ಹನೂರು: ತಾಲೂಕಿನ ಗಡಿಭಾಗದ ಕಾವೇರಿ ವನ್ಯಧಾಮ ವ್ಯಾಪ್ತಿಯ ಗೋಪಿನಾಥ ಅರಣ್ಯ ಪ್ರದೇಶದಲ್ಲಿ ಸುಮಾರು 3 ವರ್ಷದ ಚಿರತೆ ಸಾವನ್ನಪ್ಪಿದೆ. ಕೊಕ್ಕರೆಹಳ್ಳ ಗಸ್ತಿನಲ್ಲಿ ಕರ್ತವ್ಯದಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿಗೆ ಚಿರತೆ ಸಾವನ್ನಪ್ಪಿರುವ ಬಗ್ಗೆ ಮಾಹಿತಿ ತಿಳಿದ ತಕ್ಷಣ ವಲಯ ಅರಣ್ಯ ಅಧಿಕಾರಿ ವಾಗೇಶ್ ನೇತೃತ್ವದ ತಂಡ ಸ್ಥಳಕ್ಕೆ ಧಾವಿಸಿತು. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಮೃತ ಚಿರತೆಯ ದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ನಂತರ ವಿಧಿವಿಧಾನಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಮೇಲ್ನೋಟಕ್ಕೆ ಮತ್ತೊಂದು ಚಿರತೆಯೊಂದಿಗೆ ನಡೆದ ಕಾದಾಟದ ವೇಳೆ ಗಂಭೀರವಾಗಿ ಗಾಯಗೊಂಡಿದ್ದೇ ಚಿರತೆ ಸಾವಿಗೆ ಕಾರಣವಾಗಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.