ಉಡುಪಿ: ದೇಶದಲ್ಲಿ ಗೋಹತ್ಯೆಯನ್ನು ಸಂಪೂರ್ಣವಾಗಿ ನಿಲ್ಲಿಸಬೇಕೆನ್ನುವ ಹಕ್ಕೊತ್ತಾಯ ನಡೆಸಲು ಗೋಮಾತೆಯ ಗೌರವದ ಅಭಿಯಾನವನ್ನು ಹಮ್ಮಿಕೊಂಡಿದ್ದು, ಈ ಪ್ರಯುಕ್ತ ಏ. 27ರಂದು ಉಡುಪಿ ಜಿಲ್ಲೆಯ ತಹಸೀಲ್ದಾರರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿಗಳನ್ನು ಸಲ್ಲಿಸಲಾಗುವುದು ಎಂದು ಶಂಕರಪುರ ಕ್ಷೇತ್ರದ ಶ್ರೀ ಸಾಯಿ ಈಶ್ವರ್ ಗುರೂಜಿ ತಿಳಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಗೋಹತ್ಯೆ ವಿರುದ್ಧ ರಾಜ್ಯ ಹಾಗೂ ಕೇಂದ್ರ ಸರ್ಕಾರವನ್ನು ಎಚ್ಚರಿಸುವ ಉದ್ದೇಶದಿಂದ ಈ ಅಭಿಯಾನ ನಡೆಸಲಾಗುತ್ತಿದೆ, ಒಟ್ಟು ನಾಲ್ಕು ಹಂತದಲ್ಲಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಜುಲೈನಲ್ಲಿ ಜಿಲ್ಲಾ ಮಟ್ಟ, ಅಕ್ಟೋಬರ್‌ನಲ್ಲಿ ರಾಜ್ಯ ಮಟ್ಟದಲ್ಲಿ ಹಾಗು ಡಿಸೆಂಬರ್‌ನಲ್ಲಿ ಕೇಂದ್ರ ಮಟ್ಟದಲ್ಲಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ಹಾಗೂ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಗುವುದು. ಇದಕ್ಕೆ ಸರ್ಕಾರ ಸೂಕ್ತವಾಗಿ ಸ್ಪಂಧಿಸದಿದ್ದರೆ ಸಾಧು ಸಂತರು ಉಪವಾಸ ಸತ್ಯಾಗ್ರಹವನ್ನು ಆರಂಭಿಸಲಿದ್ದಾರೆ ಎಂದರು. ಈ ಅಭಿಯಾನದ ಸಂಚಾಲಕ ವಿಜಯ ಕೊಡವೂರು ಮಾತನಾಡಿ, ಈಗಿನ ಕಾಲದಲ್ಲಿ ಗೋವುಗಳು ರಸ್ತೆ ಬದಿಯಲ್ಲಿ ಕಸವನ್ನು ತಿಂದು ಅಸು ನೀಗುತ್ತಿವೆ. ಬೀಡಾಡಿ ದನಗಳು ಕಟುಕರ ಪಾಲಾಗುತ್ತಿವೆ. ಇದನ್ನು ಮನಗಂಡು ತಾಲೂಕು ಮಟ್ಟದಲ್ಲಿ ಅಭಿಯಾನ ಆರಂಭಿಸಲಾಗಿದೆ. ಗೋವಿನ ವಧೆ ನಿಲ್ಲಬೇಕು. ಗೋವಿಗೆ ರಾಷ್ಟ್ರೀಯ ಸ್ಥಾನಮಾನ ಸಿಗಬೇಕು ಎನ್ನುವ ಉದ್ದೇಶದಿಂದ ಅಭಿಯಾನವನ್ನು ಹಮ್ಮಿಕೊಂಡಿದ್ದೇವೆ. ಗೋವು ವಧೆ ಸರ್ಕಾರದ ಮೂಲಕವೇ ನಿಲ್ಲಬೇಕು. ಇದಕ್ಕಾಗಿ ಸೂಕ್ತ ಕಾನೂನು ತರಬೇಕು. ಅಲ್ಲದೆ ಸಮಾಜ ಜಾಗೃತ ಆಗಬೇಕು ಎನ್ನುವ ಉದ್ದೇಶದಿಂದ ಅಭಿಯಾನವನ್ನು ಆರಂಭಿಸಲಾಗಿದೆ ಎಂದರು. ಸುದ್ದಿಗೋಷ್ಟಿಯಲ್ಲಿ ಪ್ರಮುಖರಾದ ರಾಘವೇಂದ್ರ ಪ್ರಭು ಕರ್ವಾಲು, ಗಜೇಂದ್ರ ಎಸ್. ಬೇಲೆಮನೆ ಹಾಗೂ ನಾಗರಾಜ್ ಬೈಂದೂರು ಉಪಸ್ಥಿತರಿದ್ದರು.