ಕೇಂದ್ರ ಸರ್ಕಾರದ ಆಯುಷ್ಮಾನ್ ಆರೋಗ್ಯ ಕ್ಷೇಮ ಯೋಜನೆಯಡಿ ಉಡುಪಿ ಜಿಲ್ಲೆಗೆ 29 ಆರೋಗ್ಯ ಕ್ಷೇಮ ಕೇಂದ್ರ ಮಂಜೂರಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಉಡುಪಿ: ಕೇಂದ್ರ ಸರ್ಕಾರದ ಆಯುಷ್ಮಾನ್ ಆರೋಗ್ಯ ಕ್ಷೇಮ ಯೋಜನೆಯಡಿ ಉಡುಪಿ ಜಿಲ್ಲೆಗೆ 29 ಆರೋಗ್ಯ ಕ್ಷೇಮ ಕೇಂದ್ರ ಮಂಜೂರಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಕೇಂದ್ರ ಸರ್ಕಾರದ 15ನೇ ಹಣಕಾಸು ಯೋಜನೆಯಲ್ಲಿ ಉಡುಪಿ ಜಿಲ್ಲೆಗೆ 34.50 ಕೋಟಿ ರು. ಮಂಜೂರಾಗಿದ್ದು, ಅದರಲ್ಲಿ ಈ ಕೇಂದ್ರಗಳ ಕಟ್ಟಡಗಳನ್ನು ನಿರ್ಮಿಸಲಾಗುತ್ತದೆ. ಪ್ರತಿ ಕೇಂದ್ರಗಳ ಕಟ್ಟಡ ನಿರ್ಮಾಣಕ್ಕೆ ತಲಾ 65 ಲಕ್ಷ ರು. ಅನುದಾನ ಲಭ್ಯವಿದೆ. ಅದರಂತೆ 3 ಕೇಂದ್ರಗಳ ಕಟ್ಟಡಗಳು ಪೂರ್ಣಗೊಂಡು ಈಗಾಗಲೇ ಕಾರ್ಯಾರಂಭಿಸಿವೆ. 2 ಕೇಂದ್ರಗಳ ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದು, ಸದ್ಯದಲ್ಲೇ ಕಾರ್ಯಾರಂಭಿಸಲಿದೆ. 17 ಕೇಂದ್ರಗಳ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದೆ ಮತ್ತು 7 ಕೇಂದ್ರಗಳ ಕಾಮಗಾರಿಗಳನ್ನು ಆರಂಭಿಸಲು ದಿನಾಂಕ ನಿಗದಿಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಯುಷ್ಮಾನ್ ಆರೋಗ್ಯ ಕೇಂದ್ರಗಳ ಕಟ್ಟಡಗಳನ್ನು ಹೆಚ್ಚು ಜನವಸತಿ ಮತ್ತು ಬಡವರು ವಾಸವಾಗಿರುವ ಸ್ಥಳವನ್ನು ಗುರುತಿಸಿ ನಿರ್ಮಿಸಲು ಕೇಂದ್ರ ಸರ್ಕಾರ ಮಾನದಂಡ ವಿಧಿಸಿದ್ದು, ಆದಷ್ಟು ಶೀಘ್ರ ಕಾಮಗಾರಿ ಪೂರ್ಣಗೊಳಿಸಿ, ಕೇಂದ್ರಗಳನ್ನು ಸಾರ್ವಜನಿಕ ಸೇವೆಗೆ ಒದಗಿಸಬೇಕು ಎಂದು ಇಲಾಖಾಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ ತಿಳಿಸಿದ್ದಾರೆ.