ಪ್ರಜಾಪ್ರಭುತ್ವ ದಿನದಂದು 260 ಕಿಮೀ ಮಾನವ ಸರಪಳಿ: ಡಿಸಿ ಲಕ್ಷ್ಮೀಪ್ರಿಯಾ

| Published : Sep 05 2024, 12:31 AM IST

ಪ್ರಜಾಪ್ರಭುತ್ವ ದಿನದಂದು 260 ಕಿಮೀ ಮಾನವ ಸರಪಳಿ: ಡಿಸಿ ಲಕ್ಷ್ಮೀಪ್ರಿಯಾ
Share this Article
  • FB
  • TW
  • Linkdin
  • Email

ಸಾರಾಂಶ

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಪ್ರಯುಕ್ತ ಈ ಬಾರಿ ರಾಜ್ಯದಲ್ಲಿ ಬೀದರ್‌ನಿಂದ ಚಾಮರಾಜನಗರದವರೆಗೆ ಮಾನವ ಸರಪಳಿ ನಿರ್ಮಿಸುವ ಮೂಲಕ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ.

ಕಾರವಾರ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸೆ. 15ರಂದು ಜಿಲ್ಲೆಯ ಹಳಿಯಾಳ ತಾಲೂಕಿನ ಮಾವಿನಕೊಪ್ಪದಿಂದ ಭಟ್ಕಳ ತಾಲೂಕಿನ ಶಿರೂರುವರೆಗೆ 260 ಕಿಮೀ ಉದ್ದದ ಮಾನವ ಸರಪಳಿ ರಚಿಸಲು ಅಗತ್ಯವಿರುವ ಎಲ್ಲ ಸಿದ್ದತೆಗಳನ್ನು ಕೈಗೊಳ್ಳುವಂತೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚಿಸಿದರು.

ಬುಧವಾರ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಪ್ರಯುಕ್ತ ಈ ಬಾರಿ ರಾಜ್ಯದಲ್ಲಿ ಬೀದರ್‌ನಿಂದ ಚಾಮರಾಜನಗರದವರೆಗೆ ಮಾನವ ಸರಪಳಿ ನಿರ್ಮಿಸುವ ಮೂಲಕ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಧಾರವಾಡ ಜಿಲ್ಲೆಯಲ್ಲಿ ನಿರ್ಮಿಸಲಾಗುವ ಮಾನವ ಸರಪಳಿಯನ್ನು ಜಿಲ್ಲೆಯ ಗಡಿ ತಾಲೂಕಾದ ಹಳಿಯಾಳದಿಂದ ಸೇರ್ಪಡೆ ಮಾಡಿಕೊಂಡು ಯಲ್ಲಾಪುರ, ಶಿರಸಿ, ಕುಮಟಾ, ಹೊನ್ನಾವರ ಮತ್ತು ಭಟ್ಕಳದ ಶಿರೂರುವರೆಗೆ ಜಿಲ್ಲೆಯ ಸಾರ್ವಜನಿಕರು, ಸಂಘ ಸಂಸ್ಥೆಗಳು, ಶಾಲಾ- ಕಾಲೇಜು ವಿದ್ಯಾರ್ಥಿಗಳು, ಎಲ್ಲ ಇಲಾಖೆಗಳ ನೌಕರರ ಮೂಲಕ 260 ಕಿಮೀ ದೂರದವರೆಗೆ ಮಾನವ ಸರಪಳಿ ರಚಿಸಲು ಸೂಕ್ತ ಯೋಜನೆ ರೂಪಿಸಿ, ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲೆಯಲ್ಲಿ ಈ ಮಾನವ ಸರಪಳಿ ರಚನೆ ಕಾರ್ಯಕ್ರಮಕ್ಕೆ ಪ್ರತಿ ಕಿಮೀ 500ರಿಂದ 600 ಜನ ಭಾಗವಹಿಸಬೇಕಾದ ಅಗತ್ಯತೆಯಿದ್ದು, ಒಟ್ಟು ಸುಮಾರು 1.5 ಲಕ್ಷ ಜನರನ್ನು ಈ ಕಾರ್ಯಕ್ರಮದಲ್ಲಿ ಭಾಗಿಗಳನ್ನಾಗಿ ಮಾಡಬೇಕಿರುವುದರಿಂದ, ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಪಿಡಿಒಗಳು ಮತ್ತು ಶಾಲಾ ಶಿಕ್ಷಣ ಇಲಾಖೆ ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಎಲ್ಲ ಕಾಲೇಜುಗಳ ಪ್ರಾಂಶುಪಾಲರ ಸಹಕಾರ ಪಡೆಯಬೇಕು. ಯಾವುದೇ ಹಂತದಲ್ಲೂ ಈ ಸರಪಳಿ ತುಂಡಾಗದಂತೆ ಎಚ್ಚರಿಕೆ ವಹಿಸುವಂತೆ ತಿಳಿಸಿದರು.

ಜಿಲ್ಲೆಯಲ್ಲಿನ ಎಲ್ಲ ಹಾಸ್ಟೆಲ್‌ಗಳ ವಿದ್ಯಾರ್ಥಿಗಳು ಕೂಡಾ ಈ ಸರಪಳಿಯಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು ಹಾಗೂ ಸರಪಳಿ ರಚನೆಗೆ ಜನಸಂಖ್ಯೆ ಕೊರತೆಯಾಗುವ ಪ್ರದೇಶಗಳಿಗೆ ಹೆಚ್ಚುವರಿ ಇರುವ ಪ್ರದೇಶಗಳಿಂದ ಸಾರಿಗೆ ವ್ಯವಸ್ಥೆ ಮೂಲಕ ತಲುಪಿಸುವ ಕಾರ್ಯ ಮಾಡಬೇಕು. ಈ ಕಾರ್ಯಕ್ರಮದ ಸಂಪೂರ್ಣ ಯಶಸ್ಸಿಗಾಗಿ ಸವಿವರವಾದ ಸೂಕ್ತ ಯೋಜನೆಯನ್ನು ತಯಾರಿಸಿ ಸಲ್ಲಿಸುವಂತೆ ಸೂಚಿಸಿದರು.ಪೊಲೀಸ್ ಇಲಾಖೆಯಿಂದ ಅಗತ್ಯ ಭದ್ರತೆ ಮತ್ತು ಸಂಚಾರ ಸುರಕ್ಷತೆ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲೆಯ ಎಲ್ಲ ನಗರಸ್ಥಳೀಯ ಸಂಸ್ಥೆಗಳು ಹಾಗೂ ಎಲ್ಲ ಇಲಾಖೆಗಳು ತಮ್ಮ ಸಂಪೂರ್ಣ ಸಹಕಾರ ನೀಡುವ ಮೂಲಕ ಜಿಲ್ಲೆಯಲ್ಲಿ ಅತ್ಯಂತ ಯಶಸ್ವಿ ಹಾಗೂ ಮಾದರಿಯಾಗಿ ಕಾರ್ಯಕ್ರಮ ಆಯೋಜನೆ ಮಾಡಲು ಪರಸ್ಪರ ಸಮನ್ವಯದಿಂದ ಕೆಲಸ ನಿರ್ವಹಿಸಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಉಮೇಶ್ ಹಾಗೂ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.