ಕನ್ನಡಪ್ರಭ ವಾರ್ತೆ, ಬೆಂಗಳೂರುಹಿಂದುಳಿದ ವರ್ಗದ ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ 2026-27ನೇ ಸಾಲಿನ ಬಜೆಟ್‌ನಲ್ಲಿ ಕನಿಷ್ಠ 10 ಸಾವಿರ ಕೋಟಿ ರು. ಅನುದಾನ ಮೀಸಲಿಡಬೇಕು, ಈ ಸಮುದಾಯಗಳಿಗೆ ಇರುವ ಮೀಸಲಾತಿ ಪ್ರಮಾಣವನ್ನು ಶೇ.50ಕ್ಕೆ ಹೆಚ್ಚಿಸಬೇಕು ಎಂಬುದು ಸೇರಿದಂತೆ 38 ಬೇಡಿಕೆಗಳನ್ನು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ.ಇಲಾಖಾವಾರು ಸಭೆಗಳ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ವಿಧಾನಸೌಧದಲ್ಲಿ ಹಿಂದುಳಿದ ವರ್ಗಗಳ ಸಂಘ ಸಂಸ್ಥೆಗಳು ಹಾಗೂ ಮುಖಂಡರೊಂದಿಗೆ ಬಜೆಟ್‌ ಪೂರ್ವಭಾವಿ ಸಭೆ ನಡೆಸಿ ಅವರ ಬೇಡಿಕೆಗಳನ್ನು ಆಲಿಸಿದರು. ಈ ವೇಳೆ ಒಕ್ಕೂಟದ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ ಅವರ ನೇತೃತ್ವದಲ್ಲಿ 300ಕ್ಕೂ ಹೆಚ್ಚು ಮುಖಂಡರುಗಳು ಮುಖ್ಯಮಂತ್ರಿ ಅವರೊಂದಿಗೆ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಮುಂಬರುವ ಬಜೆಟ್‌ನಲ್ಲಿ ಘೋಷಿಸಬೇಕಾದ ಅನುದಾನ, ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿ ವಿವರವಾದ ಮನವಿ ಸಲ್ಲಿಸಿದರು.

ಪ್ರಮುಖವಾಗಿ ಬಜೆಟ್‌ನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಜನಸಂಖ್ಯೆಗೆ ಅನುಗುಣವಾಗಿ ಕನಿಷ್ಠ 10 ಸಾವಿರ ಕೋಟಿ ರು. ಅನುದಾನ ನೀಡಬೇಕು. ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ ರಚಿಸಿರುವ ಮಧುಸೂದನ ನಾಯಕ್‌ ಅವರ ಅಧ್ಯಕ್ಷತೆಯ ಆಯೋಗದಿಂದ ಕೂಡಲೇ ವರದಿ ಪಡೆದು ಹಿಂದುಳಿದ ವರ್ಗದವರಿಗೆ ಪ್ರಸ್ತುತ ಇರುವ ಶೇ.32ರ ಮೀಸಲಾತಿ ಪ್ರಮಾಣವನ್ನು ಶೇ.50ಕ್ಕೆ ಹೆಚ್ಚಿಸಬೇಕು. ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ನೀಡುತ್ತಿರುವ ಎಸ್ಸಿಎಸ್‌ಪಿ/ಟಿಎಸ್‌ಪಿ ಮೀಸಲಾತಿಯಂತೆ ಹಿಂದುಳಿದ ವರ್ಗಗಳ ಪ್ರವರ್ಗ 1 ಮತ್ತು ಪ್ರವರ್ಗ 2ಎಗೆ ಪ್ರತ್ಯೇಕ ಮೀಸಲಾತಿಯನ್ನು ಆಯವ್ಯಯದಲ್ಲಿ ನೀಡಬೇಕು ಎಂದು ಕೋರಿದ್ದಾರೆ.ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮಕ್ಕೆ ಕನಿಷ್ಠ 1 ಸಾವಿರ ಕೋಟಿ ರು., ಇತರೆ ನಿಗಮಗಳಿಗೆ ಕನಿಷ್ಠ ತಲಾ 500 ಕೋಟಿ ರು. ಅನುದಾನ ನೀಡಬೇಕು. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಮುಂದಿನ ಬಜೆಟ್‌ನಲ್ಲಿ ಇನ್ನೂ 25 ಶಾಲೆಗಳನ್ನು ಘೋಷಿಸಬೇಕು. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಸಾಲ ಪಡೆದ ಫಲಾನುಭವಿಗಳಿಗೆ ಬಡ್ಡಿಯನ್ನು ಒನ್‌ ಟೈಮ್‌ ಸೆಟ್ಲ್ ಮೆಂಟ್‌ ಅಡಿ ಮನ್ನಾ ಮಾಡಿರುವಂತೆ ಹಿಂದುಳಿದ ವರ್ಗಗಳಿಗೆ ಸೇರಿದ ಎಲ್ಲಾ ನಿಗಮಗಳಿಂದ ನೀಡಿರುವ ಸಾಲದ ಮೇಲಿನ ಬಡ್ಡಿಯನ್ನೂ ಮನ್ನಾ ಮಾಡಬೇಕು. ದೇವರಾಜ ಅರಸು ನಿಗಮದಿಂದ 2022ರಿಂದ ನಿಲ್ಲಿಸಲಾಗಿರುವ ಮೆಟ್ರಿಕ್‌ ಪೂರ್ವ ತರಗತಿ ಮಕ್ಕಳ ವಿದ್ಯಾರ್ಥಿವೇತನವನ್ನು ಪುನಾರಂಭಿಸಬೇಕು. ಹಿಂದುಳಿದ ವರ್ಗಗಳ ಜಾಗೃತಿಗಾಗಿ ಸಂಘಕ್ಕೆ 5 ಕೋಟಿ ರು. ಅನುದಾನ, ಸಂಘದ ಕಚೇರಿಗೆ ನಿವೇಶನ ನೀಡುವಂತೆಯೂ ಕೋರಲಾಗಿದೆ.ಸಭೆಯಲ್ಲಿ ವಿಧಾನ ಪರಿಷತ್‌ ಸದಸ್ಯರಾದ ನಾಗರಾಜ್‌ ಯಾದವ್‌, ರಮೇಶ್‌ ಬಾಬು, ಆರ್ಥಿಕ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.