಶಿಷ್ಟ ಜಾತಿ ಮತ್ತು ಪಂಗಡದ ಕಾಲೋನಿಗಳಿಗೆ ಅಗತ್ಯವಿರುವ ಕುಡಿಯುವ ನೀರು, ರಸ್ತೆ ಹಾಗೂ ಸ್ಮಶಾನ ಭೂಮಿಯ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಬಗೆಹರಿಸಬೇಕು. ಮೂಲಸೌಕರ್ಯ ವಂಚಿತ ಪ್ರದೇಶಗಳ ಪಟ್ಟಿ ಸಿದ್ಧಪಡಿಸಿ ಅನುದಾನದ ಸಮರ್ಪಕ ಬಳಕೆ ಮಾಡಿಕೊಳ್ಳಲು ನಿರ್ದೇಶಿಸಿದರು. ಸಭೆಯಲ್ಲಿ ಹಾಜರಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್‌. ಜಾಹ್ನವಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ವೈ.ಎ. ಕಾಳೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.