ಮಹದೇಶ್ವರ ಬೆಟ್ಟದಲ್ಲಿ 3.04 ಕೋಟಿ ರು. ಸಂಗ್ರಹ

| Published : May 01 2024, 01:22 AM IST

ಸಾರಾಂಶ

ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 34 ದಿನಗಳ ಅವಧಿಯಲ್ಲಿ 3.04 ಕೋಟಿ ರು. ದಾಖಲೆಯ ಮೊತ್ತ ಸಂಗ್ರಹವಾಗಿದೆ.

ಕನ್ನಡಪ್ರಭ ವಾರ್ತೆ ಹನೂರು

ತಾಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 34 ದಿನಗಳ ಅವಧಿಯಲ್ಲಿ 3.04 ಕೋಟಿ ರು. ದಾಖಲೆಯ ಮೊತ್ತ ಸಂಗ್ರಹವಾಗಿದೆ.

ಮ.ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸೋಮವಾರ ಬೆಳಗ್ಗೆ 8 ಗಂಟೆಯಲ್ಲಿ ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಎಣಿಕೆ ಕಾರ್ಯವು ರಾತ್ರಿ 11.30 ಗಂಟೆಯವರೆಗೂ ನಿರಂತರವಾಗಿ ನಡೆಯಿತು.

ಈ ಬಾರಿ ಯುಗಾದಿ ಜಾತ್ರಾ ಮಹೋತ್ಸವ, ಸರ್ಕಾರಿ ರಜಾ ದಿನಗಳು ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ರಾಜ್ಯದ ನಾನಾ ಭಾಗಗಳಿಂದ ಹಾಗೂ ತಮಿಳುನಾಡಿನಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ ಹಣ ಚಿನ್ನ ಹಾಗೂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಸಮರ್ಪಿಸಿದ್ದಾರೆ.

ದಾಖಲೆಯ ಮೊತ್ತ: ಹುಂಡಿಗಳ ಎಣಿಕೆಯಲ್ಲಿ ಈ ಬಾರಿ 3,04,57,246 ರು. ಸಂಗ್ರಹವಾಗಿದೆ. ಚಿನ್ನ 115 ಗ್ರಾಂ ಮತ್ತು ಬೆಳ್ಳಿ 2 ಕೆಜಿ 964 ಗ್ರಾಂ ಸಂಗ್ರಹವಾಗಿದೆ.

ವಿದೇಶಿ ಕರೆನ್ಸಿ: ಸಿಂಗಾಪುರ ದೇಶದ 52 ಡಾಲರ್ , 27 ವಿದೇಶಿ ನೋಟುಗಳು, ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 22 ನೋಟುಗಳನ್ನು ಭಕ್ತಾದಿಗಳು ಗುಂಡಿಯಲ್ಲಿ ಹಾಕಿದ್ದಾರೆ. ಇ ಹುಂಡಿಯಲ್ಲಿ 3,53,441 ಸಂಗ್ರಹವಾಗಿದೆ. ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಲೆಕ್ಕ ಅಧೀಕ್ಷಕ ನಾಗೇಶ್, ಬ್ಯಾಂಕ್ ಆಫ್ ಬರೋಡ ನೌಕರರು ಹಾಗೂ ಪ್ರಾಧಿಕಾರದ ಸಿಬ್ಬಂದಿ ಹುಂಡಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.