ಚನ್ನಪಟ್ಟಣ: ಭಾನುವಾರ ಬೆಳ್ಳಂಬೆಳಗ್ಗೆ ಕೆರೆಯಲ್ಲಿ ಮೂರು ಕಾಡಾನೆಗಳು ಪ್ರತ್ಯಕ್ಷಗೊಂಡು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿರುವ ಘಟನೆ ತಾಲೂಕಿನ ಬ್ರಹ್ಮಣೀಪುರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಹೊರವಲಯದಲ್ಲಿರುವ ಕೆರೆಯಲ್ಲಿ ೩ ಕಾಡಾನೆಗಳು ಬೀಡುಬಿಟ್ಟಿವೆ. ಶನಿವಾರ ರಾತ್ರಿಯಿಡೀ ಕೆರೆ ಅಕ್ಕಪಕ್ಕದ ಜಮೀನುಗಳಲ್ಲಿ ಬೆಳೆ ತಿಂದು ನಾಶಪಡಿಸಿರುವ ಆನೆಗಳು ಭಾನುವಾರ ಕೆರೆಯ ಬಳಿ ಬೀಡುಬಿಟ್ಟಿವೆ.

ಆನೆಗಳು ಕೆರೆಯಲ್ಲಿ ಬೀಡುಬಿಟ್ಟಿರುವ ವಿಚಾರ ತಿಳಿದು ಅಕ್ಕಪಕ್ಕದ ಗ್ರಾಮಗಳ ಗ್ರಾಮಸ್ಥರು ಆನೆಗಳನ್ನು ನೋಡಲು ಜಮಾಯಿಸಿದ್ದರು. ಈ ವೇಳೆ ಕೆಲವು ಆನೆ ಕರೆಯಲ್ಲಿ ಜಲಕ್ರೀಡೆಯಲ್ಲಿ ತೊಡಗಿರುವ ದೃಶ್ಯವನ್ನು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂಜೆ ಬಳಿಕ ಕಾಡಾನೆಗಳನ್ನು ವಾಪಸ್ ಕಾಡಿಗಟ್ಟಲು ಸಿದ್ಧತೆ ನಡೆಸಿದ್ದಾರೆ.

ಪೊಟೋ೨೨ಸಿಪಿಟಿ೩: ಚನ್ನಪಟ್ಟಣ ತಾಲೂಕಿನ ಬ್ರಹ್ಮಣೀಪುರ ಗ್ರಾಮದ ಹೊರವಲಯದ ಕೆರೆಯಲ್ಲಿ ಆನೆಗಳು ಬೀಡು ಬಿಟ್ಟಿರುವುದು.