ಸಾರಾಂಶ
ಶಿವಮೊಗ್ಗ : ಶಿವಮೊಗ್ಗದ ಪ್ರತಿಷ್ಠಿತ ಖಾಸಗಿ ಶಾಲೆಯೊಂದರಲ್ಲಿ 3ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮಗುವೊಂದು ಶುಲ್ಕ ಕಟ್ಟಿಲ್ಲ ಎಂಬ ಕಾರಣಕ್ಕೆ ಜಾತಿ ನಿಂದನೆ ಮಾಡಿ ಮಗುವಿನ ಮುಂದಲೆಯ ಕೂದಲನ್ನು ಕತ್ತರಿಸಲಾಗಿದೆ ಎಂದು ಚಿತ್ರದುರ್ಗ ಛಲವಾದಿ ಪೀಠದ ಬಸವನಾಗಿದೇವ ಸ್ವಾಮೀಜಿ ಆರೋಪಿಸಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಾಕಿ ಶುಲ್ಕ ₹5000 ಕಟ್ಟಿಲ್ಲ ಎಂಬ ಕಾರಣಕ್ಕಾಗಿ ಪರೀಕ್ಷೆ ಬರೆಯುವುದಕ್ಕೂ ಅವಕಾಶ ನೀಡದೆ ಮಗುವಿನ ಭವಿಷ್ಯವನ್ನು ಖಾಸಗಿ ಶಾಲೆ ಹಾಳು ಮಾಡಿದೆ.
ಅಲ್ಲದೇ ಮಗುವಿನ ಮೇಲೆ ಹಲ್ಲೆ ಮಾಡಿ ಜಾತಿ ನಿಂದನೆ ಮಾಡಿರುವುದು ನಾಗರೀಕ ಸಮಾಜ ತಲೆ ತಗ್ಗಿಸುವಂತಹದ್ದು, ಈಗಾಗಲೇ ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗದೆ. ಇಲಾಖೆಯ ಅಧಿಕಾರಿಗಳಿಗೂ ತಿಳಿಸಲಾಗಿದೆ. ಆದರೆ, ತನಿಖೆಯಲ್ಲಿ ಅಧಿಕಾರಿಗಳು ಸಾಕ್ಷಿ ನಾಶ ಮಾಡುವ ಮೂಲಕ ಇಡೀ ಪ್ರಕರಣವನ್ನು ಮುಚ್ಚಿ ಹಾಕುವ ಸಂಚು ನಡೆದಿದೆ ಎಂದು ಸ್ವಾಮೀಜಿ ತಿಳಿಸಿದರು.
ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳದಿದ್ದರೆ ಸಾಮಾಜಿಕ ನ್ಯಾಯಕ್ಕಾಗಿ ಛಲವಾದಿ ಮಹಾಸಭಾ ರಾಜ್ಯಾದಾದ್ಯಂತ ಹೋರಾಟ ಮುಂದುವರೆಸುತ್ತದೆ ಎಂದು ಎಚ್ಚರಿಸಿದ್ದಾರೆ.